ಕನ್ನಡಪ್ರಭ ವಾರ್ತೆ ಬೆಳಗಾವಿ ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರ ಹೆಚ್ಚಿಸಿರುವುದನ್ನು ಖಂಡಿಸಿ ನಗರದ ಕಾಂಗ್ರೆಸ್ ಭವನದ ಎದುರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ದರ ಹೆಚ್ಚಿಸಿರುವುದನ್ನು ಖಂಡಿಸಿ ನಗರದ ಕಾಂಗ್ರೆಸ್ ಭವನದ ಎದುರು ಜಿಲ್ಲಾ ಮಹಿಳಾ ಕಾಂಗ್ರೆಸ್‌ನಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಕೇಂದ್ರ ಸರ್ಕಾರ ಯುದ್ಧದ ನೆಪವೊಡ್ಡಿ ರಾತ್ರೋರಾತ್ರಿ ಅಡುಗೆ ಅನಿಲ ಸಿಲಿಂಡರ್ ದರವನ್ನು ಹೆಚ್ಚಿಸಿರುವುದು ಸರಿಯಲ್ಲ. ಕೂಡಲೇ ಗ್ಯಾಸ್ ದರ ಇಳಿಕೆ ಮಾಡಬೇಕು ಎಂದು ಆಗ್ರಹಿಸಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಖಾಲಿ ಸಿಲಿಂಡರ್ ಹೊತ್ತು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ದುಬಾರಿ ಬೆಲೆಯಿಂದ ಸಂಕಷ್ಟದಲ್ಲಿರುವ ಸಾಮಾನ್ಯ ಜನತೆಗೆ ಬೆಲೆ ಏರಿಕೆ ದೊಡ್ಡ ಹೊಡೆತವಾಗಿದೆ. ಸಬ್ಸಿಡಿ ವ್ಯವಸ್ಥೆಯನ್ನು ಕ್ರಮೇಣ ಕಡಿಮೆ ಮಾಡುವ ಮೂಲಕ ಬಡ ಮತ್ತು ಮಧ್ಯಮ ವರ್ಗದ ಜನರ ಮೇಲೆ ಸರ್ಕಾರ ಆರ್ಥಿಕ ಹೊರೆ ಹಾಕಿರುವುದು ಖಂಡನೀಯ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ನೀಡಿರುವ ಹೇಳಿಕೆಗಳು ಹಾಗೂ ಜಾಗತಿಕ ರಾಜಕೀಯ ಬೆಳವಣಿಗೆಗಳ ನಡುವೆ ಭಾರತದ ಹಿತಾಸಕ್ತಿಯನ್ನು ದೃಢವಾಗಿ ರಕ್ಷಿಸುವ ಬದಲು ಕೇಂದ್ರ ಸರ್ಕಾರ ಮೌನ ವಹಿಸಿರುವುದು ದೇಶದ ಗೌರವಕ್ಕೆ ಧಕ್ಕೆ ತಂದಿದೆ ಎಂದರು.

ಈ ವೇಳೆ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರದೀಪ.ಎಂ.ಜೆ, ಪಾಲಿಕೆ ಮಾಜಿ ಸದಸ್ಯೆ ಜಯಶ್ರಿ ಮಾಳಗಿ ಸೇರಿದಂತೆ ಅನೇಕರು ಇದ್ದರು.