ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿದ್ದು, ಜಿರಾಮ್ಜಿ ಯೋಜನೆ ಜಾರಿ ಮಾಡುತ್ತಿದೆ.
ಹೊಸಪೇಟೆ: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯನ್ನು ಬದಲಿಸಿದ್ದು, ಜಿರಾಮ್ಜಿ ಯೋಜನೆ ಜಾರಿ ಮಾಡುತ್ತಿದೆ. ಇದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಲಿದ್ದು, ವಿಶೇಷ ಅಧಿವೇಶನ ಕರೆದು ಕೂಡ ಚರ್ಚಿಸಲಾಗುವುದು. ಜೊತೆಗೆ ಹೋರಾಟ ನಡೆಸಲಾಗುವುದು ಎಂದು ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಯೋಜನೆಯನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಗ್ರಾಮೀಣ ಪ್ರದೇಶಗಳ ಉದ್ಧಾರಕ್ಕಾಗಿ ಜಾರಿ ಮಾಡಿತ್ತು. ಈಗ ಹೆಸರು ಬದಲಾವಣೆ ಮಾಡಿದ್ದಾರೆ. ಮುಂದೆ, ₹500 ನೋಟಿನಲ್ಲೂ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಹೆಸರು ತೆಗೆಯಬಹುದು. ಮುಂದಿನ ದಿನಗಳಲ್ಲಿ ಕೇಂದ್ರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗುವ ಚಿಂತನೆ ಇದೆ ಎಂದರು.ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿರಾಜ್ ಶೇಕ್ ಮಾತನಾಡಿ, ಕೇಂದ್ರ ಸರ್ಕಾರ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬದಲಾವಣೆ ಮಾಡಿದಲ್ಲದೇ, ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಿದೆ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಆರ್ಥಿಕ ಹೊರೆ ಹೊರೆಸುತ್ತಿದೆ ಎಂದರು.
ಶಾಸಕರಾದ ಎಂ.ಪಿ. ಲತಾ, ಜೆ.ಎನ್. ಗಣೇಶ, ಭರತ್ ರೆಡ್ಡಿ, ಹುಡಾ ಅಧ್ಯಕ್ಷ ಎಚ್ಎನ್ಎಫ್ ಇಮಾಮ್, ಮುಖಂಡರಾದ ಕೆ.ಎಂ. ಹಾಲಪ್ಪ, ವಿನಾಯಕ ಶೆಟ್ಟರ್ ಮತ್ತಿತರರಿದ್ದರು.ಹೊಸಪೇಟೆಯಲ್ಲಿ ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.