ಸಾರಾಂಶ
ಮುಂಡಗೋಡ: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ನೀಡುವ ಜತೆಗೆ ಪ್ರತಿಯೊಂದು ಜಾತಿ, ಧರ್ಮ, ಬಡವ, ಕೂಲಿ ಕಾರ್ಮಿಕರನ್ನು ಸಮಾನವಾಗಿ ನೋಡುತ್ತದೆ ಎಂದು ರಾಜ್ಯ ಸರ್ಕಾರದ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.ಮಂಗಳವಾರ ಪಟ್ಟಣದ ಗಣಪತಿ ದೇವಾಲಯ ಜಿಎಸ್ಬಿ ಸಭಾಂಗಣದಲ್ಲಿ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಅವರ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ತನ್ನಷ್ಟಕ್ಕೆ ತಾನು ಬಡವರ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿ ಕಳೆದ ೧೦ ವರ್ಷದಿಂದ ಬೆಲೆ ಏರಿಕೆ, ನಿರುದ್ಯೋಗ ಮತ್ತು ಬಡತನವನ್ನು ಮತ್ತಷ್ಟು ಉತ್ತುಂಗಕ್ಕೇರಿಸಿದ್ದು, ದೇಶದ ಜನತೆ ತತ್ತರಿಸುವಂತೆ ಮಾಡಿದೆ. ಬಿಜೆಪಿಯಲ್ಲಿ ಸಾಮಾಜಿಕ ನ್ಯಾಯವೇ ಇಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪಡೆ ದೊಡ್ಡದಿದೆ. ಇಲ್ಲಿ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡದೆ ಈಗಿನಿಂದಲೇ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡಿ ಎಂದ ಅವರು, ಕಾಂಗ್ರೆಸ್ ಯಾರೊಬ್ಬರ ಮನೆ ಪಕ್ಷವಲ್ಲ. ಇದು ಕಾರ್ಯಕರ್ತರ ಪಕ್ಷ. ಪ್ರತಿಯೊಬ್ಬರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿದು ಪಕ್ಷ ಸಂಘಟನೆ ಮಾಡುವಂತೆ ನೂತನ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಅವರಿಗೆ ಸಲಹೆ ನೀಡಿದರು.ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಅಧಿಕಾರ ಸ್ವೀಕರಿಸಿ ಮಾತನಾಡಿ, ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಿದರೆ ಮಾತ್ರ ಸಮಾಜ ನಮ್ಮನ್ನು ಗೌರವಿಸುತ್ತದೆ. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸುವ ಕಲಸ ಮಾಡುವುದಾಗಿ ಹೇಳಿದರು.ಮಾಜಿ ಶಾಸಕ ವಿ.ಎಸ್. ಪಾಟೀಲ, ಕೆಪಿಸಿಸಿ ಸದಸ್ಯ ವಿವೇಕ ಹೆಬ್ಬಾರ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಾಯಿ ಗಾಂವಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಎನ್. ದುಂಡಸಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಜಾತಾ ಗಾಂವಕರ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಶೇಖರ ಹಿರೇಮಠ, ನಾಗರಾಜ ನಾರ್ವೇಕರ, ಎಚ್.ಎಂ. ನಾಯ್ಕ, ಶಾರದಾ ರಾಥೋಡ, ಜಮೀರಅಹ್ಮದ ಧರ್ಗಾವಾಲೆ, ಬಸವರಾಜ ಸಂಗಮೇಶ್ವರ, ರಾಮಕೃಷ್ಣ ಮೂಲಿಮನಿ, ರಫೀಕ್ ಇನಾಮದಾರ, ಮುನಾಫ್ ಮಿರ್ಜಾನಕರ, ಮಂಜುನಾಥ ಕಟಗಿ ಮುಂತಾದವರು ಉಪಸ್ಥಿತರಿದ್ದರು. ಧರ್ಮರಾಜ ನಡಗೇರ ನಿರೂಪಿಸಿದರು.