ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಂತಾಗಿದ್ದು ಕಾಂಗ್ರೆಸ್ ಸರ್ವಧರ್ಮಗಳು ಹಾಗೂ ಜಾತಿಗಳನ್ನು ಒಂದು ಗೂಡಿಸುವ ಕೆಲಸ ಮಾಡುತ್ತಿದೆ. ಇದೇ ಕಾರಣದಿಂದಲೇ ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ 2 ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಅಭಿಪ್ರಾಯಪಟ್ಟರು.
ನಗರದ ಹನುಮಂತಪ್ಪ ವೃತ್ತದಲ್ಲಿ ರಾಜ್ಯದಲ್ಲಿ ನಡೆದ ಉಪಚುನಾವಣೆ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸೋಮವಾರ ನಡೆದ ಸಂಭ್ರಮಾಚರಣೆಯಲ್ಲಿ ಮಾತನಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ತಂದೆ ಯಡಿಯೂರಪ್ಪ ಹೆಸರಿನಲ್ಲೇ ರಾಜಕಾರಣ ಮಾಡುತ್ತಿದ್ದಾರೆ. ಇನ್ನು ಬಸವನಗೌಡ ಪಾಟೀಲ್ ಸೇರಿದಂತೆ ಹಲವರು ಒಗ್ಗಟ್ಟಿನ ಕೊರತೆಯಿಂದ ಪಕ್ಷ ತ್ಯಜಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಒಡೆದ ಮನೆಯಾಗಿದೆ ಎಂದು ಲೇವಡಿ ಮಾಡಿದರು.ಕರ್ನಾಟಕದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆ ಘೋಷಿಸಿದಾಗ ಬಿಜೆಪಿ ಕಟುವಾಗಿ ಟೀಕಿಸಿತ್ತು. ಆದರೆ ಇದೇ ಬಿಜೆಪಿ ಪಂಚ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಂಚ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ ಚುನಾವಣೆ ನಡೆಸಿದೆ. ಈ ಮೂಲಕ ಮೂರು ರಾಜ್ಯಗಳಲ್ಲಿ ವಾಮ ಮಾರ್ಗದ ಮೂಲಕ ಗೆಲುವು ಸಾಧಿಸಿದೆ ಎಂದು ಕಿಡಿಕಾರಿದರು.
ವಿಜಯೋತ್ಸವದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಿದರು. ಈ ವೇಳೆ ಮುಖಂಡರಾದ ಬೆಟ್ಟಗೆರೆ ಪ್ರವೀಣ್, ಸಿ.ಎನ್.ಅಕ್ಮಲ್, ಲಕ್ಷ್ಮಣ್, ಪರಮೇಶ್ವರ್ ರಾಜ್ ಅರಸ್, ಎಚ್.ಎಸ್.ಶಿವಕುಮಾರ್, ಪ್ರಸಾದ್ ಅಮೀನ್, ಎನ್.ಎಂ.ನಾಗೇಶ್, ರಾಜೇಶ್ ಥಾಯಿರ್ ಮತ್ತಿತರರಿದ್ದರು.
-- ಕೋಟ್ --ರಾಜ್ಯದ ಎರಡು ಕ್ಷೇತ್ರದ ಉಪ ಚುನಾವಣೆ ಫಲಿತಾಂಶವು ಮುಂಬರಲಿರುವ 2028ನೇ ಸಾಲಿನ ವಿಧಾನಸಭಾ ಚುನಾವಣೆ ಫಲಿತಾಂಶದ ದಿಕ್ಸೂಚಿಯಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಏನೇ ಕುತಂತ್ರ ನಡೆಸಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಬಿಜೆಪಿಗೆ ಯಾವುದೇ ನೈತಿಕ ಸಿದ್ಧಾಂತವಿಲ್ಲ. ಜನಪರ ಆಲೋಚನೆಯಂತೆ ಮೊದಲೇ ಇಲ್ಲ. ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಟೀಕೆ ಮಾಡುವುದೇ ಬಿಜೆಪಿ ಕೆಲಸ. ಇದಕ್ಕೆ ಕರ್ನಾಟಕದ ಜನ ತಕ್ಕ ಪಾಠ ಕಲಿಸಿದ್ದಾರೆ.-ಎಚ್.ಪಿ.ಮಂಜೇಗೌಡ, ಅಧ್ಯಕ್ಷ, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ