ಡಿ.ಕೆ. ಶಿವಕುಮಾರ್ ಅವರು ಸಂಘಟನಾ ಚತುರ ನಾಯಕರು, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯಾದ್ಯಂತ ಸುತ್ತಾಡಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದವರು. ಅವರ ಪರಿಶ್ರಮದಿಂದ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಅವರಿಗೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ.

ಕನ್ನಡಪ್ರಭ ವಾರ್ತೆ ಹಾಸನ

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜನ್ಮದಿನವನ್ನು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಹಾಗೂ ಸೇವಾ ಮನೋಭಾವದೊಂದಿಗೆ ಅರ್ಥಪೂರ್ಣವಾಗಿ ಆಚರಿಸಿದರು.

ನಗರದ ಹೇಮಾವತಿ ಪ್ರತಿಮೆ ಮುಂಭಾಗ ಹಾಸನ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬನವಾಸೆ ರಂಗಸ್ವಾಮಿ ಅವರ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಹಾಗೂ ಅನ್ನದಾನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬೆಳಗ್ಗಿನಿಂದಲೇ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಹೇಮಾವತಿ ಪ್ರತಿಮೆ ಬಳಿ ಜಮಾಯಿಸಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಬಳಿಕ ಕೇಕ್ ಕತ್ತರಿಸಿ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧ ವಿತರಣೆ ಮಾಡಲಾಯಿತು.

ಇದೇ ವೇಳೆ ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು. ಬಡ ಹಾಗೂ ನಿರ್ಗತಿಕರಿಗೆ ಅನ್ನದಾನ ವ್ಯವಸ್ಥೆಯೂ ಮಾಡಲಾಗಿದ್ದು, ನೂರಾರು ಮಂದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಬನವಾಸೆ ರಂಗಸ್ವಾಮಿ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಸಂಘಟನಾ ಶಕ್ತಿಯಿಂದ ಪಕ್ಷವನ್ನು ಬಲಪಡಿಸಿರುವ ಅವರು ಜನಸಾಮಾನ್ಯರ ನಾಯಕನಾಗಿ ಹೊರಹೊಮ್ಮಿದ್ದಾರೆ. ರಾಜ್ಯದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿರುವ ಅವರಿಗೆ ದೇವರು ಇನ್ನಷ್ಟು ಆಯಸ್ಸು, ಆರೋಗ್ಯ ಹಾಗೂ ಶಕ್ತಿ ನೀಡಲಿ. ಮುಂದಿನ ದಿನಗಳಲ್ಲಿ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಲಿ ಎಂಬುದು ನಮ್ಮೆಲ್ಲರ ಆಶಯ ಎಂದರು.

ರಾಜ್ಯದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮನೆಮನೆಗೆ ತಲುಪಿಸಲು ಡಿ.ಕೆ. ಶಿವಕುಮಾರ್ ಅವರು ಅಪಾರ ಶ್ರಮ ವಹಿಸಿದ್ದಾರೆ. ಜನರೊಂದಿಗೆ ಬೆರೆತು ಕೆಲಸ ಮಾಡುವ ಅವರ ಗುಣವೇ ಅವರನ್ನು ವಿಭಿನ್ನ ನಾಯಕರನ್ನಾಗಿ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರ ಮುಂದಾಳತ್ವದಲ್ಲಿ ರಾಜ್ಯ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಇನ್ನಷ್ಟು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಾರೆ ಎಂಬ ವಿಶ್ವಾಸ ಕಾರ್ಯಕರ್ತರಲ್ಲಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಈ.ಎಚ್. ಲಕ್ಷ್ಮಣ್ ಮಾತನಾಡಿ, ಡಿ.ಕೆ. ಶಿವಕುಮಾರ್ ಅವರು ಸಂಘಟನಾ ಚತುರ ನಾಯಕರು, ಕಾಂಗ್ರೆಸ್ ಪಕ್ಷ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯಾದ್ಯಂತ ಸುತ್ತಾಡಿ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಿದವರು. ಅವರ ಪರಿಶ್ರಮದಿಂದ ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಿರುವ ಅವರಿಗೆ ಭಗವಂತ ಉತ್ತಮ ಆರೋಗ್ಯ ಮತ್ತು ದೀರ್ಘಾಯಸ್ಸು ನೀಡಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್. ಮಂಜುನಾಥ ಶರ್ಮ, ರಘು ದಾಸರಕೊಪ್ಪಲು, ಬ್ಲಾಕ್ ಅಧ್ಯಕ್ಷ ಚಂದ್ರಶೇಖರ್, ಆರೀಫ್, ಮನು, ಪ್ರಕಾಶ್, ಬೂದೇಶ್, ಬಣ್ಣದ ಹರೀಶ್ ಸೇರಿ ಅನೇಕ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಿದ್ದರು.