ಸಾರಾಂಶ
ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿ ಮನವಿ ಸಲ್ಲಿಸಿದ ಸಂಸದ ಗೋವಿಂದ ಕಾರಜೋಳಕನ್ನಡಪ್ರಭ ವಾರ್ತೆ ಚಿತ್ರದುರ್ಗರಾಷ್ಟ್ರೀಯ ಹೆದ್ದಾರಿ-48ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳ ಸೇತುವೆ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳ ಅನುಷ್ಠಾನ ಕುರಿತು ಸಂಸದ ಗೋವಿಂದ ಕಾರಜೋಳ ಬುಧವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಘಡ್ಕರಿ ಅವರ ಭೇಟಿ ಮಾಡಿ ಮನವಿ ಸಲ್ಲಿಸಿ, ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಹೆಚ್ಚಿನ ಆಧ್ಯತೆ ನೀಡುವಂತೆ ವಿನಂತಿಸಿದರು.
ಕಳೆದ ಏಳೆಂಟು ತಿಂಗಳಿಂದ ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಹೆದ್ದಾರಿ ಸಚಿವಾಲಯಕ್ಕೆ ಸಲ್ಲಿಸಲಾಗಿದೆ. ಈ ಎಲ್ಲಾ ಬೇಡಿಕೆಗಳನ್ನು ಪ್ರಥಮ ಆದ್ಯತೆಯ ಮೇಲೆ ಪರಿಗಣಿಸುವಂತೆ ಕೋರಿದರು.ಹಿರಿಯೂರು ಬಳಿ ರಾಷ್ಟ್ರೀಯ ಹೆದ್ದಾರಿ-48 ಹಾಗೂ ರಾಷ್ಟ್ರೀಯ ಹೆದ್ದಾರಿ 150 ಎ,ಈ ಎರಡೂ ಹೆದ್ದಾರಿಗಳು ಸಂಧಿಸುವ ಜಾಗದಲ್ಲಿ ಕ್ಲೋವರ್ ಲೀಫ್ ಜಂಕ್ಷನ್ ನಿರ್ಮಾಣ ಮಾಡಬೇಕು. ಚಳ್ಳಕೆರೆ ನಗರ ಪರಿಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-150 ಎ ಅನ್ನು ಒನ್ ಟೈಮ್ ಇಂಪ್ರೂವ್ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸಬೇಕೆಂದು ಕೇಂದ್ರ ಸಚಿವರ ಮುಂದೆ ಪ್ರಸ್ತಾಪಿಸಿದರು.
ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 48ರಿಂದ ಚಳ್ಳಕೆರೆ-ಪಾವಗಡ-ಪುಟ್ಟಪರ್ತಿ-ರಾಷ್ಟ್ರೀಯ ಹೆದ್ದಾರಿ-342 ಬುಕ್ಕಪಟ್ಟಣಂವರೆಗೆ ಇರುವ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸುವುದು, ಮೂಡಿಗೆರೆಯಿಂದ-ಚಿಕ್ಕಮಗಳೂರು-ಕಡೂರು-ಹೊಸದುರ್ಗ-ಹೊಳಲ್ಕೆರೆ ಹತ್ತಿರ ರಾಷ್ಟ್ರೀಯ ಹೆದ್ದಾರಿ-369 ರವರೆಗೆ ಈಗಾಗಲೇ ಘೋಷಣೆಯಾಗಿರುವ ರಾಷ್ಟ್ರೀಯ ಹೆದ್ದಾರಿಯನ್ನು ದಾವಣಗೆರೆ ಜಿಲ್ಲೆ ಆನಗೋಡುವರೆಗೆ ವಿಸ್ತರಣೆ ಮಾಡಲು ಘೋಷಿಸುವಂತೆ ಆಗ್ರಹಿಸಿದರು.ತುಮಕೂರು ಜಿಲ್ಲೆಯ ಸಿರಾ ಪಟ್ಟಣ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ-48ನ್ನು ಒನ್ ಟೈಮ್ ಇಂಪ್ರೂವ್ಮೆಂಟ್ ಯೋಜನೆಯಡಿ ಅಭಿವೃದ್ಧಿಪಡಿಸೇಕು. ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಹಿರಿಯೂರು ಹತ್ತಿರ ಆದಿವಾಲ-ಪಟ್ರೆಹಳ್ಳಿ ಬಳಿ ಕೆಳಸೇತುವೆ ನಿರ್ಮಾಣ ಮಾಡಹಬೇಕು. ಸಿರಾ ತಾಲೂಕು ಚಿಕ್ಕನಹಳ್ಳಿ ಬಳಿಯಿರುವ ಕೆಳ ಸೇತುವೆಯಲ್ಲಿರುವ ನ್ಯೂನ್ಯತೆಗಳನ್ನು ಸರಿಪಡಿಸಬೇಕೆಂದು ಸಚಿವ ನಿತಿನ ಗಡ್ಕರಿ ಅವರಿಗೆ ಸಲ್ಲಿಸಲಾದ ಮನವಿ ಪತ್ರದಲ್ಲಿ ಆಗ್ರಹಿಸಲಾಗಿತ್ತು. ಮನವಿ ಆಲಿಸಿದ ಸಚಿವ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ತಿಳಿಸಿದ್ದಾರೆ.