ರಟ್ಟೀಹಳ್ಳಿ: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಜೊತೆ ಹಾವೇರಿ ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳಿಗೆ 60 ಕೋಟಿ ವೆಚ್ಚದಲ್ಲಿ ಬ್ರಿಜ್‌ಗಳ ನಿರ್ಮಾಣಕ್ಕೆ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದಲ್ಲಿ ಸರ್ಕಾರ ಸುಭದ್ರವಾಗಿದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು.

ಸರ್ವಜ್ಞ ಕೆರೆ ತುಂಬಿಸುವ ಯೋಜನೆಯ ವೀಕ್ಷಣೆಗೆ ಆಗಮಿಸಿದ್ದ ಅವರು ರಟ್ಟೀಹಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಬರಗಾಲ ಇದ್ದರೂ ರಾಜ್ಯ ಸರ್ಕಾರ ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡುತ್ತಿಲ್ಲ ಕಾರಣ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂಬ ವಿಪಕ್ಷ ನಾಯಕ ಆರ್. ಅಶೋಕ ಆರೋಪಕ್ಕೆ ತಿರುಗೇಟು ನೀಡಿದರು.

ಆರ್. ಅಶೋಕ ಕಳೆದ ಮೂರು ವರ್ಷಗಳಿಂದ ಟೀಕೆ ಮಾಡುತ್ತಿದ್ದಾರೆ, ಬಿಜೆಪಿಯವರ ಟೀಕೆಗಳು ಟೀಕೆಯಾಗಿಯೇ ಉಳಿದಿವೆ ಹೊರತು ಅದಕ್ಕೆ ಸೂಕ್ತ ಪುರಾವೆಗಳಿಲ್ಲ, ರಾಜ್ಯ ಸರಕಾರ ಹಾವೇರಿಯಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ಜಾರಿ ಮಾಡಿ ಅವುಗಳನ್ನು ಅನುಷ್ಠಾನಗೊಳಿಸಿದೆ ಎಂದರು.

ಇತ್ತೀಚೆಗೆ ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ಸಭೆ ನಡೆದಿದ್ದು, ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿ ನನ್ನ ಕರ್ತವ್ಯವನ್ನು ಮಾಡಿದ್ದೇನೆ, ಪಕ್ಷದ ಸಿದ್ಧಾಂತದ ಪ್ರಶ್ನೆ ಬರುವುದಿಲ್ಲ ಎಂದರು.