ಸಾರಾಂಶ
ಏಳು ವರ್ಷಗಳ ಹಿಂದೆ ರಾಜ್ಯದ ಹಲವು ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕ್ಯಾಂಟೀನ್ ಪ್ರಾರಂಭಿಸಲು ಯೋಜನೆ ರೂಪಿಸಿ, ಟೆಂಡರ್ ಕರೆಯಲಾಗಿತ್ತು. ಆದರೆ ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಕ್ಯಾಂಟೀನ್ ಪ್ರಾರಂಭವಾದರೂ, ತಾಲೂಕು ಕೇಂದ್ರ ಸೋಮವಾರಪೇಟೆಯಲ್ಲಿ ಮಾತ್ರ ಕಟ್ಟಡಕ್ಕೆ ಅಡಿಪಾಯ ಹಾಕಿ ಹೋಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದರು. ಈಗ ಮತ್ತೆ ಕಾಮಗಾರಿ ಚುರುಕುಪಡೆದಿದೆ.
ಕನ್ನಡಪಪ್ರಭ ವಾರ್ತೆ ಸೋಮವಾರಪೇಟೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದಿನ ಅಧಿಕಾರಾವಧಿಯಲ್ಲಿ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಹೆಸರಿನಲ್ಲಿ, 7 ವರ್ಷಗಳ ಹಿಂದೆ ಪ್ರಾರಂಭಿಸಿದ್ದ ಕ್ಯಾಂಟೀನ್ ನಿರ್ಮಾಣ ಯೋಜನೆಗೆ ಸೋಮವಾರಪೇಟೆಯಲ್ಲಿ ಅಂತೂ ವಿಳಂಬವಾಗಿ ಚಾಲನೆ ಸಿಕ್ಕಿದೆ.ಏಳು ವರ್ಷಗಳ ಹಿಂದೆ ರಾಜ್ಯದ ಹಲವು ಜಿಲ್ಲೆ ಮತ್ತು ತಾಲೂಕು ಕೇಂದ್ರಗಳಲ್ಲಿ ಕ್ಯಾಂಟೀನ್ ಪ್ರಾರಂಭಿಸಲು ಯೋಜನೆ ರೂಪಿಸಿ, ಟೆಂಡರ್ ಕರೆಯಲಾಗಿತ್ತು. ಆದರೆ ಜಿಲ್ಲೆಯ ಮಡಿಕೇರಿ ಮತ್ತು ವಿರಾಜಪೇಟೆಯಲ್ಲಿ ಕ್ಯಾಂಟೀನ್ ಪ್ರಾರಂಭವಾದರೂ, ತಾಲೂಕು ಕೇಂದ್ರ ಸೋಮವಾರಪೇಟೆಯಲ್ಲಿ ಮಾತ್ರ ಕಟ್ಟಡಕ್ಕೆ ಅಡಿಪಾಯ ಹಾಕಿ ಹೋಗಿದ್ದ ಗುತ್ತಿಗೆದಾರರು ನಾಪತ್ತೆಯಾಗಿದ್ದರು. ಮತ್ತೊಮ್ಮೆ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಮುಂದಾದ ನಂತರ ಕಟ್ಟಡದ ಕಾಮಗಾರಿ ಬಿರುಸಿನಿಂದ ಪ್ರಾರಂಭವಾಗಿದೆ.
ಈ ಬಗ್ಗೆ ಇಂದಿರಾ ಗಾಂಧಿ ಅಭಿಮಾನಿಗಳ ಸಂಘ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಕ್ಯಾಂಟೀನ್ ಕಟ್ಟಡ ಕಾಮಗಾರಿ ಮುಗಿಸಿ ಕ್ಯಾಂಟೀನ್ ಪ್ರಾರಂಭಿಸುವಂತೆ ಪಟ್ಟಣ ಪಂಚಾಯಿತಿಗೆ ಮನವಿ ಸಲ್ಲಿಸಿದ್ದರು. ಆದರೆ, ಅವರ ಮನವಿ ಯಾವುದೇ ಪ್ರಯೋಜನಕ್ಕೆ ಬಂದಿರಲಿಲ್ಲ.ಈ ಬಗ್ಗೆ ಮಾತನಾಡಿದ ಸ್ಥಳೀಯರಾದ ನಾಗರಾಜು, ಕ್ಯಾಂಟೀನ್ ಪ್ರಾರಂಭಿಸಲು ಕಟ್ಟಡಕ್ಕೆ ಭೂಮಿಪೂಜೆ ನಡೆಸಿ 7 ವರ್ಷಗಳು ಕಳೆದ ನಂತರ ಕಾಮಗಾರಿ ಪ್ರಾರಂಭವಾಗಿದೆ. ಕ್ಯಾಂಟೀನ್ ಪ್ರಾರಂಭವಾದರೆ, ನೂರಾರು ಕೂಲಿ ಕಾರ್ಮಿಕರ ಹೊಟ್ಟೆ ತುಂಬಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.