ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದ್ದು,ಅದಕ್ಕೆ ಅನುಗುಣವಾಗಿ ಮೂಲಭೂತ ಸೌಕರ್ಯ ಒದಗಿಸುವ ಅಗತ್ಯವಿದೆ.ಮಾಸ್ಟರ್ ಪ್ಲಾನ್ ಅಡಿಯಂತೆ ಶೌಚಾಲಯ ನಿರ್ಮಾಣ ಮಾಡಲಾಗುವುದು ಎಂದು ಸಂಸದ ರಾಜಶೇಖರ ಹಿಟ್ನಾಳ ಹೇಳಿದರು.

ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಹುಲಿಗೆಮ್ಮ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆ ಕಳೆದ ನಾಲ್ಕಾರು ವರ್ಷಗಳಲ್ಲಿ ದುಪ್ಪಟ್ಟಾಗುತ್ತಿದೆ. ಹುಣ್ಣಿಮೆ ಮತ್ತು ಜಾತ್ರೆಯ ಸಂದರ್ಭದಲ್ಲಿ ಲಕ್ಷ ಲಕ್ಷ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಹೀಗಾಗಿ ಅಗತ್ಯ ಸ್ನಾನಗೃಹ, ಶೌಚಾಲಯ ನಿರ್ಮಾಣ ಮಾಡಲಾಗುತ್ತದೆ. ಖಾಸಗಿ ಸಹಭಾಗಿತ್ವದಲ್ಲಿ ಮತ್ತು ದೇವಸ್ಥಾನ ಸಮಿತಿಯಿಂದ ಶೌಚಾಲ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

ಅಂಚೆ ಕಚೇರಿ- ಹುಲಿಗಿ ಗ್ರಾಮದಲ್ಲಿ ನೂತನ ಅಂಚೆ ಕಚೇರಿ ಕಟ್ಟಡ ನಿರ್ಮಾಣ ಮಾಡಲು ಸುಮಾರು ₹52.70 ಲಕ್ಷ ವೆಚ್ಚದ ಕಟ್ಟಡ ನಿರ್ಮಾಣಕ್ಕೆ ಸಂಸದ ರಾಜಶೇಖರ ಹಿಟ್ನಾಳ ಭಾನುವಾರ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಅಂಚೆ ಇಲಾಖೆಯ ಸೇವೆ ಇಂದಿಗೂ ಅತ್ಯಗತ್ಯವಾಗಿವೆ. ಹುಲಿಗಿ ಗ್ರಾಮದ ಬೆಳವಣಿಗೆಗೆ ಪೂರಕವಾಗಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಅಂಚೆ ಕಚೇರಿ ಕಟ್ಟಡ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದರು.


ಅಂಚೆ ಇಲಾಖೆಯ ಅಂಚೆ ನಿರೀಕ್ಷಕ, ಜಿ.ಎನ್,ಹಳ್ಳಿ, ವೆಂಕಟೇಶ್ ಹತ್ತಲಗೇರಿ, ಅಂಚೆ ಸಹಾಯಕ ಅಶೋಕ್.ಜಿ,ಮಾಜಿ ತಾಪಂ ಸದಸ್ಯ ಪಾಲಕ್ಷಪ್ಪ ಗುಂಗಾಡಿ, ಈರಣ್ಣ ಈಳಿಗೇರ, ವೆಂಕಟೇಶ. ವಿ, ವಿಜಯಕುಮಾರ್ ಶೆಟ್ಟಿ, ರಾಜು ಜವಳಿ, ಅಜಿತ್ ಕುಮಾರ್ ಹಾಗೂ ಗ್ರಾಮದ ಪ್ರಮುಖರು ಇದ್ದರು.