ಕನ್ನಡಪ್ರಭ ವಾರ್ತೆ, ತುಮಕೂರುನಗರದ ರಾಜೀವ್‌ಗಾಂಧಿ ನಗರದಲ್ಲಿರುವ ಮೌಲಾನ ಆಜಾದ್ ಮಾದರಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮದ್ ರವರು ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಸಂಬಂಧ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಸಮಾಲೋಚನೆ ನಡೆಸಲಾಯಿತು.ಜಿಲ್ಲಾಧಿಕಾರಿ ಶುಭಕಲ್ಯಾಣ್ ಅವರು ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಶಿಕ್ಷಣ ಇಲಾಖೆ ಹಾಗೂ ವಸತಿ ಶಾಲೆಗಳ ಮುಖ್ಯಸ್ಥರು, ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಬೆಳಿಗ್ಗೆ 6 ಗಂಟೆಗೆ ಮೌಲಾನ ಆಜಾದ್ ಮಾದರಿ ಶಾಲೆಗೆ ಭೇಟಿ ನೀಡಿದ ಈ ಅಧಿಕಾರಿಗಳು ಎಸ್ಸೆಸ್ಸೆಲ್ಸಿ ತರಗತಿಗಳಿಗೆ ತೆರಳಿ ಪೂರ್ವ ಸಿದ್ದತಾ-3 ಪರೀಕ್ಷೆ ವೇಳೆಗೆ ಮೂರು ಪರೀಕ್ಷೆಗಳನ್ನು ನಡೆಸಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಕ್ರಮ ವಹಿಸುವಂತೆ ಶಿಕ್ಷಕರುಗಳಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಗೊಳಿಸುವ ಕುರಿತು ಜಿಲ್ಲಾಧಿಕಾರಿಗಳು ಸಭೆ ನಡೆಸಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ನಾವೆಲ್ಲಾ ಕಾರ್ಯೋನ್ಮುಖವಾಗಿದ್ದು, ಈ ಶಾಲೆಗೆ ಭೇಟಿ ನೀಡಿ ಎಸ್ಸೆಸ್ಸೆಲ್ಸಿ ಮಕ್ಕಳಿಗೂ ಯಾವ ರೀತಿ ಅಭ್ಯಾಸ ಮಾಡಬೇಕು ಎಂಬ ಬಗ್ಗೆಯೂ ತಿಳಿಸಿಕೊಡಲಾಗಿದೆ ಎಂದರು. ಈ ಶಾಲೆಯ ಶಿಕ್ಷಕರು ಮತ್ತು ಮಕ್ಕಳೊಂದಿಗೆ ಸಮಾಲೋಚನೆ ನಡೆಸಿದ್ದು, ಬೆಳಿಗ್ಗೆ 6.55 ರ ವರೆಗೆ 19 ಮಕ್ಕಳು ಶಾಲೆಗೆ ಹಾಜರಾಗಿದ್ದರು. ಉಳಿದ ಮಕ್ಕಳು ಸಹ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಶಾಲೆಯ ಪ್ರಾಚಾರ್ಯರು ಹಾಗೂ ಶಿಕ್ಷಕರಿಗೆ ಸೂಚನೆ ನೀಡಲಾಗಿದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಗಿಯುವವರೆಗೂ ಬೆಳಿಗ್ಗೆ 6 ಗಂಟೆಯಿಂದಲೇ ತರಗತಿ ನಡೆಸುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶಬ್ಬೀರ್ ಅಹಮದ್ ಮಾತನಾಡಿ, 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಸಭೆ ನಡೆಸಿ ಶೇ. 100 ರಷ್ಟು ಫಲಿತಾಂಶಕ್ಕೆ ಶ್ರಮ ವಹಿಸುವಂತೆ ಸೂಚಿಸಿದ್ದಾರೆ ಎಂದರು.ಪೂರ್ವ ಸಿದ್ದತಾ-1 ಮತ್ತು 2 ಪರೀಕ್ಷೆಗಳಲ್ಲಿ ಪಡೆದಿರುವ ಫಲಿತಾಂಶ ವಿಶ್ಲೇಷಣೆ ಮಾಡಿ ತಿಳಿಸಿ, ಫಲಿತಾಂಶವನ್ನು ಮತ್ತಷ್ಟು ಉತ್ತಮ ಪಡಿಸಿಕೊಳ್ಳುವಂತೆ ಸೂಚನೆ ನೀಡಲಾಯಿತು ಎಂದು ಹೇಳಿದರು. ಪರೀಕ್ಷಾ ದೃಷ್ಠಿಯಿಂದ ಹೆಚ್ಚು ಸಮಯ ಅಭ್ಯಾಸ ಮಾಡುವಂತೆ ತಿಳಿಸಿ, ಈ ನಿಟ್ಟಿನಲ್ಲಿ ಶಿಕ್ಷಕರಿಗೂ ಸೂಚನೆ ನೀಡಲಾಗಿದೆ ಎಂದರು. ಇದೇ ವೇಳೆ ಮೌಲಾನ ಆಜಾದ್ ಮಾದರಿ ಶಾಲೆಯ ಆವರಣ, ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಶಾಲೆಯ ಶಿಕ್ಷಕರಿಗೆ ಅವರು ಸೂಚಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ತಿಪ್ಪೇಸ್ವಾಮಿ ಆರ್. ಹಾಗೂ ಶಿಕ್ಷಕರು ಇದ್ದರು.