ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು: ನ್ಯಾ. ಸೋಮ

| Published : Dec 28 2023, 01:45 AM IST / Updated: Dec 28 2023, 01:46 AM IST

ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು: ನ್ಯಾ. ಸೋಮ
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಟಿಎಂಎಸ್‌ ಸವೂರ್ ಹಾಲ್‌ನಲ್ಲಿ ಹಮ್ಮಿ ಕೊಳ್ಳಲಾಗಿದ್ದ, ಗ್ರಾಹಕ ಸಮಸ್ಯೆಗಳು ಹಾಗೂ ಹಕ್ಕುಗಳ ಕುರಿತ ವಿವಿಧ ಇಲಾಖೆಗಳು ಮತ್ತು ಗ್ರಾಹಕರೊಂದಿಗೆ ಸಂವಾದದಲ್ಲಿ ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದ್ದು, ಪ್ರತಿಯೊಬ್ಬರು ಕಾನೂನು ತಿಳಿಯುವುದು ಬಹಳ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಎ.ಎಸ್‌. ಸೋಮ ಹೇಳಿದರು.

- ಗ್ರಾಹಕರ ಸಮಸ್ಯೆಗಳು ಹಾಗೂ ಹಕ್ಕುಗಳ ಕುರಿತು ವಿವಿಧ ಇಲಾಖೆಗಳು ಮತ್ತು ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು, ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದ್ದು, ಪ್ರತಿಯೊಬ್ಬರು ಕಾನೂನು ತಿಳಿಯುವುದು ಬಹಳ ಅವಶ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್‌. ಸೋಮ ಹೇಳಿದರು. ನಗರದ ಟಿಎಂಎಸ್‌ ಸವೂರ್ ಹಾಲ್‌ನಲ್ಲಿ ಬುಧವಾರ ಜಿಲ್ಲಾಡಳಿತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮತ್ತಿತರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿ ಕೊಳ್ಳಲಾಗಿದ್ದ, ಗ್ರಾಹಕ ಸಮಸ್ಯೆಗಳು ಹಾಗೂ ಹಕ್ಕುಗಳ ಕುರಿತ ವಿವಿಧ ಇಲಾಖೆಗಳು ಮತ್ತು ಗ್ರಾಹಕರೊಂದಿಗೆ ಸಂವಾದ ಕಾರ್ಯಕ್ರಮ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ತಾವು ಖರೀದಿಸಲಾದ ವಸ್ತು ಹಾಗೂ ಅದರ ಸೇವೆಗಳ ಗುಣಮಟ್ಟವಾಗಿದೆಯೋ, ಇಲ್ಲವೋ ಎಂಬುದನ್ನು ಖಚಿತ ಪಡಿಸಿಕೊಳ್ಳಬೇಕು. ಖರೀದಿಸಲಾದ ವಸ್ತುವಿನ ಬಿಲ್‌ನ್ನು ಕಡ್ಡಾಯವಾಗಿ ಪಡೆಯಬೇಕು. ಮೋಸ ಮಾಡುವವರು ತುಂಬಾ ಚಾಣಾಕ್ಷ ನಡೆ ಅನುಸರಿಸುತ್ತಾರೆ. ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರು ಸುಶಿಕ್ಷಿತರಾಗಿರಬೇಕು. ಅದರಲ್ಲೂ ತಂತ್ರಜ್ಞಾನ ತಿಳಿದುಕೊಳ್ಳಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತುಗಳನ್ನು ಖರೀದಿ ಸುವಾಗ ಎಚ್ಚರವಹಿಸುವುದು ಅತ್ಯವಶ್ಯಕ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ ಕಲಬೆರಿಕೆ ಬಗ್ಗೆ ಎಚ್ಚರ ವಹಿಸಲು ಸಾಧ್ಯ ಎಂದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯ ಡಾ. ಮಂಜುನಾಥ್ ಎಂ. ಬಮ್ಮನಕಟ್ಟಿ ಮಾತನಾಡಿ ಸಮಾಜದಲ್ಲಿ ಒಬ್ಬರನ್ನೊಬ್ಬರು ಅವಲಂಬಿಸಿರುವುದರಿಂದ ದಿನನಿತ್ಯ ಜೀವನಕ್ಕೆ ಅಗತ್ಯ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು. ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು. ಗ್ರಾಹಕರು ಎಷ್ಟೇ ಜಾಗೃತರಾಗಿದ್ದರು ಒಂದೊಮ್ಮೆ ಮೋಸ ಹೋಗುವುದು ಸಹಜ ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕ ತನಗಾದ ನಷ್ಟ ಹಿಂಪಡೆಯಲು ಗ್ರಾಹಕ ವೇದಿಕೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು ಎಂದರು. ಗ್ರಾಹಕರಿಗೆ ಸುರಕ್ಷತೆ ಹಕ್ಕು ನೀಡಲಾಗಿದೆ. ಅವರು ಖರೀದಿಸುವ ಯಾವುದೇ ವಸ್ತು, ಸರಕು, ಅಥವಾ ಪಡೆಯುವ ಸೇವೆ ಸುರಕ್ಷಿತವಾಗಿರಬೇಕೆಂದು ಈ ಹಕ್ಕು ಹೇಳುತ್ತದೆ. ಸುರಕ್ಷತೆ ಹಕ್ಕನ್ನು ಕೇವಲ ಗ್ರಾಹಕ ಸಂರಕ್ಷಣಾ ಕಾಯ್ದೆ ಮಾತ್ರವಲ್ಲ ಇನ್ನೂ ಅನೇಕ ಕಾನೂನುಗಳಲ್ಲಿ ಅವಕಾಶ ನೀಡಲಾಗಿದ್ದು, ದೀರ್ಘ ಬಾಳಿಕೆ ವಸ್ತುಗಳು, ಔಷಧ, ಸೌಂದರ್ಯ ವರ್ಧಕ, ಆಹಾರ, ಪಾನೀಯ ಎಲ್ಲವು ಗ್ರಾಹಕರಿಗೆ ಸುರಕ್ಷಿತವಾಗಿರಬೇಕು ಎಂದು ಹೇಳಿದರು. ವಕೀಲ ಡಿ.ಬಿ ಸುಜೇಂದ್ರ ಗ್ರಾಹಕರ ಹಕ್ಕು ಸಮಸ್ಯೆಗಳ ಕುರಿತು ಉಪನ್ಯಾಸ ನೀಡಿ, ಗ್ರಾಹಕರಿಗೆ ಅನಗತ್ಯವಾಗಿ ವಂಚಿಸುವ ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್ ಲೈನ್‌ನಲ್ಲಿ ಖರೀದಿಸುವ ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣಗಳು ಕೂಡ ಹೆಚ್ಚು ಈ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹಾರ ಮಾಡುವ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಿದರು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಎನ್.ಆರ್. ಚನ್ನಕೇಶವ ಅಧ್ಯಕ್ಷತೆ ವಹಿಸಿದ್ದರು ಕಾರ್ಯಾಧ್ಯಕ್ಷ ವೈ.ಎಸ್. ಸಿದ್ದಯ್ಯ, ಶಾರದ ಸ್ಕೂಲ್ ಆಫ್ ಲಾ ಪ್ರೊಫೆಸರ್ ಎಚ್.ಎನ್. ಮಾನಸ, ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿಯಂತ್ರಕ ಶ್ರೀನಿವಾಸ, ಗ್ರಾಹಕರ ವ್ಯಾಜ್ಯಗಳ ಆಯೋಗದ ರೀಜಿಸ್ಟಾರ್ ಇಂದುಮತಿ . ಆಹಾರ ಮತ್ತು ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಎ.ಬಿ. ಸಂಜಯ್‌, ಉಪಸ್ಥಿತರಿದ್ದರು.

27 ಕೆಸಿಕೆಎಂ 2ಚಿಕ್ಕಮಗಳೂರಿನ ಟಿಎಂಎಸ್‌ ಸವೂರ್‌ ಸಭಾಂಗಣದಲ್ಲಿ ಬುಧವಾರ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾ. ಸೋಮ ಉದ್ಘಾಟಿಸಿದರು.