ಗ್ರಾಹಕರು ವಸ್ತು ಖರೀದಿಸುವ ಮುನ್ನ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ

| Published : Dec 29 2023, 01:31 AM IST / Updated: Dec 29 2023, 01:32 AM IST

ಗ್ರಾಹಕರು ವಸ್ತು ಖರೀದಿಸುವ ಮುನ್ನ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ
Share this Article
  • FB
  • TW
  • Linkdin
  • Email

ಸಾರಾಂಶ

ಬೀದರ್‌ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಗುರವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಬೀದರ್‌

ಗ್ರಾಹಕರು ಯಾವುದೇ ವಸ್ತುಗಳನ್ನು ಖರೀದಿಸುವ ಮುನ್ನ ಅದರ ಗುಣಮಟ್ಟ ಪರೀಕ್ಷಿಸಿ ಖರೀದಿಸಿದಾಗ ಮಾತ್ರ ಮೋಸ ಹೋಗುವ ಸಾಧ್ಯತೆಗಳು ಕಡಿಮೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಜಿಪಂ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ - 2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಸ್ತುಗಳನ್ನು ಎಚ್ಚರಿಕೆಯಿಂದ ಖರೀದಿಸದಿದ್ದರೆ ಗುಣಮಟ್ಟ ಅಥವಾ ತೂಕದಲ್ಲಿ ಮೋಸ ಹೋಗುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಮೋಸ ಹೋದರೆ ಜಿಲ್ಲಾ ಗ್ರಾಹಕರ ಪರಿಹಾರ ಆಯೋಗಕ್ಕೆ ದೂರು ಸಲ್ಲಿಸಿ ನ್ಯಾಯ ಪಡೆಯಬೇಕೆಂದು ಕರೆ ನೀಡಿದರು.

6 ತಿಂಗಳಲ್ಲಿ ಹಣ ಡಬಲ್‌ ದಂಧೆಯ ಮೋಸಕ್ಕೆ ಬೀಳದಿರಿ: ಇತ್ತೀಚಿನ ದಿನಗಳಲ್ಲಿ ಜನರು ವಿವಿಧ ರೀತಿಯಲ್ಲಿ ಮೋಸ ಹೋಗುತ್ತಿದ್ದು, ಕೆಲವರು ಒಂದು ಲಕ್ಷ ಹಣ ಕೊಟ್ಟರೆ ಆರು ತಿಂಗಳಲ್ಲಿ ಡಬಲ್‌ ಆಗುತ್ತದೆ ಎಂದು ಮೋಸ ಮಾಡುವವರು ಇದ್ದಾರೆ. ಆರು ತಿಂಗಳಲ್ಲಿ ಅದು ದುಪ್ಪಟ್ಟು ಆಗಲು ಸಾಧ್ಯವಿಲ್ಲ. ಹಾಗಾಗಿ ಗ್ರಾಹಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.

ಜಿಪಂ ಸಿಇಒ ಡಾ. ಗಿರೀಶ ಬಡೋಲೆ ಮಾತನಾಡಿ, ಜಾಗೋ ಗ್ರಾಹಕ ಜಾಗೋ ಎನ್ನುವ ಜಾಹೀರಾತು ಎಲ್ಲರೂ ಕೇಳಿದ್ದೇವೆ. ಇದು ಹೆಚ್ಚು ಪ್ರಚಾರವಾಗಿತ್ತು. 2019ರಲ್ಲಿ ಜಾರಿಗೆ ತಂದ ಗ್ರಾಹಕರ ಕಾಯ್ದೆ ಗ್ರಾಹಕರಿಗೆ ಅನುಕೂಲಕರವಾಗಿ ರೂಪಿಸಲಾಗಿದೆ. ಆದರೆ ಗ್ರಾಹಕರು ಮೋಸ ಹೋದಾಗ ಎಲ್ಲಿ ಹೋಗಿ ದೂರು ನೀಡಬೇಕು ಎಂದು ಅವರಿಗೆ ತಿಳಿದಿಲ್ಲ. ಇತ್ತೀಚೆಗೆ ಸೈಬರ್‌ ಅಪರಾಧ ಹೆಚ್ಚಾಗುತ್ತಿದ್ದು, ಗ್ರಾಹಕರು ಎಚ್ಚರಿಕೆಯಿಂದ ವ್ಯವಹರಿಸಬೇಕೆಂದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕರಾದ ಮಾಬು ಸಾಬೇಬ್‌ ಎಚ್‌. ಛಬ್ಬಿ ಹಾಗೂ ಆಯೋಗದ ಸದಸ್ಯೆ ಕವಿತಾ ಹುಷಾರೆ ಅವರು ಮಾತನಾಡಿ, ಪ್ರತಿವರ್ಷ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಮಾಡುತ್ತಿದ್ದು ಗ್ರಾಹಕರಿಗೆ ಮತ್ತು ಮಾರಾಟಗಾರರಿಗೆ ಗ್ರಾಹಕರ ಕಾಯ್ದೆಗಳ ಬಗ್ಗೆ ತಿಳಿಯಪಡಿಸುವದು ಇದರ ಉದ್ದೇಶ ಎಂದರು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೆಶಕರಾದ ಸುರೇಖಾ ಮಾತನಾಡಿ, ಪ್ರತಿ ಜಿಲ್ಲೆಗಳಲ್ಲಿ ಗ್ರಾಹಕರ ಕ್ಲಬ್‌ಗಳ ಮೂಲಕ ಶಾಲಾ- ಕಾಲೇಜುಗಳಲ್ಲಿ ಈ ಕುರಿತು ಮಕ್ಕಳಿಗೆ ಮಾಹಿತಿ ನೀಡಲಾಗುತ್ತಿದೆ ಎಂದು ಹೇಳಿದರು..

ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಗ್ರಾಹಕರ ಹಕ್ಕುಗಳ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಸುರೇಖಾ ಮುನೋಳ್ಳಿ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಂಚಾಲಕರು ಹಾಗೂ ವಕೀಲರಾದ ಬಸವರಾಜ ಪವಾರ, ವಾಣಿಜ್ಯ ಮತ್ತು ಕೈಗಿರಾಕ ಸಂಸ್ಥೆಯ ಅಧ್ಯಕ್ಷರಾದ ಬಿ.ಜಿ ಶೆಟಕಾರ, ಜಿಲ್ಲಾ ಗ್ರಾಹಕರ ರಕ್ಷಣಾ ಪರಿಷತ್‌ ಸದಸ್ಯ ಮಹೇಶ ಪಾಲಂ, ಲುಂಬಿಣಿ ಗೌತಮ ಸೇರಿದಂತೆ ಮತ್ತಿತತರು ಇದ್ದರು.