ಸಾರಾಂಶ
ನರಸಿಂಹರಾಜಪುರ, ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಎಚ್ಚರಿಕೆ ನೀಡಿದರು.
ಬಸ್ಸು ನಿಲ್ದಾಣದಿಂದ ಜೈಲ್ ಬಿಲ್ಡಿಂಗ್ ರಸ್ತೆಯ ವಿವಿಧ ಅಂಗಡಿಗಳ ಮೇಲೆ ದಾಳಿ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರತಂಬಾಕು ಉತ್ಪನ್ನಗಳನ್ನು ಸೇವನೆ ಮಾಡಿದರೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್.ವಿ.ಮಂಜುನಾಥ್ ಎಚ್ಚರಿಕೆ ನೀಡಿದರು.
ಸೋಮವಾರ ಪಟ್ಟಣ ಪಂಚಾಯಿತಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಬಸ್ಸು ನಿಲ್ದಾಣದಿಂದ ಜೈಲ್ ಬಿಲ್ಡಿಂಗ್ ರಸ್ತೆಯ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ಗಳನ್ನು ಪರಿಶೀಲಿಸಿ ಮಾತನಾಡಿದರು. ಪ್ರತಿಯೊಬ್ಬರೂ ತಂಬಾಕು ಉತ್ಪನ್ನಗಳ ಸೇವನೆ ತ್ಯಜಿಸಿ ಆರೋಗ್ಯವಂತ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.ಪೊಲೀಸ್ ಸಹಾಯಕ ಉಪ ನಿರೀಕ್ಷಕ ನಟರಾಜ್ ಮಾತನಾಡಿ, 18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡುವುದಿಲ್ಲ ಎಂದು ಪ್ರತಿ ಅಂಗಡಿ ಮುಂದೆ ನಾಮಫಲಕ ಹಾಕುವುದು ಕಡ್ಡಾಯ. ಶಾಲೆಯ 100 ಮೀ. ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ನಿಷೇದಿಸಲಾಗಿದೆ ಎಂದರು.
ಹಿರಿಯ ಆರೋಗ್ಯ ನಿರೀಕ್ಷಕ ಆರ್.ಕೇಶವ ಮೂರ್ತಿ ಮಾತನಾಡಿ, ನಕಲಿ ತಂಬಾಕು ಉತ್ಪನ್ನಗಳ ಬಗ್ಗೆ ಅಂಗಡಿ ಮಾಲೀಕರು ಜಾಗ್ರತೆ ವಹಿಸಬೇಕು ಎಂದು ಸೂಚಿಸಿದರು.ನಂತರ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನಗಳನ್ನು ಪರಿಶೀಲಿಸಿ, 10 ಪ್ರಕರಣ ದಾಖಲಿಸಿ ₹3 ಸಾವಿರ ದಂಡ ವಿಧಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಕ ದರ್ಶನ್, ಪಪಂ ಕಂದಾಯ ನಿರೀಕ್ಷಕ ವಿಜಯ ಕುಮಾರ್, ಗೃಹ ರಕ್ಷಕ ಸಿಬ್ಬಂದಿ ಸುಜಾತಾ, ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿ ಸುಪ್ರೀತ, ಆಶಾ ಕಾರ್ಯಕರ್ತೆ ಕುಸಮ ಇದ್ದರು.