ಕನ್ನಡಪ್ರಭ ವಾರ್ತೆ ಹಾಸನಪರಿಶಿಷ್ಟ ಜಾತಿಗಳೊಳಗಿನ ಒಳಮೀಸಲಾತಿ ಕುರಿತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ದಾಸ್ ಅವರು ಸಲ್ಲಿಸಿರುವ ಸಮೀಕ್ಷಾ ವರದಿಯಲ್ಲಿ ಲೋಪದೋಷಗಳಿದ್ದು, ಅವುಗಳನ್ನು ಸರಿಪಡಿಸುವವರೆಗೆ ಹಿಂದಿನ ಮೀಸಲಾತಿ ವ್ಯವಸ್ಥೆಯನ್ನು ಮುಂದುವರಿಸಬೇಕು ಎಂದು ಛಲವಾದಿ ಮಹಾಸಭಾದಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟಿಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.
ಛಲವಾದಿ ಮಹಾಸಭಾದ ಜಿಲ್ಲಾಧ್ಯಕ್ಷ ಎ.ಟಿ. ಲೋಕೇಶ್ ಮತ್ತು ಕೃಷ್ಣದಾಸ್ ಮಾಧ್ಯಮದೊಂದಿಗೆ ಮಾತನಾಡಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳಗೊಂಡಿರುವ ೧೦೧ ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಸಂಬಂಧಿಸಿದಂತೆ ನೀಡಿರುವ ವರದಿ ಅವೈಜ್ಞಾನಿಕ ಹಾಗೂ ಅಸಮರ್ಪಕವಾಗಿದ್ದು, ಇದರಿಂದ ಮೂಲ ನಿವಾಸಿಗಳಾದ ಆದಿದ್ರಾವಿಡ, ಆದಿಕರ್ನಾಟಕ ಮತ್ತು ಆದಿಆಂಧ್ರ ಪಂಗಡಗಳಿಗೆ ಸೇರಿದ ಬಲಗೈ ೧೯ ಸಮುದಾಯಗಳಿಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ದೂರಿದರು. ಇದೇ ವೇಳೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಮಾಣವನ್ನು ಶೇಕಡಾ ೫೬ಕ್ಕೆ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ಸಂವಿಧಾನದ ನಿಯಮಗಳ ಪ್ರಕಾರ ಮೀಸಲಾತಿ ಪ್ರಮಾಣ ಶೇಕಡಾ ೫೦ ಮೀರಬಾರದು ಎಂದು ನ್ಯಾಯಾಲಯ ತಡೆಯಾಜ್ಞೆ ನೀಡಿರುವುದು ಗಮನಾರ್ಹವಾಗಿದೆ ಎಂದರು.
ಒಳಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ ಸಿಗುವ ಮುನ್ನವೇ ಹಾಗೂ ಅದನ್ನು ಕಾನೂನಾಗಿ ಜಾರಿಗೆ ತರುವ ಮೊದಲು ಕೆಲವು ಇಲಾಖೆಗಳು ಹಾಗೂ ಸರ್ಕಾರಿ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಪ್ರವರ್ಗ-ಎ, ಪ್ರವರ್ಗ-ಬಿ ಹಾಗೂ ಪ್ರವರ್ಗ-ಸಿ ಎಂದು ವರ್ಗೀಕರಿಸಿ ನೇಮಕಾತಿ ಪ್ರಕ್ರಿಯೆ ನಡೆಸುತ್ತಿರುವುದು ಗೊಂದಲಕ್ಕೆ ಕಾರಣವಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಜೊತೆಗೆ ಒಳಮೀಸಲಾತಿ ಕುರಿತು ಉಂಟಾಗಿರುವ ಗೊಂದಲಗಳನ್ನು ಸರಿಪಡಿಸುವವರೆಗೆ ಹಿಂದಿನ ಮೀಸಲಾತಿ ನಿಯಮಗಳನ್ನು ಮುಂದುವರಿಸಬೇಕು ಎಂದು ಮನವಿ ಮಾಡಿದರು. ಇದಲ್ಲದೆ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಒಳಮೀಸಲಾತಿ ಅನ್ವಯ ಹೊಸ ಜಾತಿ ಪ್ರಮಾಣಪತ್ರಗಳನ್ನು ಪಡೆಯಲು ಕಂದಾಯ ಇಲಾಖೆಯಿಂದ ಒತ್ತಾಯಿಸಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಅನಾವಶ್ಯಕ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಒಳಮೀಸಲಾತಿ ಕುರಿತ ಎಲ್ಲಾ ಆಯಾಮಗಳನ್ನು ಸಮಗ್ರವಾಗಿ ಪರಿಶೀಲಿಸಿ ಅಗತ್ಯ ತಿದ್ದುಪಡಿ ಮಾಡುವವರೆಗೆ ಈಗಾಗಲೇ ಕಂದಾಯ ಇಲಾಖೆಯಿಂದ ಆರ್ಡಿ ಸಂಖ್ಯೆಯೊಂದಿಗೆ ನೀಡಿರುವ ಜಾತಿ ಪ್ರಮಾಣಪತ್ರಗಳನ್ನು ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.ಪ್ರತಿಭಟನೆಯಲ್ಲಿ ಸಂಘಟನೆಯ ಮುಖಂಡರಾದ ಕೆ. ಎಸ್. ಗಿರೀಶ್, ದೇವರಾಜು, ಧರ್ಮಣ್ಣ ಇತರರು ಉಪಸ್ಥಿತರಿದ್ದರು.