ಕನ್ನಡಪ್ರಭ ವಾರ್ತೆ ಮಳವಳ್ಳಿ
ದೇಶ ಮತ್ತು ರಾಜ್ಯದ ಅಭಿವೃದ್ಧಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ. ಮೈಸೂರು ಪ್ರಾಂತ್ಯದ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷ ಸಂಘಟಿಸಲು ನಿರಂತರವಾಗಿ ಶ್ರಮಿಸಲಾಗುವುದು ಎಂದು ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.ಪಟ್ಟಣದ ವೈಭವ ಪ್ಯಾಲೇಸ್ ಸಭಾಂಗಣದಲ್ಲಿ ನಡೆದ ವಿಶೇಷ ಬಿಜೆಪಿ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಉತ್ತಮ ಆಡಳಿತದಿಂದಾಗಿ ಮೂರನೇ ಅವಧಿಯಲ್ಲಿ ಕೇಂದ್ರ ಸರ್ಕಾರವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಕೇಂದ್ರದಲ್ಲಿ ಅಲ್ಲದೇ, ಮುಂದಿನ ದಿನಗಳಲ್ಲೂ ರಾಜ್ಯದಲ್ಲಿಯೂ ಬಿಜೆಪಿ ಅಧಿಕಾರ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷಸಂಘಟನೆ ಮಾಡಬೇಕೆಂದು ಕರೆ ನೀಡಿದರು.
ರಾಜ್ಯದಲ್ಲಿ ಬಿಜೆಪಿ ಬಲಿಷ್ಠವಾಗಿ ಬೆಳೆಯುತ್ತಿದ್ದರೂ ಕೂಡ ಮೈಸೂರು ಪ್ರಾಂತ್ಯದಲ್ಲಿ ನಿರೀಕ್ಷೆಗೆ ತಕ್ಕಂತೆ ಎಂಎಲ್ಎ, ಎಂ.ಪಿ ಸ್ಥಾನಗಳನ್ನು ಪಡೆಯುವಲ್ಲಿ ವಿಫಲರಾಗಿದ್ದೇವೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡುಗು, ಮಡಿಕೇರಿ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮುಂದಾಗುತ್ತಿದ್ದೇವೆ. ಪಕ್ಷ ಬಲಪಡಿಸಲು ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಎನ್ಡಿಎ ಮೈತ್ರಿ ಕೂಟ ಇರುವುದರಿಂದ ವರಿಷ್ಠರ ತೀರ್ಮಾಣಕ್ಕೆ ಪ್ರತಿಯೊಬ್ಬರು ಬದ್ಧರಾಗಬೇಕೆ ಹೊರತು ಕಾರ್ಯಕರ್ತರು ಹಾಗೂ ಮುಖಂಡರು ಗೊಂದಲಕ್ಕೆ ಒಳಗಾಗದೇ ಪಕ್ಷವನ್ನು ಗಟ್ಟಿಗೊಳಿಸಲು ಶ್ರಮಿಸಬೇಕು. ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಭಾಗವಹಿಸಿ ಅಕ್ರಮ ಮತಗಳನ್ನು ತಡೆಯುವ ಮೂಲಕ ಬಲಿಷ್ಠ ರಾಷ್ಟ್ರಕ್ಕೆ ಕೈಜೋಡಿಸಬೇಕೆಂದು ಎಂದರು.
ಮಾಜಿ ಸಚಿವ ನಾರಾಯಣಗೌಡ ಮಾತನಾಡಿ, ಪ್ರಧಾನಿ ಮೋದಿ ಅವರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಪಕ್ಷಕ್ಕೆ ಆಹ್ವಾನಿಸಿ ಸಂಸದರನ್ನಾಗಿ ಮಾಡಿರುವುದು ಮೈಸೂರು ಭಾಗದ ಜಿಲ್ಲೆಗಳಲ್ಲಿ ಬಿಜೆಪಿ ಪಕ್ಷಕ್ಕೆ ದೊಡ್ಡ ಬಲ ಬಂದಂತಾಗಿದೆ. ಮೈಸೂರು ಮಹಾರಾಜರ ಕೊಡುಗೆ ಎಂದಿಗೂ ಮರೆಯುವಂತಿಲ್ಲ ಎಂದು ಸ್ಮರಿಸಿದರು.
ಮಂಡಲ ಅಧ್ಯಕ್ಷ ಮಧುಗಂಗಾಧರ್ ಮಾತನಾಡಿ, ಬಿಜೆಪಿ ಪಕ್ಷವನ್ನು ಅಧಿಕಾರ ಹಿಡಿಯಬೇಕೆಂಬ ಅಕಾಂಕ್ಷೆಯೊಂದಿಗೆ ಸಂಸದ ಯದುವೀರ್ ಪ್ರವಾಸ ಕೈಗೊಂಡು ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಿಸಲು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿದೆ. ಎಲ್ಲಾ ಹಿರಿಯ ನಾಯಕರು ಒಗ್ಗಟ್ಟಿನಿಂದ ಅಧಿಕಾರ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್, ಮೈಸೂರು ಮಹನಗರ ಪಾಲಿಕೆ ಮಾಜಿ ಸದಸ್ಯ ಶೈಲೇಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಯಮದೂರು ಸಿದ್ದರಾಜು ಸೇರಿದಂತೆ ಇತರರು ಇದ್ದರು.