ಮೂರು ದಿನ ನಿರಂತರ ಮಳೆ ಸಾಧ್ಯತೆ, ಎಚ್ಚರ ಇರಲಿ: ಡಿಸಿ ಸೂಚನೆ

| Published : May 21 2025, 02:25 AM IST

ಸಾರಾಂಶ

ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆ ಬೀಳುವ ಮಾಹಿತಿ ನೀಡಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಗ್ರಾಮ, ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು.

ಧಾರವಾಡ: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ ಜಿಲ್ಲೆಯಲ್ಲಿ ಮೇ 20ರಿಂದ 22ರ ವರೆಗೆ ಮೂರು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಭಾರಿ ಮಳೆ, ಪ್ರವಾಹದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಕೇಂದ್ರ ಸ್ಥಾನ ಬಿಡದಂತೆ ಆದೇಶಿಸಲಾಗಿದೆ. ಅಕಾಲಿಕ ಮಳೆ ಹಾಗೂ ಅತಿವೃಷ್ಟಿಯಿಂದ ಆಗಬಹುದಾದ ಹಾನಿಗಳನ್ನು ತಡೆಯಲು ವಿವಿಧ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚಿಸಿದ್ದಾರೆ.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರೊಂದಿಗೆ ತುರ್ತು ಸಭೆ ಜರುಗಿಸಿದ ಅವರು, ಮುಂದಿನ 3 ದಿನಗಳ ಕಾಲ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತ ಹೆಚ್ಚು ಮಳೆ ಬೀಳುವ ಮಾಹಿತಿ ನೀಡಿದೆ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಿದೆ. ಗ್ರಾಮ, ತಾಲೂಕು ಮಟ್ಟದ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಸಂಭಾವ್ಯ ಹಾನಿಗಳ ಕುರಿತು ಮಾಹಿತಿ ನೀಡಲಾಗಿದೆ. ಗ್ರಾಮ ಮಟ್ಟದ ವಿಪತ್ತು ನಿರ್ವಹಣಾ ಸಮಿತಿಗಳನ್ನು ಸಕ್ರಿಯಗೊಳಿಸಿ, ಸ್ಥಳೀಯ ಸಾರ್ವಜನಿಕರ ಸಹಕಾರದಲ್ಲಿ ಯಾವುದೇ ರೀತಿಯ ಹಾನಿಯಾಗದಂತೆ ಅಧಿಕಾರಿಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳಗಳ ಅಚ್ಚುಕಟ್ಟು ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ನೀಡಿ, ಮಳೆ ಹೆಚ್ಚಾದಲ್ಲಿ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಬೇಕು ಹಾಗೂ ಗ್ರಾಪಂ ವಿಪತ್ತು ನಿರ್ವಹಣಾ ತಂಡದಿಂದ ಪ್ರವಾಹದ ಕುರಿತು ಗ್ರಾಮಗಳಲ್ಲಿ ಡಂಗುರ ಸಾರುವುದು ಹಾಗೂ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು ಮತ್ತು ಜಿಲ್ಲಾ ಮಟ್ಟದಲ್ಲಿ ಮತ್ತು ತಾಲೂಕು ಮಟ್ಟಗಳಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಮುನ್ನೆಚ್ಚರಿಕೆಯ ಕ್ರಮಗಳು: ಮಳೆಯಾಗುವ ಸಂದರ್ಭದಲ್ಲಿ ಗುಡುಗು-ಸಿಡಿಲಿನಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಮನೆಯಲ್ಲಿಯೇ ಇರಲು ಅಥವಾ ಸುರಕ್ಷಿತ ಸ್ಥಳಗಳಲ್ಲಿ ಇರುವುದು ಸೂಕ್ತ. ಮಳೆಯಾಗುವ ಸಂದರ್ಭದಲ್ಲಿ ನದಿ, ಹಳ್ಳ, ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನ-ಕರುಗಳನ್ನು ಮೇಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರ ಚಟುವಟಿಕೆ ನಡೆಸದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರ ಕಟ್ಟಡಗಳು ಕುಸಿಯುವ ಅಪಾಯವಿದ್ದು, ಎಚ್ಚರದಿಂದ ಇರುವಂತೆ ಸಾರ್ವಜನಿಕರಿಗೆ ಸೂಚಿಸಲು ತಿಳಿಸಿದರು. ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಾರ್ಯಾಲಯದ ದೂರವಾಣಿ 0836-2445508 ಅಥವಾ 1077 ನಂಬರಿಗೆ ಸಂಪರ್ಕಿಸಬಹುದು ಎಂದರು.

ಗುಡುಗು-ಮಿಂಚು ಬಗ್ಗೆ ಜಾಗೃತಿ: ಪ್ರತಿ ವರ್ಷ ಗುಡುಗು, ಸಿಡಿಲು, ಮಿಂಚಿನಿಂದ ರೈತರು, ದನ-ಕುರಿ ಕಾಯುವವರು ಹಾಗೂ ಹೊಲ- ಗದ್ದೆಗಳಲ್ಲಿ ಕೆಲಸ ಮಾಡುವ ಬಡ ಕೂಲಿ ಕಾರ್ಮಿಕರು ಮೃತಪಟ್ಟ ಪ್ರಕರಣಗಳು ಕಂಡುಬರುತ್ತಿವೆ. ಮಳೆಗಾಲದಲ್ಲಿ ಮಳೆ-ಗಾಳಿಗೆ ವಿದ್ಯುತ್ ಕಂಬಗಳಿಗೆ ಹಾಗೂ ತಂತಿಗಳಿಗೆ ಹೆಚ್ಚಿನ ಹಾನಿಯಾಗುವ ಸಂಭವವಿರುವುದರಿಂದ ಎಚ್ಚರ ಇರಲಿ. ಹೆಸ್ಕಾಂ ಅಧಿಕಾರಿಗಳು ಜಾಗೃತಿ ಮೂಡಿಸಬೇಕು. ಯಾವುದೇ ಗಿಡಗಳ ರೆಂಬೆ- ಕೊಂಬೆಗಳು ವಿದ್ಯುತ್ ತಂತಿ ಅಥವಾ ಕಂಬಗಳ ಮೇಲೆ ಹರಡಿರುವುದು ಕಂಡು ಬಂದಲ್ಲಿ, ಪರಿಶೀಲಿಸಲು ಸೂಚಿಸಿದರು.

ಮುಂಗಾರು ಅವಧಿಯಲ್ಲಿ ಭಾರಿ ಮಳೆಯಿಂದ ಕೆರೆಗಳು ಭರ್ತಿಯಾಗಿ ಹೆಚ್ಚುವರಿ ನೀರಿನಿಂದ ಉಂಟಾಗುವ ಪ್ರವಾಹ ಎದುರಿಸುವ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ವಹಿಸುವುದು ಹಾಗೂ ದುರ್ಬಲ ಸೇತುವೆಗಳು ಮತ್ತು ರಸ್ತೆಗಳು ಹಾಗೂ ಭಾರಿ ಮಳೆಯಾದರೆ ಕುಸಿದು ಹೋಗುವಂತಹ ಸೇತುವೆಗಳನ್ನು ಸಂಬಂಧಿಸಿದ ಇಲಾಖೆಗಳು ಗುರುತಿಸುವಂತೆ ಹಾಗೂ ದುರ್ಬಲ ಇರುವ ಸೇತುವೆಗಳ ದುರಸ್ತಿಗಾಗಿ ತಗಲುವ ಅಂದಾಜನ್ನು ಕೂಡಲೇ ತಯಾರಿಸಿ ಜಿಲ್ಲಾಧಿಕಾರಿ ಮುಖಾಂತರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳಿದ್ದರು.