ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

| N/A | Published : Apr 04 2025, 12:49 AM IST / Updated: Apr 04 2025, 10:19 AM IST

Bharatiya Janata Party Karnataka President BY Vijayendra (Photo/ANI)
ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರ ಹೋರಾಟ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದ್ದು, ಭಂಡ ಸರ್ಕಾರ ಮತ್ತು ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

 ಬೆಂಗಳೂರು : ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಿರಂತರವಾಗಿರಲಿದ್ದು, ಭಂಡ ಸರ್ಕಾರ ಮತ್ತು ಭಂಡ ಮುಖ್ಯಮಂತ್ರಿಗಳ ವಿರುದ್ಧ ಬೀದಿಗಿಳಿದು ಹೋರಾಟ ಮಾಡದೆ ಬೇರೆ ದಾರಿ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಾಪ್ರಹಾರ ನಡೆಸಿದ್ದಾರೆ.

ಗುರುವಾರ ಫ್ರೀಡಂಪಾರ್ಕ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ವೇಳೆ ಸುದ್ದಿಗಾರರ ಜತೆ ಮಾತನಾಡಿ, ಜನರ ವಿಶ್ವಾಸ ಮತ್ತು ಆರ್ಶೀವಾದ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಎಲ್ಲವನ್ನೂ ಗಾಳಿಗೆ ತೂರಿ ರೈತರು, ಬಡವರು, ಜನಸಾಮಾನ್ಯರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಸಿದ್ದರಾಮಯ್ಯನವರು 2ನೇ ಬಾರಿ ಸಿಎಂ ಆದ ಬಳಿಕ ಆನೆ ನಡೆದಿದ್ದೇ ದಾರಿ ಎಂಬಂತೆ ವರ್ತಿಸುತ್ತಿದ್ದಾರೆ. ಸಿದ್ದರಾಮಯ್ಯನವರ ಕಪಟ ಸಮಾಜವಾದಿ ಮುಖವಾಡ ಈ ಅಧಿಕಾರಾವಧಿಯಲ್ಲಿ ಕಳಚಿ ಬಿದ್ದಿದೆ. ಹಿಂದೆ ಬಿಜೆಪಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದ್ದರೂ ಅಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ಸಿಗರು ಸಾಕಷ್ಟು ಅಪಪ್ರಚಾರ ಮಾಡಿದರು. ಜನರ ಒಳಿತಿಗಾಗಿ ಈ ಸರ್ಕಾರ ಬಂದಿಲ್ಲ. ಜನರ ಒಳಿತಿಗಾಗಿ ಅಧಿಕಾರ ಪಡೆದಿದ್ದರೆ ಇಂಥ ದರಿದ್ರ ಸರ್ಕಾರವನ್ನು ಜನತೆ ನೋಡಬೇಕಿರಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಹೈಕಮಾಂಡ್ ಅಥವಾ ಗಾಂಧಿ ಕುಟುಂಬಕ್ಕೆ ಕರ್ನಾಟಕವನ್ನು ಅಡ ಇಡಲು ಮತ್ತು ಚುನಾವಣೆ ವೇಳೆ ಎಟಿಎಂ ಆಗಿ ಪರಿವರ್ತಿಸಲು ಕಾಂಗ್ರೆಸ್‌ಗೆ ರಾಜ್ಯದಲ್ಲಿ ಸರ್ಕಾರ ಬೇಕಿದೆ. ಸರ್ಕಾರ ವಿರುದ್ಧ ಹೋರಾಟ ಆರಂಭವಾಗಿದೆ. ಇದು ಮುಕ್ತಾಯವಲ್ಲ, ಪ್ರಾರಂಭವಷ್ಟೇ. ನಾಡಿನ ಜನರ ಪರವಾಗಿ ಪ್ರತಿಪಕ್ಷವಾಗಿ ಬಿಜೆಪಿ ಹೋರಾಟ ಮಾಡುವುದು ಅನಿವಾರ್ಯ ಎಂದು ಹೇಳಿದರು.

ಜನಜಾಗೃತಿಗಾಗಿ ಜನಾಕ್ರೋಶ ಯಾತ್ರೆ:

ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆ ಮತ್ತು ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ, ಪರಿಶಿಷ್ಟ ಜಾತಿ, ಜನಾಂಗದ ಅಭ್ಯುದಯಕ್ಕೆ ಮೀಸಲಿಟ್ಟ ಎಸ್‌ಸಿ/ಟಿಎಸ್‌ಪಿ ಹಣ ದುರ್ಬಳಕೆ ಸೇರಿ ಕಾಂಗ್ರೆಸ್‌ ಸರ್ಕಾರದ ದುರಾಡಳಿತವನ್ನು ರಾಜ್ಯದ ಜನತೆ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಸೋಮವಾರದಿಂದ ಪ್ರಾರಂಭವಾಗುವ ಜನಾಕ್ರೋಶ ಯಾತ್ರೆ ಮೂಲಕ ರಾಜ್ಯದ ಪ್ರತಿ ಜಿಲ್ಲೆಗೆ ತಲುಪಲಿದೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಯನ್ನು ಜನರಿಗೆ ಮನದಟ್ಟು ಮಾಡುತ್ತೇವೆ ಎಂದರು.