ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ಭೂಮಿಪೂಜೆ ನೆರವೇರಿಸಿದ್ದಾರೆ.
- ಸಿಸಿ ರಸ್ತೆ, ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿ ಶಾಸಕ ಬಸವಂತಪ್ಪ - - -
ಕನ್ನಡಪ್ರಭ ವಾರ್ತೆ ದಾವಣಗೆರೆಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಎಸ್ಸಿಪಿ ಮತ್ತು ಟಿಎಸ್ಪಿ ಅನುದಾನದಡಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ಭೂಮಿಪೂಜೆ ನೆರವೇರಿಸಿದರು.
ಪಂಚಾಯತ್ ಇಲಾಖೆ ವತಿಯಿಂದ ಸುಮಾರು ₹3.18 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆಗಸನಕಟ್ಟೆ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ, ರುದ್ರನಕೋಟೆ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ, ಕಂದನಕೋವಿ ಗ್ರಾಮದಲ್ಲಿ ಸಿಸಿ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ, ಜಮ್ಮಾಪುರ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ, ಕೆರೆಯಾಗಳಹಳ್ಳಿ ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣ, ಗಿರಿಯಾಪುರ ಗ್ರಾಮದಲ್ಲಿ ರಸ್ತೆ ನಿರ್ಮಾಣ ಹಾಗೂ ಮ್ಯಾಸರಹಳ್ಳಿ, ಹುಲಿಕಟ್ಟೆ-ಗಾಂಧಿನಗರ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ, ಮೆಳ್ಳೆಕಟ್ಟೆ ಗ್ರಾಮದಲ್ಲಿ ರಸ್ತೆ ನಿರ್ಮಾಣ ಸೇರಿದಂತೆ ಹಲವು ಗ್ರಾಮಗಳಲ್ಲಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.ಈ ಸಂದರ್ಭ ಶಾಸಕ ಕೆ.ಎಸ್. ಬಸವಂತಪ್ಪ ಮಾತನಾಡಿ, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗಳಿಗೆ ಹೆಚ್ಚಿನ ಒತ್ತು ನೀಡಬೇಕು. ರಸ್ತೆ ನಿರ್ಮಾಣ ಮಾಡಿದ ಕೆಲವೇ ತಿಂಗಳಲ್ಲಿ ಹಾಳಾಗಬಾರದು. ಒಮ್ಮೆ ನಿರ್ಮಾಣವಾದ ರಸ್ತೆಗಳು ಶಾಶ್ವತವಾಗಿ ಉಳಿಯುವಂತಾಗಬೇಕು. ಆಗ ಮಾತ್ರ ಸರ್ಕಾರದ ಹಣದ ಸದುಪಯೋಗ ಆಗುತ್ತದೆ ಎಂದು ಹೇಳಿದರು.
ಗ್ರಾಮಸ್ಥರು ಕೂಡ ಕಾಮಗಾರಿಗಳ ಮೇಲ್ವಿಚಾರಣೆಯಲ್ಲಿ ಭಾಗವಹಿಸಬೇಕು. ಕಳಪೆ ಕಾಮಗಾರಿ ಕಂಡುಬಂದಲ್ಲಿ ತಕ್ಷಣ ಅಧಿಕಾರಿಗಳ ಅಥವಾ ಜನಪ್ರತಿನಿಧಿಗಳ ಗಮನಕ್ಕೆ ತರಬೇಕು. ತಪ್ಪಿತಸ್ಥ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.ಪಿಆರ್ಇಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅಶೋಕ್, ಎಂಪಿಎಂಸಿ ಮಾಜಿ ಅಧ್ಯಕ್ಷ ಅಣಜಿ ಎಸ್.ಕೆ. ಚಂದ್ರಣ್ಣ, ಕಾಂಗ್ರೆಸ್ ಮುಖಂಡರಾದ ಗುರುಸಿದ್ದಪ್ಪ, ಷಣ್ಮುಖ, ಕರಿಯಪ್ಪ, ಬಸವರಾಜ್, ದುರುಗಪ್ಪ, ಮಂಜಣ್ಣ, ಬಸಣ್ಣ, ಕೃಷ್ಣಪ್ಪ, ಶಿವರಾಜ್, ರುದ್ರೇಶಪ್ಪ, ಚಂದ್ರಪ್ಪ, ವಿರೂಪಾಕ್ಷಪ್ಪ, ಶಿವಮೂರ್ತಿ, ಹರೀಶ್, ಕೃಷ್ಣನಾಯ್ಕ್, ಜಯ್ಯನಾಯ್ಕ್, ಬಸವರಾಜ್ ನಾಯ್ಕ್, ದೇವೇಂದ್ರಪ್ಪ, ಧ್ಯಾಮಣ್ಣ, ಕೆಂಚವೀರಪ್ಪ ಇನ್ನಿತರರಿದ್ದರು.
- - --20ಕೆಡಿವಿಜಿ35:
ಮಾಯಕೊಂಡ ಕ್ಷೇತ್ರದ ವ್ಯಾಪ್ತಿಯ ಜಮ್ಮಾಪುರದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.