ಕನ್ನಡಪ್ರಭ ವಾರ್ತೆ, ತುಮಕೂರು

ಐದು ವರ್ಷದೊಳಗಿನ ಮಕ್ಕಳಿಗೆ ತಾಯಂದಿರು ತಪ್ಪದೇ ಪೋಲಿಯೋ ಹನಿ ಹಾಕಿಸಬೇಕು. ಪ್ರತಿ ಮಗುವಿಗೂ ಪೋಲಿಯೋ ಲಸಿಕೆ ಹಾಕಲು ಆರೋಗ್ಯ ಇಲಾಖೆ ಸಿಬ್ಬಂದಿ ಗಮನಹರಿಸಬೇಕು. ಈ ಮೂಲಕ ದೇಶವನ್ನು ಪೋಲಿಯೋ ಮುಕ್ತ ದೇಶ ನಿರ್ಮಾಣ ಮಾಡುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪೋಷಕರು ಸಹಕರಿಸಬೇಕು ಎಂದು ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮನವಿ ಮಾಡಿದರು.

ನಗರದ ಕೋತಿತೋಪು ಆಸ್ಪತ್ರೆ ಆವರಣದಲ್ಲಿ ಐದು ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಭಾರತದಲ್ಲಿ ಜನವರಿ 2011 ರಿಂದ ಯಾವುದೇ ಹೊಸ ಪೋಲಿಯೋ ಪ್ರಕರಣ ಕಂಡುಬಂದಿಲ್ಲ. ಭಾರತ ದೇಶವು ಈಗ ವಿಶ್ವ ಆರೋಗ್ಯ ಸಂಸ್ಥೆ ವತಿಯಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂಬ ನಿರ್ಮೂಲನೆ ಪ್ರಮಾಣ ಪತ್ರ ಪಡೆದಿದೆ ಎಂದರು.

ಆದರೆ ನೆರೆಯ ಪಾಕಿಸ್ತಾನ ಮತ್ತು ಆಫ್ಘಾನಿಸಾನ ದೇಶಗಳಲ್ಲಿ ನಿಮೂರ್ಲನೆಯಾಗಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯೂ ರಾಷ್ಟ್ರೀಯ ಲಸಿಕಾ ಅಭಿಯಾನ ಆರಂಭಿಸಲಾಗಿದೆ. ಎಲ್ಲಾ ಪೋಷಕರು ಪಲ್ಸ್ ಪೋಲಿಯೋ ಹನಿಯನ್ನು 0-5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು. ಜಿಲ್ಲಾದ್ಯಂತ 0-5 ವರ್ಷದೊಳಗಿನ ಒಟ್ಟು 1,86,831 ಮಕ್ಕಳಗೆ ಲಸಿಕೆ ನೀಡುವ ಗುರಿ ಹೊಂದಿದ್ದು, 1219 ಲಸಿಕಾ ಕೇಂದ್ರಗಳು, ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಟೋಲ್‌ಗಳಲ್ಲಿ 60 ಟ್ರಾನ್ಸಿಟ್ ಕೇಂದ್ರಗಳಲ್ಲಿ ಪೋಲಿಯೋ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಒಟ್ಟು 5122 ಲಸಿಕಾ ಸಿಬ್ಬಂದಿ, 265 ಮೇಲ್ವಿಚಾರಕರು ಈ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಸಚಿವ ಸೋಮಣ್ಣ ತಿಳಿಸಿದರು.

ವಿಶೇಷವಾಗಿ ವಲಸೆ ಬಂದಿರುವ ಸಮುದಾಯ, ಲಸಿಕಾ ವಂಚಿತ ಪ್ರದೇಶ, ಕೊಳಚೆ ಪ್ರದೇಶ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಆದ್ಯತೆ ಮೇರೆಗೆ ಪಲ್ಸ್ ಪೋಲಿಯೋ ಹನಿ ನೀಡಲು ಕ್ರಮ ವಹಿಸಬೇಕು ಹಾಗೂ ಅವರಲ್ಲಿ ಮಕ್ಕಳ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.


ಶಾಸಕರಾದ ಜಿ.ಬಿ. ಜ್ಯೋತಿಗಣೇಶ್, ಬಿ. ಸುರೇಶ್‌ಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ. ಅಶ್ವಿಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್, ತಹಸೀಲ್ದಾರ್ ರಾಜೇಶ್ವರಿ, ಆರ್.ಸಿ.ಎಚ್. ಅಧಿಕಾರಿ ಡಾ. ಮೋಹನ್, ಟಿಎಚ್‌ಒ ಡಾ. ಲಕ್ಷ್ಮೀಕಾಂತ್, ಕೋತಿತೋಪು ಆಸ್ಪತ್ರೆ ವೈದ್ಯಾಧಿಕಾರಿ ಡಾ.ದಿವ್ಯಜ್ಯೋತಿ, ಮುಖಂಡರಾದ ಕೆ. ದೊರೈರಾಜ್, ಎಚ್.ಆರ್. ಹನುಮಂತರಾಯಪ್ಪ, ರೂಪಾ ಶೆಟ್ಟಳ್ಳಯ್ಯ, ಜಯಮೂರ್ತಿ, ಭೈರಣ್ಣ, ಮಧುಶ್ರೀ ಮತ್ತಿತರರು ಭಾಗವಹಿಸಿದ್ದರು.