Contributing to the economic development of the poor

-ಹಳ್ಳಿಗಳ ಅಭಿವೃದ್ಧಿ

-ಜಿಲ್ಲಾ ನಿರ್ದೇಶಕ ಎಂ.ದಿನೇಶ್ ಅಭಿಮತ । ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರ ಸಭೆ

-----

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ, ಸಾಮಾಜಿಕ ಮತ್ತು ಧಾರ್ಮಿಕ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರ ಶ್ರಮಿಸುತ್ತಿದೆ ಎಂದು ಶಿರಸಿ ವಿಭಾಗದ ಜಿಲ್ಲಾ ನಿರ್ದೇಶಕ ಎಂ. ದಿನೇಶ್ ತಿಳಿಸಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಡೆದ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಗ್ರಾಮೀಣ ಜನತೆ ಆರ್ಥಿಕವಾಗಿ ಸ್ವಾವಲಂಬಿಯಾಗಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಹೆಚ್ಚಿನ ರೀತಿಯಲ್ಲಿ ಶ್ರಮಿಸುತ್ತಿದ್ದು, ಇದರೊಂದಿಗೆ ಮಹಿಳೆಯರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಪ್ರೋತ್ಸಾಹಿಸುತ್ತಿದೆ ಎಂದರು.

ಒಕ್ಕೂಟದ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯಗಳನ್ನು ಗ್ರಾಮೀಣ ಜನರಿಗೆ ತಲುಪಿಸುವ ಮಂಜುನಾಥ ಸ್ವಾಮಿಯ ಜ್ಞಾನದ ಕೈಗಳು ಆಗಿ ಸೇವೆ ಸಲ್ಲಿಸಬೇಕು ಎಂದು ಕರೆ ನೀಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕೇವಲ ಆರ್ಥಿಕ ವ್ಯವಹಾರಗಳಿಗೆ ಸೀಮಿತವಾಗದೆ, ಗ್ರಾಮೀಣ ಜನರಲ್ಲಿ ಉಳಿತಾಯದ ಮನೋಭಾವ, ಆರ್ಥಿಕ ಶಿಸ್ತು, ಸ್ವಾವಲಂಬನೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಮಹತ್ವದ ಕಾರ್ಯವನ್ನು ಮಾಡುತ್ತಿದೆ. ಸಣ್ಣ ಮೊತ್ತದ ಉಳಿತಾಯಕ್ಕೂ ಮಹತ್ವ ನೀಡಿ, ಬಡ ಕುಟುಂಬಗಳ ಭವಿಷ್ಯಕ್ಕೆ ಆರ್ಥಿಕ ಭದ್ರತೆ ಕಲ್ಪಿಸುವಲ್ಲಿ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಯೋಜನೆಯ ಸದಸ್ಯರಲ್ಲಿ ಉಳಿತಾಯದ ಸಂಸ್ಕೃತಿ ಬೆಳೆಸಿದ ಪರಿಣಾಮ ಸದಸ್ಯರ ಒಟ್ಟು ಉಳಿತಾಯ ₹3,500 ಕೋಟಿಗೂ ಅಧಿಕ ಮೊತ್ತಕ್ಕೆ ತಲುಪಿದೆ. ಸಾಮಾನ್ಯ ವ್ಯಕ್ತಿಯೂ ತನ್ನ ಆದಾಯಕ್ಕೆ ಅನುಗುಣವಾಗಿ ಉಳಿತಾಯ ಮಾಡುವಂತೆ ಪ್ರೇರೇಪಿಸಿ, ಆರ್ಥಿಕವಾಗಿ ಸದೃಢರಾಗುವಂತೆ ಮಾಡುವಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಧರ್ಮಸ್ಥಳದಿಂದ ರಾಜ್ಯದ ಧಾರ್ಮಿಕ ಕ್ಷೇತ್ರಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಇದುವರೆಗೆ 16 ಸಾವಿರ ಅಧಿಕ ದೇವಾಲಯಗಳ ಜೀರ್ಣೋದ್ಧಾರಕ್ಕೆ ಅನುದಾನ ನೀಡಲಾಗಿದೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯ ಜೊತೆಗೆ ಸಮಾಜದ ವಿವಿಧ ವರ್ಗಗಳ ಜನರ ಬದುಕಿಗೆ ನೆರವಾಗುವ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ವಿವರಿಸಿದರು.

ರಾಜ್ಯದಲ್ಲಿ 80 ಸಾವಿರ ನಿರ್ಗತಿಕರಿಗೆ ಮಾಸಾಶನ, 1,67,000 ವಿದ್ಯಾರ್ಥಿಗಳಿಗೆ ಜ್ಞಾನ ನಿಧಿ ಶಿಷ್ಯವೇತನ, ಅಂದಾಜು 900 ಹಿಂದೂ ರುದ್ರಭೂಮಿಗಳ ಅಭಿವೃದ್ಧಿಗೆ ಅನುದಾನ ಹಾಗೂ ವಾತ್ಸಲ್ಯ ಕಾರ್ಯಕ್ರಮದಡಿ 945ಕ್ಕೂ ಹೆಚ್ಚು ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸಿಕೊಡುವ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನಮ್ಮ ಊರು ನಮ್ಮ ಕೆರೆ:

ಜಲಸಂರಕ್ಷಣೆಯ ಮಹತ್ವವನ್ನು ಅರಿತು ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ರಾಜ್ಯದಲ್ಲಿ 965 ಅಧಿಕ ಕೆರೆಗಳ ಹೂಳೆತ್ತುವ ಕಾರ್ಯ ನಡೆಸಲಾಗಿದೆ. ಇದರಿಂದ ಕೆರೆಗಳ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ಅಂತರ್ಜಲ ಮಟ್ಟ ಸುಧಾರಣೆ, ಕೃಷಿಗೆ ನೀರಿನ ಲಭ್ಯತೆ ಹಾಗೂ ಗ್ರಾಮೀಣ ಜನರ ಜೀವನ ಮಟ್ಟ ಸುಧಾರಣೆಗೆ ಸಹಕಾರಿಯಾಗುತ್ತಿದೆ ಎಂದು ಹೇಳಿದರು.

ಯೋಜನಾಧಿಕಾರಿ ನಂಜುಂಡಿ ಅವರು ತಾಲೂಕಿನ ಸಾಧನಾ ವರದಿ ಮಂಡಿಸಿದರು. ವಿವಿಧ ಒಕ್ಕೂಟಗಳು ಹಾಗೂ ಸ್ವಸಹಾಯ ಸಂಘಗಳ ಕಾರ್ಯ ಚಟುವಟಿಕೆಗಳು, ಸದಸ್ಯರ ಉಳಿತಾಯ, ಸಾಲ ಮರುಪಾವತಿ, ಸ್ವಉದ್ಯೋಗ, ಸಾಮಾಜಿಕ ಸೇವಾ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ನೀಡಲಾಗುತ್ತಿರುವ ಸಹಕಾರದ ಕುರಿತು ಸಮಗ್ರ ಮಾಹಿತಿಯನ್ನು ಸಭೆಯ ಮುಂದಿಟ್ಟರು.

ಅಡಗಂಟಿ ಆಂಜನೇಯ ದೇವಸ್ಥಾನ ಹಾಗೂ ಮಲ್ಲಪ್ಪ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ 1 ಲಕ್ಷದ ಡಿ.ಡಿ. ಹಾಗೂ ಕೊರಟಗೆರೆ ಬಸವೇಶ್ವರ ಹಾಗೂ ಮಾರುತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ₹ 1.50 ಲಕ್ಷದ ಡಿ.ಡಿ ದೇವಸ್ಥಾನ ಸಮಿತಿ ಸದಸ್ಯರಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಶಿಕಾರಿಪುರ ತಾಲೂಕಿನ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಫೋಟೋ

29ಎಸ್‌ಕೆಪಿ01

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ನಡೆದ ಶಿಕಾರಿಪುರ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರ ಸಭೆಯನ್ನು ದಿನೇಶ್ ಉದ್ಘಾಟಿಸಿದರು.