ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಪರಿಣಾಮಕಾರಿ ಸಹಭಾಗಿತ್ವವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವುದರೊಂದಿಗೆ ಸಮುದಾಯ ಕೇಂದ್ರಿತ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು. ಮುಂದಿನ ಒಂದು ವಾರದ ಅವಧಿಯಲ್ಲಿ ಹುಣಸೂರು ತಾಲ್ಲೂಕಿನ 130 ಗ್ರಾಮಗಳಲ್ಲಿ ಪುರಾವೆ ಆಧಾರಿತ ಗ್ರಾಮ ಆರೋಗ್ಯ ಯೋಜನೆ ಸಿದ್ಧಪಡಿಸುವ ವಿನೂತನ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಮೈಸೂರು

ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಪರಿಣಾಮಕಾರಿ ಸಹಭಾಗಿತ್ವವು ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವುದರೊಂದಿಗೆ ಸಮುದಾಯ ಕೇಂದ್ರಿತ ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಗ್ರಾಮ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಬಸವರಾಜು ಆರ್.ಶ್ರೇಷ್ಠ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಹುಣಸೂರು ತಾಲೂಕಿನಲ್ಲಿ ಅನುಷ್ಠಾನಗೊಳ್ಳುತ್ತಿರುವ ಸ್ವಾಸ್ಥ್ಯ ಸ್ವರಾಜ್ ಯೋಜನೆಯಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ಆರೋಗ್ಯ ಯೋಜನಾ ಅಭಿಯಾನ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಂದಿನ ಒಂದು ವಾರದ ಅವಧಿಯಲ್ಲಿ ಹುಣಸೂರು ತಾಲ್ಲೂಕಿನ 130 ಗ್ರಾಮಗಳಲ್ಲಿ ಪುರಾವೆ ಆಧಾರಿತ ಗ್ರಾಮ ಆರೋಗ್ಯ ಯೋಜನೆ ಸಿದ್ಧಪಡಿಸುವ ವಿನೂತನ ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಈ ಕಾರ್ಯದಲ್ಲಿ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಸಾರ್ವಜನಿಕ ಆರೋಗ್ಯ ಹಾಗೂ ಆರೋಗ್ಯ ವ್ಯವಸ್ಥೆ ನಿರ್ವಹಣಾ ವಿಭಾಗದ ಸ್ನಾತಕೋತ್ತರ ವಿದ್ಯಾರ್ಥಿಗಳು, ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜು ಮಾತನಾಡಿ, ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ಚಿಂತನೆ ಮತ್ತು ಸಮುದಾಯದ ಸಕ್ರಿಯ ಭಾಗವಹಿಸುವಿಕೆಯ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ. ಇಂತಹ ಸಮನ್ವಯಿತ ಚಟುವಟಿಕೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಆಯೋಜಿಸುವ ಮೂಲಕ ಸಮಗ್ರ ಪ್ರಾಥಮಿಕ ಆರೋಗ್ಯ ಸೇವಾ ವ್ಯವಸ್ಥೆಯ ಬಲವರ್ಧನೆಯಲ್ಲಿ ಸಮುದಾಯದ ಪಾತ್ರವನ್ನು ಹೆಚ್ಚಿಸಬಹುದಾಗಿದೆ ಎಂದರು.

ಜೆಎಸ್ಎಸ್ ಅಹೆರ್ ಸಾರ್ವಜನಿಕ ಆರೋಗ್ಯ ವಿಭಾಗದ ಮುಖ್ಯಸ್ಥ ಡಾ. ಅನಿಲ್ ಬಿಳಿಮಲೆ ಮಾತನಾಡಿ, ಗ್ರಾಮೀಣ ಆರೋಗ್ಯ ಸಮಸ್ಯೆಗಳನ್ನು ಅಧ್ಯಯನ ಮಾಡುವಾಗ ಪಂಚಾಯಿತಿಗಳು, ಆರೋಗ್ಯ ಉಪ ಕೇಂದ್ರಗಳು, ಮಾನವ ಸಂಪನ್ಮೂಲ ಹಾಗೂ ಸ್ಥಳೀಯ ಅಗತ್ಯಗಳನ್ನು ಸಮಗ್ರವಾಗಿ ಪರಿಗಣಿಸಬೇಕು. ಗ್ರಾಮಗಳಲ್ಲಿನ ವಿವಿಧ ಸಾಮಾಜಿಕ ಹಾಗೂ ಆರೋಗ್ಯ ಸಂಬಂಧಿತ ವಿಚಾರಗಳನ್ನು ಸೂಕ್ಷ್ಮವಾಗಿ ಗಮನಿಸಿ, ಸಮುದಾಯದ ಮಾತುಗಳನ್ನು ಆಲಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಈ ಅಭಿಯಾನಕ್ಕೆ ಜಿಪಂ ಉಪ ಕಾರ್ಯದರ್ಶಿ ಭೀಮಪ್ಪ ಕೆ.ಲಾಳಿ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಗ್ರಾಮ್ ಯೋಜನಾ ಮುಖ್ಯಸ್ಥ ಜಿ. ಮಲ್ಲಿಕಾರ್ಜುನ ಸ್ವಾಮಿ, ಸ್ವಾಸ್ಥ್ಯ ಸ್ವರಾಜ್ಯ ಯೋಜನೆಯ ಸಂಯೋಜಕ ಸಿ.ಎಸ್. ರವಿ, ಜೆಎಸ್ಎಸ್- ಅಹೆರ್ ನ ಡಾ. ಶಿಲ್ಪಾ ಮೊದಲಾದವರು ಇದ್ದರು.