ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಸಮಾಜದ ಅನಿಷ್ಠ ಪದ್ಧತಿಗಳಲ್ಲಿ ಒಂದಾದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮೀಜಿ ಹೇಳಿದರು.ಜಿಲ್ಲಾ ಪಂಚಾಯತಿಯ ನೂತನ ಸಭಾಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಮೆಯಲ್ಲಿ ತೊಡಗಿಸುವುದು ಕಾನೂನು ಬಾಹಿರವಾಗಿದ್ದು, ಬೇರೆ ಮಕ್ಕಳ ಹಾಗೆ ಆಟ, ಪಾಠಗಳಲ್ಲಿ ತೊಡಗಿಸುವ ಮೂಲಕ ಅವರು ಕೂಡ ಮುಖ್ಯವಾಹಿನಿಗೆ ಬರುವಂತೆ ಮಾಡಬೇಕಿದೆ. ಬಾಲಕಾರ್ಮಿಕಕ್ಕೆ ಬಡತನ ಮುಖ್ಯ ಕಾರಣವಾಗಿದ್ದು, ಶಿಕ್ಷಣ ಪಡೆಯುವ ಮೂಲಕ ಆರ್ಥಿಕವಾಗಿ ಮುಂದೆ ಬರಲು ಸಾಧ್ಯವಾಗುತ್ತದೆ. 14 ವರ್ಷದೊಳಗಿನ ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಕಡ್ಡಾಯವಾಗಿದ್ದು, ಆರೋಗ್ಯ ಹಾಗೂ ಸುರಕ್ಷಿತ ಬಾಲ್ಯ ಪಡೆಯುವ ಹಕ್ಕು ಇದೆ. ಬಾಲಕಾರ್ಮಿಕ ಪದ್ಧತಿ ತಡೆಗಟ್ಟಲು ಸಮಾಜದ ಎಲ್ಲ ವರ್ಗದವರ ಸಹಕಾರ ಅಗತ್ಯವಾಗಿದೆ ಎಂದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮುಖ್ಯ ಕಾನೂನು ಅಭಿರಕ್ಷಕ ಪಿ.ಎಚ್.ಮಾಳೇದ, ಬಾಲ ಮತ್ತು ಕಿಶೋರ ಕಾರ್ಮಿಕರ ನಿಷೇಧ ಕಾಯ್ದೆ 1986, ತಿದ್ದುಪಡಿ ಕಾಯ್ದೆ 2016 ಕುರಿತು ವಿವರಿಸಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಸವರಾಜ ಗದ್ದಿ ಮಾತನಾಡಿದರು.
ಈ ವೇಳೆ ಬಾಲಕಾರ್ಮಿಕನಾಗಿ ಕೆಲಸ ಮಾಡುತ್ತಿರುವಾಗ ಕೆಲಸದಿಂದ ಬಿಡುಗಡೆಗೊಳಿಸಿ ಶಾಲೆಗೆ ದಾಖಲು ಮಾಡಲಾಗಿತ್ತು. ಸದರಿ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.80.64 ರಷ್ಟು ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಪಡೆದ ಗಣೇಶ ಕಾಂಬಳೆ ವಿದ್ಯಾರ್ಥಿಯನ್ನು ಸನ್ಮಾನಿಸಿ ₹ 2 ಸಾವಿರ ಚೆಕ್ ವಿತರಿಸಲಾಯಿತು. ಅದೇ ರೀತಿ ರುಕ್ಮೀಣಿ ಖಾನಾಪೂರ, ಸುದೀಪ ಸಾಲಮಂಟಪಿ, ಸಮಸುದ್ದಿನ್ ಯೂಸುಫ್ ಬಾಲಕರನ್ನು ಕೆಲಸದಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಕೆಲಸಕ್ಕೆ ಇಟ್ಟುಕೊಂಡ ಮಾಲಿಕರಿಂದ ₹ 20 ಸಾವಿರ ಹಾಗೂ ಸರ್ಕಾರದಿಂದ ₹ 15 ಸಾವಿರ ಸೇರಿ ಒಟ್ಟು ₹ 35 ಸಾವಿರ ಚೆಕ್ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಪ್ರಶಾಂತ ನಾರಾಯಣಕರ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಹನಮಂತಗೌಡ ಪಾಟೀಲ, ಜಿಲ್ಲಾ ಬಾಲಕಾರ್ಮಿಕಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿ ಇತರರು ಉಪಸ್ಥಿತರಿದ್ದರು.ಸನ್ಮಾನ: ಕಳೆದ 2025-26ನೇ ಸಾಲಿನಲ್ಲಿ ಅತೀ ಹೆಚ್ಚು ಬಾಲ ಮತ್ತು ಕಿಶೋರಿ ಕಾರ್ಮಿಕರ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾಖಲಿಸಿದ ಬಾಗಲಕೋಟೆ ತಾಲೂಕಿನ ಕಾರ್ಮಿಕ ನಿರೀಕ್ಷಕ ರಾಜಶೇಖರ ಕುರಡಿಕೇರಿ ಅವರನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಸ್ಟರ್ ಆರ್.ಕೆ.ಜಿ.ಎಂ.ಎಂ ಮಹಾಸ್ವಾಮಿಜಿ ಹಾಗೂ ಜಿಲ್ಲಾಧಿಕಾರಿ ಸಂಗಪ್ಪ ಅವರು ಸನ್ಮಾನಿಸಿದರು.
------ಕೋಟ್ಮಕ್ಕಳು ದೇಶದ ಅಮೂಲ್ಯ ಸಂಪತ್ತು. ಅವರ ಕೈಯಲ್ಲಿ ಪುಸ್ತಕಗಳು ಇರಬೇಕು ಹೊರತು ಉಪಕರಣಗಳಲ್ಲಿ. ಮಕ್ಕಳ ದುಡಿಮೆಗೆ ಮುಖ್ಯವಾಗಿ ಬಡತನ, ಸಾಮಾಜಿಕ ಅಸಮಾನತೆ ಕಾರಣವಾಗಿದ್ದು, ಇದನ್ನು ಹೋಗಲಾಡಿಸಲು ಸರ್ಕಾರ ಮಾತ್ರ ಪರಿಹರಿಸಲು ಸಾಧ್ಯವಿಲ್ಲ. ಸಮಾಜದ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ಬಾಲಕಾರ್ಮಿಕತೆ ನಿರ್ಮೂಲನೆ ಮಾಡಿ ಬಾಲ್ಯವನ್ನು ಸಂರಕ್ಷಿಸುವ ಕೆಲಸವಾಗಬೇಕು.ಸಂಗಪ್ಪ, ಜಿಲ್ಲಾಧಿಕಾರಿ