ಸಾರಾಂಶ
ಕನ್ನಡಪ್ರಭ ವಾರ್ತೆ ಶಿರಾ ಕಲ್ಪತರು ನಾಡು ತುಮಕೂರಿನಲ್ಲಿ ಇದೇ ಪ್ರಥಮ ಭಾರಿಗೆ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಶಾಸಕರು, ಸಚಿವರೊಂದಿಗೆ ಸಭೆ ನಡೆಸಿ ಸಮ್ಮೇಳನದ ಯಶಸ್ಸಿಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ರಾಜ್ಯ ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಡಾ.ಟಿ.ಬಿ.ಜಯಚಂದ್ರ ಹೇಳಿದರು. ಅವರು ಭಾನುವಾರ ನಗರದ ಪ್ರವಾಸಿ ಮಂದಿರದಲ್ಲಿ ಜನವರಿ 18 ಮತ್ತು 19ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ಸಮಾವೇಶದ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ತುಮಕೂರಿನಲ್ಲಿ ಇದೇ ಮೊದಲ ಭಾರಿಗೆ ದೊಡ್ಡ ಸಮಾವೇಶ ಏರ್ಪಡಿಸಿರುವುದು ಸಂತಸ ತಂದಿದೆ. ಜಿಲ್ಲೆಯ ಪತ್ರಕರ್ತರು ಕಾರ್ಯಕ್ರಮವನ್ನು ಸಜ್ಜುಗೊಳಿಸುವಲ್ಲಿ ಅತ್ಯಂತ ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಎಲ್ಲರೂ ಉತ್ಸಾಹದಿಂದ ಕೆಲಸ ನಿರ್ವಹಿಸುತ್ತಿದ್ದು, ರಾಜ್ಯದ ಎಲ್ಲಾ ಪತ್ರಕರ್ತರು ಈ ಸಮಾವೇಶಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ತುಮಕೂರು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿ.ನಿ.ಪುರುಷೋತ್ತಮ್ ಮಾತನಾಡಿ ತುಮಕೂರಿನ ಎಸ್ಎಸ್ಐಟಿ ವಿದ್ಯಾಸಂಸ್ಥೆಯ ಆವರಣದಲ್ಲಿ ಸಮಾವೇಶ ನಡೆಯಲಿದ್ದು, ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಸ್ಥಳಪರಿಶೀಲನೆ ಮಾಡಿ ಕಾರ್ಯಕ್ರಮದ ಸಿದ್ದತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ತುಮಕೂರಿನಲ್ಲಿ ರಾಜ್ಯಮಟ್ಟದ ಪತ್ರಕರ್ತರ ಸಮಾವೇಶ ಇದೇ ಮೊದಲ ಭಾರಿಗೆ ನಡೆಯುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಸಚಿವರು, ಶಾಸಕರು, ಮಾಜಿ ಸಚಿವರು, ಶಾಸಕರು ಹಾಗೂ ಹಲವು ಮುಖಂಡರನ್ನು ಭೇಟಿ ಮಾಡಿ ಸಮಾವೇಶಕ್ಕೆ ಆಹ್ವಾನಿಸಿ ಕಾರ್ಯಕ್ರಮದ ಯಶಸ್ವಿಗೊಳಿಸಲು ಕೋರಲಾಗಿದೆ. ಸಮಾವೇಶವು ಎರಡು ದಿನ ನಡೆಯುವುದರಿಂದ ರಾಜ್ಯದ ವಿವಿಧ ಭಾಗಗಳಿಂದ ಪತ್ರಕರ್ತರು ಆಗಮಿಸಲಿದ್ದು ಅವರಿಗೆಲ್ಲರಿಗೂ ವಸತಿ ಮತ್ತು ಊಟೋಪಚರದ ವ್ಯವಸ್ಥೆಗೆ ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು, ಜಿಲ್ಲೆಯ ಎಲ್ಲಾ ಪತ್ರಕರ್ತರು ಕೈಜೋಡಿಸಿ ಯಶಸ್ವಿಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ರಾಜ್ಯದಲ್ಲಿ ಅತ್ಯುತ್ತಮ ಶಾಸಕರಾಗಿ ಆಯ್ಕೆಯಾದ ಶಾಸಕ ಟಿ.ಬಿ.ಜಯಚಂದ್ರ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಉಪವಿಭಾಗಾಧಿಕಾರಿ ಶಿವಪ್ಪ, ನಗರಸಭಾಧ್ಯಕ್ಷ ಜೀಶಾನ್ ಮೊಹಮೂದ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಈ.ರಘುರಾಮ್, ಮಾಜಿ ಕಾರ್ಯದರ್ಶಿ ರಂಗರಾಜು, ಜಿಲ್ಲಾ ಕಾರ್ಯದರ್ಶಿ ದಶರಥ, ನಿರ್ದೇಶಕ ಹಾರೋಗೆರೆ ಮಹೇಶ್, ಹರೀಶ್ ಆಚಾರ್ಯ, ಜಯಣ್ಣ, ತಾಲ್ಲೂಕು ಸಂಘದ ಅಧ್ಯಕ್ಷ ಎಸ್.ಎನ್.ಜಯಪಾಲ್, ಪ್ರಧಾನ ಕಾರ್ಯದರ್ಶಿ ದೇವರಾಜು.ಎನ್, ಉಪಾಧ್ಯಕ್ಷ ಫಕೃದ್ದೀನ್ ಬಾಬು, ಖಜಾಂಚಿ ಎಸ್.ಕೆ.ಕುಮಾರ್, ಪತ್ರಕರ್ತರಾದ ಶಿವಕುಮಾರ್, ಬರಗೂರು ವಿರೂಪಾಕ್ಷಪ್ಪ, ಪಿಡಿಒ ನಾಗರಾಜ್ ಸೇರಿದಂತೆ ತಾಲೂಕಿನ ಎಲ್ಲಾ ಪತ್ರಕರ್ತರು ಹಾಜರಿದ್ದರು.