ಪೋಕ್ಸೋ, ಬಾಲ್ಯ ವಿವಾಹ ನಿಷೇದ ಕಾಯ್ದೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಎಸ್‌ಪಿ ಕುಶಲ್ ಚೌಕ್ಸೆ ಅಭಿಮತ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣಗಳ ಸಂಖ್ಯೆ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಹೇಳಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಸಂಯುಕ್ತಾಶ್ರಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಮಟ್ಟದ ಮಹಿಳೆಯರ ಮಕ್ಕಳ ರಕ್ಷಣಾ ಕಾವಲು ಸಮಿತಿ ಸದಸ್ಯರಿಗೆ ಸಾಮರ್ಥ್ಯ ಬಲವರ್ಧನೆ ಪೋಕ್ಸೋ, ಬಾಲ್ಯ ವಿವಾಹ ನಿಷೇದ ಕಾಯ್ದೆ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಮೇಲಿನ ಅಪರಾಧ ಕೃತ್ಯಗಳನ್ನು ತಡೆಗಟ್ಟುವುದು ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ಪಂಚಾಯತ್ ರಾಜ್ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಗ್ರಾಮ ಮಟ್ಟದಲ್ಲಿಯೇ ಅಪಾಯದಲ್ಲಿರುವ ಮಕ್ಕಳನ್ನು ಗುರುತಿಸಿ ರಕ್ಷಣೆ ನೀಡಬೇಕು ಎಂದು ಹೇಳಿದರು.


ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೆಲವೆಡೆ ಮಕ್ಕಳ ಮೇಲೆ ಸ್ವಂತ ತಂದೆ-ತಾಯಿ, ಸಹೋದರರು ಹಾಗೂ ಆಪ್ತ ಬಂಧುಗಳಿಂದಲೇ ದೌರ್ಜನ್ಯ ನಡೆಯುತ್ತಿರುವ ಘಟನೆಗಳು ಸಮಾಜದ ನೈತಿಕ ಮೌಲ್ಯಗಳ ಕುಸಿತವನ್ನು ಪ್ರತಿಬಿಂಬಿಸುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಮಹಿಳಾ ಮತ್ತು ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ, ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ, ಮಕ್ಕಳ ಹಕ್ಕುಗಳು ಹಾಗೂ ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣೆಗಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಮಕ್ಕಳ ಸುರಕ್ಷತೆಗಾಗಿ ಸಮನ್ವಯದ ಕಾರ್ಯವೈಖರಿ ಮತ್ತು ಸಮುದಾಯದ ಸಕ್ರಿಯ ಪಾಲ್ಗೊಳ್ಳುವಿಕೆಯೇ ಪರಿಣಾಮಕಾರಿ ಪರಿಹಾರ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಒತ್ತಿಹೇಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿದ್ಧಪಡಿಸಲಾದ ವಿಶೇಷ ಗೋಡೆ ಫಲಕಗಳನ್ನು ವೇದಿಕೆಯ ಗಣ್ಯರು ಉದ್ಘಾಟಿಸಿದರು.

ಈ ಜಾಗೃತಿ ಫಲಕಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಿ, ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯಡಿ ಮಕ್ಕಳ ಹಕ್ಕುಗಳು, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸಂಶಯಾಸ್ಪದ ಪ್ರಕರಣಗಳನ್ನು ತಕ್ಷಣವೇ ಸಂಬಂಧಿತ ಅಧಿಕಾರಿಗಳಿಗೆ ಮಾಹಿತಿ ನೀಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತೀಕ್ ಪಾಷಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೆಂಕಟೇಶ್ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದ ರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಮೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಮುನಿನಾರಾಯಣಸ್ವಾಮಿ ಮತ್ತಿತರರು ಇದ್ದರು.

ಸಿಕೆಬಿ-1 ನಗರದ ಕನ್ನಡ ಭವನದಲ್ಲಿ ಬಾಲ್ಯ ವಿವಾಹ ತಡೆ ಹಾಗೂ ಪೋಕ್ಸೋ ಕಾಯ್ದೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ವಿಶೇಷ ಗೋಡೆ ಫಲಕಗಳನ್ನು ವೇದಿಕೆಯ ಗಣ್ಯರು ಉದ್ಘಾಟಿಸಿದರು.