ಕಾರಟಗಿ: ಕಲ್ಯಾಣ ಕರ್ನಾಟಕ ಭಾಗದ ರಾಜ್ಯ ಸರ್ಕಾರಿ ನೌಕರರಿಗೆ ಮುಂಬಡ್ತಿ ಹಾಗೂ ವರ್ಗಾವಣೆಯಲ್ಲಿ ಆಗುತ್ತಿರುವ ಅನ್ಯಾಯ ಸರಿಪಡಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸಂಘಕ್ಕೆ ಮನವಿ ಮಾಡಿಕೊಳ್ಳುವಂತೆ ಕಾರಟಗಿ ತಾಲೂಕು ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಿಗೆ ಪಟ್ಟಣದ ಪಾಲಿಟೆಕ್ನಿಕ್ ಕಾಲೇಜಿನ ನೌಕರರು ಶುಕ್ರವಾರ ಮನವಿ ಸಲ್ಲಿಸಿದರು.

ಪಟ್ಟಣದ ಖಜಾನೆ ಇಲಾಖೆಯ ಆವರಣದಲ್ಲಿ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ತೊಂಡಿಹಾಳಗೆ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ಆಗುತ್ತಿರುವ ಅನ್ಯಾಯಗಳ ಕುರಿತು ವಿಸ್ತೃತವಾದ ಮನವಿ ಪಾಲಿಟೆಕ್ನಿಕ್ ಕಾಲೇಜಿನ ನೌಕರರು,ಸಿಬ್ಬಂದಿ ಸಲ್ಲಿಸಿದರು.

ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಮಂಜುನಾಥ್ ಹಿರೇಮಠ ಮಾತನಾಡಿ, ಸರ್ಕಾರದ ಆದೇಶದಂತೆ ಕಲ್ಯಾಣ ಕರ್ನಾಟಕ ಪ್ರದೇಶದ ನೌಕರರಿಗೆ ನೀಡಬೇಕಾದ ಶೇ. 8% ವಿಶೇಷ ಮೀಸಲಾತಿ ಜಾರಿಗೆ ತರಲಾಗುತ್ತಿಲ್ಲ. ವಿಶೇಷವಾಗಿ, 371(ಜ) ವಿಧಾನದಡಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ನೀಡಬೇಕಾದ ಹಕ್ಕು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿಲ್ಲ. ಮುಂಬಡ್ತಿ ಹಾಗೂ ವರ್ಗಾವಣೆಯಲ್ಲಿ ಸಂಯುಕ್ತ ಪಟ್ಟಿ ಅನುಸರಿಸುವುದರಿಂದ ಈ ಭಾಗದ ನೌಕರರಿಗೆ ಅನ್ಯಾಯವಾಗುತ್ತಿದೆ. ಹುದ್ದೆ ಭರ್ತಿಯಲ್ಲಿ ಹಾಗೂ ಹಿರಿತನ ನಿಗದಿಯಲ್ಲಿ ಮೀಸಲಾತಿ ನಿಯಮ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ಇತರ ಜಿಲ್ಲೆಗಳಿಗೆ ಹೋಲಿಸಿದರೆ ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ಅವಕಾಶ ಕಡಿಮೆಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿ, ಕೂಡಲೇ ರಾಜ್ಯ ಸರ್ಕಾರಿ ನೌಕರರ ಸಂಘದ ಮೇಲೆ ಕಾರಟಗಿ ತಾಲೂಕಾಧ್ಯಕ್ಷರು ಬೇಡಿಕೆಗಳ ಪ್ರಸ್ತಾವನೆ ಸಲ್ಲಿಸಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು.ಈ ಹಿನ್ನೆಲೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ಹೊರಡಿಸಿ, ಕಲ್ಯಾಣ ಕರ್ನಾಟಕ ಭಾಗದ ನೌಕರರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ನೌಕರರ ಸಂಘದ ಅಧ್ಯಕ್ಷ ಹನುಮಂತಪ್ಪ ತೊಂಡಿಹಾಳ, ನಮ್ಮ ಭಾಗದ ನೌಕರರಿಗೆ ಆಗಿರುವ ಅನ್ಯಾಯ, ಸಮಸ್ಯೆಗಳ ಬೇಡಿಕೆಯ ಮನವಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸಂಘಕ್ಕೆ ನಿಮ್ಮ ಅಹವಾಲನ್ನು ಪ್ರಾಮಾಣಿಕವಾಗಿ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯ ಮೋಹನ್ ದಾಸರ್, ಕಚೇರಿ ಅಧೀಕ್ಷಕ ಹಾಗೂ ಸುರೇಶ್ ಸಿ,ಕಚೇರಿ ಅಧೀಕ್ಷಕರು ಉಪಸ್ಥಿತಿ ಇದ್ದರು.