ಭೂಕಬಳಿಕೆ ತಡೆದ ಅಧಿಕಾರಿ ವಿರುದ್ಧ ನಿರ್ಣಯ ಕೈಗೊಂಡ ಪ್ರಕರಣದಲ್ಲಿ ಕೇಸುಕನ್ನಡಪ್ರಭ ವಾರ್ತೆ ಬೆಂಗಳೂರು

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸ್ವತ್ತನ್ನು ವಶಕ್ಕೆ ಪಡೆದುಕೊಳ್ಳಲು ಮುಂದಾಗಿದ್ದ ಪಾಲಿಕೆಯ ಅಧಿಕಾರಿ ವಿರುದ್ಧ ನಿರ್ಣಯ ಕೈಗೊಂಡ ಆರೋಪ ಮೇರೆಗೆ ಮಾಜಿ ಉಪಸಭಾಧ್ಯಕ್ಷ ಎಂ.ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದಾಖಲಿಸಿದ್ದ ದೂರಿನ ಮೇರೆಗೆ ವಿಚಾರಣೆ ನಡೆಸಿದ ನ್ಯಾಯಾಲಯ, ಮೊಕದ್ದಮೆ ದಾಖಲಿಸುವಂತೆ ಸೂಚನೆ ನೀಡಿದೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಗಣೇಶಮಂದಿರ ವಾರ್ಡ್ ವ್ಯಾಪ್ತಿಯ ಬನಗಿರಿ ನಗರದಲ್ಲಿನ ಸರ್ವೇ ನಂಬರ್‌ 125 ಮತ್ತು 126ರ ಜಮೀನು ಸುಮಾರು 350 ಕೋಟಿ ರು. ಮೌಲ್ಯದ್ದಾಗಿದೆ. ಇದು 4.31 ಎಕರೆ ವಿಸ್ತೀರ್ಣವಾಗಿದ್ದು, ಸರ್ಕಾರಿ ಸ್ವತ್ತಿಗೆ 41 ಮಂದಿ ಸರ್ಕಾರಿ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸುವ ಯತ್ನ ನಡೆಸಿದ್ದರು. ಈ ಸಂಬಂಧ ಲೋಕಾಯುಕ್ತ ಮತ್ತು ಬಿಎಂಟಿಎಫ್ ನಲ್ಲಿ ದೂರು ಸಲ್ಲಿಸಲಾಗಿತ್ತು ಎಂದು ಎನ್‌.ಆರ್‌.ರಮೇಶ್‌ ದೂರಿನಲ್ಲಿ ಉಲ್ಲೇಖಿಸಿದ್ದರು. ಸದನ ಸಮಿತಿಯ ಅಧ್ಯಕ್ಷರೂ ಆಗಿದ್ದ ಮಾಜಿ ಉಪಾಧ್ಯಕ್ಷ ಕೃಷ್ಣಾರೆಡ್ಡಿ ಅವರು ಆರೋಪಿಗಳ ವಿರುದ್ಧ ಕ್ರಮಕ್ಕೆ ಆದೇಶಿಸುವ ಬದಲಾಗಿ, ಪಾಲಿಕೆಯ ಸ್ವತ್ತನ್ನು ಪಾಲಿಕೆಯ ವಶಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದ ಅಧಿಕಾರಿಯ ವಿರುದ್ಧವೇ ನಿರ್ಣಯ ತೆಗೆದುಕೊಂಡಿದ್ದರು. ಇದನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ಎನ್‌.ಆರ್‌.ರಮೇಶ್‌ ದಾಖಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಕ್ರಿಮಿನಲ್‌ ಮೊಕದ್ದಮೆ ದಾಖಲಿಸುವಂತೆ ಆದೇಶಿಸಿದೆ.