ಸಾರಾಂಶ
* ಮೊದಲ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸಲಹೆ
ಕನ್ನಡಪ್ರಭ ವಾರ್ತೆ ದಾವಣಗೆರೆನೆರೆ ರಾಜ್ಯಗಳಾದ ಕೇರಳ, ತಮಿಳುನಾಡಿನಲ್ಲಿ ಕೋವಿಡ್ನ ರೂಪಾಂತರ ತಳಿಯಾದ ಜೆಎನ್-1 ವರದಿಯಾಗಿದ್ದು ರಾಜ್ಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮತ್ತು ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಪಾಲಿಸಿ ಸಾರ್ವಜನಿಕರು ಆತಂಕಪಡದೆ ಎಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕೋವಿಡ್ನ ಮೊದಲ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದಲ್ಲಿ 70 ಸಕ್ರಿಯ ಪ್ರಕರಣಗಳಿವೆ, ಆದರೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದರು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸೋಂಕಿನ ಲಕ್ಷಣಗಳಿರುವವರು ತಕ್ಷಣವೇ ವೈದ್ಯರ ಭೇಟಿಯಾಗಿ ಚಿಕಿತ್ಸೆ ಪಡೆಯಿರಿ ಮತ್ತು ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಮತ್ತು ಕಿಡ್ನಿ, ಹೃದಯ, ಲಿವರ್ ಸಮಸ್ಯೆಯಿಂದ ಬಳಲುತ್ತಿರುವವರು, ಗರ್ಭೀಣಿಯರು, ತಾಯಂದಿರು ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು ಎಂದರು.
ಅಗತ್ಯ ಗಾಳಿ, ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯ ಪ್ರದೇಶಗಳಿಗೆ ತೆರಳದಂತೆ ಕ್ರಮ ವಹಿಸುವುದು ಅಗತ್ಯ ಎಂದರು. ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿರುವುದು ಸೂಕ್ತವಾಗಿದ್ದು ಸಾಮಾಜಿಕ ಅಂತರ, ಮಾಸ್ಕ್ ಧರಿಸಿ ಸ್ವಯಂ ನಿಯಂತ್ರಣ ಹೊಂದುವ ಮೂಲಕ ಎಚ್ಚರಿಕೆ ವಹಿಸಬೇಕು. ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದನ್ನು ಮಾಡಬೇಕು ಎಂದು ಹೇಳಿದರು.ಐಎಲ್ಐ, ಸಾರಿ ಪ್ರಕರಣ ಹೆಚ್ಚಳ:
ಡಿಸೆಂಬರ್ ಮತ್ತು ಜನವರಿ ತಿಂಗಳಲ್ಲಿ ಈ ಪ್ರಕರಣಗಳು ಹೆಚ್ಚಲಿದ್ದು ಆತಂಕಪಡುವ ಅಗತ್ಯವಿರುವುದಿಲ್ಲ, ಆದರೂ ಬಹಳ ಮುನ್ನಚ್ಚರಿಕೆ ವಹಿಸಬೇಕಾಗಿದೆ. ಇಂತಹ ಪ್ರಕರಣಗಳು ಕಂಡು ಬಂದಾಗ ಎಕ್ಸ್ ರೇ ಮತ್ತು ಸಿಟಿ ಸ್ಕ್ಯಾನ್ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದರು.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಚಿಗಟೇರಿ ಆಸ್ಪತ್ರೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗೇಂದ್ರಪ್ಪ, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ.ರಾಘವನ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರುದ್ರಸ್ವಾಮಿ, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಮಂಜುನಾಥ್ ಪಾಟೀಲ್, ಪಾಲಿಕೆ ಆಯುಕ್ತರಾದ ರೇಣುಕಾ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹಂತೇಶ್ ಉಪಸ್ಥಿತರಿದ್ದರು. ಔಷಧ ದಾಸ್ತಾನು, ಪ್ರತ್ಯೇಕ ವಾರ್ಡ್ಗಳಿಗೆ ಸೂಚನೆ
ಕೋವಿಡ್ ವರದಿ ಹಿನ್ನೆಲೆಯಲ್ಲಿ ಕೋವಿಡ್ ಚಿಕಿತ್ಸೆಗೆ ಬೇಕಾದ ಔಷಧಗಳ ದಾಸ್ತಾನು ಮತ್ತು ಆಸ್ಪತ್ರೆಗಳಲ್ಲಿ ಪ್ರತ್ಯೇಕ ಕೋವಿಡ್ ವಾರ್ಡ್ಗಳ ಸಿದ್ಧತೆ ಮಾಡಿಟ್ಟು ಚಿಕಿತ್ಸೆಗೆ ಬೇಕಾದ ಆಕ್ಸಿಜನ್, ವೆಂಟಿಲೇಟರ್ಗಳ ಸಿದ್ಧ ಮಾಡಿಕೊಂಡಿರಬೇಕು. ಕೋವಿಡ್ ಪತ್ತೆಗೆ ರ್ಯಾಪಿಡ್ ಕಿಟ್ ಮತ್ತು ಆರ್ಟಿಪಿಸಿಆರ್ ಲ್ಯಾಬ್ ಸಿದ್ಧ ಮಾಡಿಕೊಳ್ಳಲು ಆರೋಗ್ಯಾಧಿಕಾರಿಗೆ ತಿಳಿಸಿ ಕೋವಿಡ್ ಚಿಕಿತ್ಸೆ ಬಗ್ಗೆ ವೈದ್ಯರು ಮತ್ತು ಇತರೆ ಸಿಬ್ಬಂದಿಗೆ ತರಬೇತಿ ಏರ್ಪಡಿಸಲು ಜಿಲ್ಲಾಧಿಕಾರಿ ವೆಂಕಟೇಶ್ ತಿಳಿಸಿದರು.........