ಸಾರಾಂಶ
ಬೆಂಗಳೂರು : ರಾಜ್ಯದ ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ, ಮೇಕೆ ಸೇರಿದಂತೆ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಕುರಿತಂತೆ ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರದ ಮೂಲಕ ಸೂಚನೆ ನೀಡಿರುವ ಈಶ್ವರ್ ಖಂಡ್ರೆ, ರಾಜ್ಯದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡಲಾಗುತ್ತಿದೆ. ಅದರಿಂದಾಗಿ ಅರಣ್ಯದಲ್ಲಿನ ಸಣ್ಣಪುಟ್ಟ ಸಸಿಗಳು ಹಾಳಾಗುತ್ತಿದ್ದು, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಸ್ಯಾಹಾರಿ ವನ್ಯಜೀವಿಗಳಿಗೂ ಮೇವಿನ ಕೊರತೆ ಎದುರಾಗುವಂತಾಗುತ್ತಿದೆ. ಅದರ ಜತೆಗೆ ಜಾನುವಾರುಗಳು ಕಾಡಿಗೆ ಮೇಯಲು ಹೋದಾಗ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತದೆ ಎಂಬ ದೂರುಗಳಿವೆ ಎಂದಿದ್ದಾರೆ.
ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಅದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಲಿದೆ. ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲು ನಿಯಮದಲ್ಲಿ ಅವಕಾಶವಿಲ್ಲ. ಹೀಗಾಗಿ ಕೂಡಲೇ ಅರಣ್ಯ ಪ್ರದೇಶಗಳಲ್ಲಿ ಮೇಕೆ, ಕುರಿ, ದನ-ಕರುಗಳು ಸೇರಿದಂತೆ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿದ್ದು, ಆ ಬಗ್ಗೆ ಪರಿಶೀಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ ಕೂಡ ತಮಿಳುನಾಡು ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ತೀರ್ಪು ನೀಡಿದೆ. ಪರಿಣಾಮವಾಗಿ ತಮಿಳುನಾಡು ರಾಜ್ಯದಿಂದಲೂ ನಮ್ಮ ರಾಜ್ಯದ ಅರಣ್ಯ ಪ್ರದೇಶಕ್ಕೆ ದನ-ಕರುಗಳನ್ನು ತಂದು ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಬೇಕು ಎಂದು ಆದೇಶಿಸಿದ್ದಾರೆ.
- ಇತ್ತೀಚೆಗೆ ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು
- ದನಗಾಹಿಗಳು ವಿಷ ಸವರಿದ್ದ ದನವನ್ನು ತಿಂದು ಹುಲಿ ಬಲಿ
- ಇದರ ಬೆನ್ನಲ್ಲೇ ಕಾಡಲ್ಲಿ ಜಾನುವಾರು ಮೇಯಿಸುವಿಕೆ ನಿಷೇಧ
- ಕಾಡಲ್ಲಿ ದನ-ಕರು, ಕುರಿ, ಮೇಕೆ ಮೇಯಿಸುವಿಕೆ ನಿರ್ಬಂಧ