ರಾಮನಗರ: ರೈತರು ಆರ್ಥಿಕವಾಗಿ ಸದೃಢರಾಗಲು ಹೈನುಗಾರಿಕೆ ಅತಿ ಮುಖ್ಯ. ಹಸುಗಳು ಮೃತಪಟ್ಟಾಗ ರೈತರು ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ ಬೆಂಗಳೂರು ಹಾಲು ಒಕ್ಕೂಟ (ಬಮೂಲ್ )ವೇ 1 ಲಕ್ಷ 20 ಸಾವಿರ ರು.ಗಳ ವಿಮಾ ಸೌಲಭ್ಯ ಜಾರಿಗೊಳಿಸುತ್ತಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.
ನಗರದ ಆರ್ ವಿಸಿಎಸ್ ಕಲ್ಯಾಣ ಮಂಟಪದಲ್ಲಿ ಬಮೂಲ್ ಕಲ್ಯಾಣ ಟ್ರಸ್ಟ್ ಮತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅತಿ ಹೆಚ್ಚು ಹಾಲು ಪೂರೈಸಿದ ರೈತರಿಗೆ ಕ್ಯಾನ್ ಗಳನ್ನು ವಿತರಿಸುವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಈ ಮೊದಲು ಹಸುಗಳಿಗೆ 80 ಸಾವಿರ ರುಪಾಯಿ ವಿಮೆ ಮಾಡಿಸಲಾಗುತ್ತಿತ್ತು. ಅದನ್ನು 1.20 ಲಕ್ಷ ರುಪಾಯಿಗೆ ಹೆಚ್ಚಿಸಿ ವಿಮೆ ಮಾಡಿಸುತ್ತಿದ್ದೇವೆ. ಹಸುಗಳು ಮರಣ ಹೊಂದಿದರೆ 15 ದಿನದೊಳಗೆ ಪರಿಹಾರ ಸಿಗುವಂತೆ ಕ್ರಮ ವಹಿಸಲಾಗಿದೆ. ಹಸುಗಳಿಗೆ ವಿಮೆ ಮಾಡಿಸುವ ವಿಚಾರದಲ್ಲಿ ರೈತರು ಬುದ್ಧಿವಂತಿಕೆ ಪ್ರದರ್ಶಿಸಿ ನಷ್ಟಕ್ಕೀಡಾಗುವುದು ಬೇಡ. ವಿಮೆ ಮಾಡಿಸಿದ ಎಲ್ಲ ಹಸುವಿನ ಫೋಟೋ ಸಂಗ್ರಹಿಸಲಾಗುತ್ತಿದೆ ಎಂದರು.
ಬಮೂಲ್ ಗಳಿಸಿದ ಲಾಭದಲ್ಲಿ ಪ್ರತಿ ಲೀಟರ್ ಗೆ 1 ರುಪಾಯಿ ಪ್ರೋತ್ಸಾಹಧನ ಹೈನುಗಾರರ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ. ಬಮೂಲ್ ಕಲ್ಯಾಣ ಟ್ರಸ್ಟ್ ಮೂಲಕ ಪ್ರತಿಭಾ ಪುರಸ್ಕಾರ, ಕ್ಯಾನ್ ಗಳ ವಿತರಣೆ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ರೈತರಿಗೆ 1.19 ಕೋಟಿ ಲಕ್ಷ ರುಪಾಯಿ ತಲುಪುವಂತೆ ಮಾಡುತ್ತಿದ್ದೇವೆ. ಈಗ 3354 ರೈತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಕ್ಕಳನ್ನು ಗುರುತಿಸಲಾಗುವುದು ಎಂದು ತಿಳಿಸಿದರು.ಬಮೂಲ್ ನಿರ್ದೇಶಕ ಪಿ.ನಾಗರಾಜ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮನವೊಲಿಸಿ ಡಿ.ಕೆ.ಸುರೇಶ್ ಅವರನ್ನು ಬೆಂಗಳೂರು ಹಾಲು ಒಕ್ಕೂಟಕ್ಕೆ ಅಧ್ಯಕ್ಷರನ್ನಾಗಿ ಮಾಡಿದೆವು. ಹಾಲು ಉತ್ಪಾದಕರು ಹಾಗೂ ಹೈನುಗಾರಿಕೆ ಕ್ಷೇತ್ರದ ಅವಲಂಬಿತರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂಧು ಸಹಕಾರ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತಂದಿದ್ದಾರೆ ಎಂದರು.
ಈ ವೇಳೆ ಬಮೂಲ್ ವ್ಯವಸ್ಥಾಪಕ ನಿರ್ದೇಶಕ ಸುರೇಶ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕೆ.ರಾಜು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಯರೇಹಳ್ಳಿ ಮಂಜು, ಜಿಪಂ ಮಾಜಿ ಅಧ್ಯಕ್ಷ ರಮೇಶ್, ತಾಪಂ ಮಾಜಿ ಅಧ್ಯಕ್ಷರಾದ ಡಿ.ಎಂ.ಮಹದೇವಯ್ಯ, ಪ್ರಾಣೇಶ್, ರಾಮನಗರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ಎಚ್. ರಾಜು, ಬಿಡದಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಗಂಗಾಧರ್ ಗೌಡ, ಗ್ರಾಪಂ ಮಾಜಿ ಅಧ್ಯಕ್ಷರಾದ ರಾಮಯ್ಯ, ಪ್ರಭು, ಮುಖಂಡರಾದ ಜಯಣ್ಣ, ಭೖರೇಗೌಡ, ಕೆ. ರವಿ, ಕೆಂಪರಾಮು, ಜಯರಾಮಯ್ಯ ಮತ್ತಿತರರು ಉಪಸ್ಥಿತರಿದ್ದರು.
1ಕೆಆರ್ ಎಂಎನ್ 1.ಜೆಪಿಜಿ
ರಾಮನಗರದಲ್ಲಿ ಬಮೂಲ್ ಕಲ್ಯಾಣ ಟ್ರಸ್ಟ್ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಅತಿ ಹೆಚ್ಚು ಹಾಲು ಪೂರೈಸಿದ ರೈತರಿಗೆ ಕ್ಯಾನ್ ಗಳನ್ನು ವಿತರಿಸುವ ಸಮಾರಂಭವನ್ನು ಡಿ.ಕೆ.ಸುರೇಶ್ ಉದ್ಘಾಟಿಸಿದರು.