ಮುಂಡರಗಿ: ರಾಜ್ಯ ಹಾಗೂ ದೇಶದ ಕೆಲವು ಭಾಗಗಳಲ್ಲಿ ಗೋಹತ್ಯೆ ನಿರಂತರವಾಗಿ ನಡೆಯುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ತ್ವರಿತವಾಗಿ ಜಾರಿಗೆ ತರಬೇಕು. ಆ ಮೂಲಕ ಗೋವುಗಳ ರಕ್ಷಣೆಗೆ ಮುಂದಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮಂಜುನಾಥ ಇಟಗಿ ಒತ್ತಾಯಿಸಿದರು.
ಸೋಮವಾರ ತಾಲೂಕು ಗೋಮಾತಾ ಗೌರವ ಅಭಿಯಾನದ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ, ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಸರ್ಕಾರವು ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿ ಮಾತನಾಡಿದರು.ಗೋಹತ್ಯೆ ಹಾಗೂ ಗೋವುಗಳ ಸಾಗಾಟಕ್ಕೆ ಹಲವಾರು ಕಾಯ್ದೆ ಕಾನೂನುಗಳಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಇದರಿಂದಾಗಿ ಗೋಹತ್ಯೆ ಹಾಗೂ ಗೋವು ಸಾಗಾಣಿಕೆಗಳು ನಿರಂತರವಾಗಿ ನಡೆಯುವಂತಾಗಿದೆ. ಬಡ ರೈತರು ಸಕಾಲದಲ್ಲಿ ಹೊಟ್ಟು, ಮೇವು ದೊರೆಯದೆ ತಮ್ಮ ಹಸುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ತಾಲೂಕಿನ ಹಲವು ಭಾಗಗಳಲ್ಲಿ ಗೋಶಾಲೆಗಳನ್ನು ತೆರೆಯಬೇಕು ಎಂದರು.
ಬಿಜೆಪಿ ಮುಂಡರಗಿ ಮಂಡಲದ ಅಧ್ಯಕ್ಷ ಕುಮಾರಸ್ವಾಮಿ ಹಿರೇಮಠ ಮಾತನಾಡಿ, ನಮ್ಮ ಧರ್ಮದಲ್ಲಿ ಗೋವಿಗೆ ಮಹತ್ತರವಾದ ಸ್ಥಾನಮಾನವಿದೆ. ಗೋಮಾತೆಯನ್ನು ರಾಷ್ಟ್ರೀಯ ತಾಯಿ ಎಂದು ಪರಿಗಣಿಸಬೇಕು. ಗೋ ಸಂರಕ್ಷಣೆ ಹಾಗೂ ಗೋಸೇವೆಗಾಗಿ ವಿಶೇಷ ಕಾಯ್ದೆ, ಕಾನೂನುಗಳನ್ನು ರಚಿಸಬೇಕು ಎಂದರು.ಈ ಸಂದರ್ಭದಲ್ಲಿ ಬಸವರಾಜ ಬಿಳಿಮಗ್ಗದ, ಪ್ರಶಾಂತ ಗುಡದಪ್ಪನವರ, ಪವನ ಮೇಟಿ, ನವೀನ ಲಮಾಣಿ, ಮೈಲಾರೆಪ್ಪ ಕಲಕೇರಿ, ಸಿದ್ದು ದೇಸಾಯಿ, ಮಂಜುನಾಥ ಮುಧೋಳ, ರವಿ ಪಾಟೀಲ, ಸುಭಾಷ ಕ್ವಾಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬಡತನ ಸಾಧನೆಗೆ ಅಡ್ಡಿಯಲ್ಲ: ಸಚಿವ ಎಚ್.ಕೆ. ಪಾಟೀಲ
ಗದಗ: ಬಡತನ ಸಾಧನೆಗೆ ಅಡ್ಡಿಯಲ್ಲ. ಅದನ್ನು ಗದಗ ಜಿಲ್ಲೆಯ ವಿದ್ಯಾರ್ಥಿಗಳು ಸಾಧಿಸಿ ತೋರಿಸಿದ್ದಾರೆ ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.ಭಾನುವಾರ ಸಂಜೆ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆಗೈದ ಜಿಲ್ಲೆಯ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದರು. ವಿದ್ಯಾರ್ಜನೆಗೆ ಬಡತನ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಜಿಲ್ಲೆಯ ವಿದ್ಯಾರ್ಥಿಗಳ ಸಾಧನೆಯೇ ಸ್ಪಷ್ಟ ಉದಾಹರಣೆ. ಬಡತನವನ್ನು ನೆಪ ಮಾಡದೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಶಿಕ್ಷಣದಲ್ಲಿ ಮುನ್ನಡೆಯಬೇಕು ಎಂದರು.ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನ ನೀಡುತ್ತಿರುವುದನ್ನು ಉಲ್ಲೇಖಿಸಿದ ಅವರು, ಅದರ ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಲು ವಿದ್ಯಾರ್ಥಿಗಳು ಮುಂದಾಗಬೇಕು, ಜಿಲ್ಲೆಯ ಮಕ್ಕಳು ಶೈಕ್ಷಣಿಕವಾಗಿ ಇನ್ನಷ್ಟು ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಲಿ. ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಪಾಲಕರು ನಿರ್ಲಕ್ಷ್ಯ ತೋರಬಾರದು. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ.ಜಿಲ್ಲೆಯ ಒಟ್ಟು ಫಲಿತಾಂಶ ಸುಧಾರಣೆಗೆ ಶ್ರಮಿಸಿದ ಜಿಲ್ಲಾಡಳಿತ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಗೂ ಶಿಕ್ಷಕ ವೃಂದಕ್ಕೆ ಅಭಿನಂದನೆ ಸಲ್ಲಿಸಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಶೋಕ ಮಂದಾಲಿ, ಜಿಪಂ ಮಾಜಿ ಅಧ್ಯಕ್ಷ ಸಿದ್ದು ಪಾಟೀಲ, ಎಸ್.ಎನ್. ಬಳ್ಳಾರಿ, ಫಾರೂಕ್ ಹುಬ್ಬಳ್ಳಿ, ಬಸವರಾಜ ಕಡೇಮನಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಡಿಡಿಪಿಐ ಆರ್.ಎಸ್. ಬುರಡಿ ಸೇರಿದಂತೆ ಅನೇಕರು ಇದ್ದರು.