ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನೆಪದಲ್ಲಿ ಅಡುಗೆ ಅನಿಲದ ಬೆಲೆ ಏರಿಸಿರುವುದು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ
ಹಗರಿಬೊಮ್ಮನಹಳ್ಳಿ: ಅಡುಗೆ ಅನಿಲದ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸಿಪಿಐ ಪದಾಧಿಕಾರಿಗಳು, ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಅಂಗವಾಗಿ ತಹಸೀಲ್ದಾರ್ ಕಚೇರಿಯಿಂದ ಬಸವೇಶ್ವರ ವೃತ್ತವರೆಗೂ ಪಾದಯಾತ್ರೆ ನಡೆಸಿ ವೃತ್ತದಲ್ಲಿ ಧರಣಿ ನಡೆಸಿದರು.ಪಕ್ಷದ ತಾಲೂಕು ಕಾರ್ಯದರ್ಶಿ ಕೆ.ಗಂಗಾಧರ ಮಾತನಾಡಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆ ಇದ್ದ ಸಂದರ್ಭದಲ್ಲಿ ಪೆಟ್ರೋಲಿಯಮ್ ಉತ್ಪನ್ನಗಳ ಬೆಲೆಗಳನ್ನು ಕಡಿಮೆ ಮಾಡದ ಕೇಂದ್ರ ಸರ್ಕಾರ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ನೆಪದಲ್ಲಿ ಅಡುಗೆ ಅನಿಲದ ಬೆಲೆ ಏರಿಸಿರುವುದು ಕೇಂದ್ರ ಸರ್ಕಾರದ ಜನವಿರೋಧಿ ನೀತಿಗೆ ಹಿಡಿದ ಕನ್ನಡಿಯಾಗಿದೆ ಎಂದು ಟೀಕಿಸಿದರು.
ಜಿಲ್ಲಾ ಕಾರ್ಯದರ್ಶಿ ಎಚ್.ಸಂತೋಷ್ ಮಾತನಾಡಿ, ಕೇಂದ್ರ ಸರ್ಕಾರ ಕಳೆದ ಮೂರು ತಿಂಗಳಿನಿಂದ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ₹೧೮೦ ಏರಿಕೆ ಮಾಡಿದೆ. ಈಗ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ₹೬೦ ಹೆಚ್ಚಿಸಿದೆ. ಈಗಾಗಲೇ ನಿರಂತರ ಬೆಲೆ ಏರಿಕೆ ಮತ್ತು ಕುಗ್ಗುತ್ತಿರುವ ಆದಾಯದ ಪರಿಣಾಮವಾಗಿ ದೇಶದ ಬಡ ಮತ್ತು ಮಧ್ಯಮ ವರ್ಗದ ದುಡಿಯುವ ಜನರ ಮೇಲೆ ಹೆಚ್ಚಿನ ಆರ್ಥಿಕ ಹೊರೆ ಬೀಳಲಿದೆ ಎಂದು ಕಿಡಿಕಾರಿದರು.ಕೂಡಲೇ ಅಡುಗೆ ಅನಿಲದ ಬೆಲೆ ಏರಿಕೆ ಹಿಂದೆ ಪಡೆದು ದೇಶದ ಜನರಿಗೆ ಒಳಿತು ಮಾಡಬೇಕು. ಸಂಕಷ್ಟದ ಸಂದರ್ಭವನ್ನು ದುರ್ಬಳಕೆ ಮಾಡಿಕೊಂಡು ಸಿಲಿಂಡರ್ ಗಳನ್ನು ಕಾಳಸಂತೆಯಲ್ಲಿ ಮಾರಾಟ ತಡೆಯಲು ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಿಪಿಐ ತಾಲೂಕು ಕಾರ್ಯದರ್ಶಿ ಬಿ.ದಾದಾವಲಿ, ಮುಖಂಡರಾದ ಕೆ.ಮುದಿಯಪ್ಪ, ಲಲಿತಾ, ಕೊಟ್ರೇಶ್, ಗಾಳೆಮ್ಮ, ನಾಗರಾಜ್, ಗಣೇಶ್, ಶಿವಕುಮಾರ್, ವಿಜಯಲಕ್ಷ್ಮೀ ಪಾಲ್ಗೊಂಡಿದ್ದರು.ಹಗರಿಬೊಮ್ಮನಹಳ್ಳಿಯಲ್ಲಿ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಸಿಪಿಐ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.