ಚನ್ನಪಟ್ಟಣ: ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದ ಕಣ್ವ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಕಪ್ಪಡಿ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೪ ಕೋಟಿ ವೆಚ್ಚದಲ್ಲಿ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು

ಚನ್ನಪಟ್ಟಣ: ತಾಲೂಕಿನ ಮೈಲನಾಯಕನಹಳ್ಳಿ ಗ್ರಾಮದ ಕಣ್ವ ನದಿ ತಟದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಕಪ್ಪಡಿ ಸಿದ್ದಪ್ಪಾಜಿ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೪ ಕೋಟಿ ವೆಚ್ಚದಲ್ಲಿ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಲಾಗುತ್ತಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ತಾಲೂಕಿನ ಇತಿಹಾಸ ಪ್ರಸಿದ್ಧ ಕಪ್ಪಡಿ ಶ್ರೀ ಸಿದ್ದಪ್ಪಾಜಿ ದೇವಸ್ಥಾನಕ್ಕೆ ತೆರಳಲು ಭಕ್ತಾದಿಗಳಿಗೆ ಅನುಕೂಲವಾಗುವಂತೆ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಬಹಳ ವರ್ಷಗಳ ಹಿಂದೆ ಒಂದು ಸಣ್ಣದಾದ ಸೇತುವೆ ಇದ್ದು, ಅದು ಕೆಲ ವರ್ಷಗಳ ಹಿಂದೆ ಕಣ್ವನದಿಯಲ್ಲಿ ಪ್ರವಾಹ ಬಂದ ವೇಳೆ ಕೊಚ್ಚಿಹೋಗ್ತಿತ್ತು. ಅಂದಿನಿಂದ ಇಲ್ಲಿಯವರೆಗೂ ದೇವಸ್ಥಾನಕ್ಕೆಆಗಮಿಸುವ ಭಕ್ತಾದಿಗಳಿಗೆ ಸೇತುವೆ ಇಲ್ಲದೆ ಕಣ್ವ ನದಿಯಲ್ಲಿ ನಡೆದುಕೊಂಡು ಹೋಗುವ ಅನಿವಾರ್ಯತೆ ಇದ್ದುದರಿಂದ ಈ ಭಾಗದ ಗ್ರಾಮಸ್ಥರು ಹಾಗೂ ಭಕ್ತಾದಿಗಳ ಬಹಳ ದಿನದ ಬೇಡಿಕೆಯಿಂದಾಗಿ ಕಾವೇರಿ ನೀರಾವರಿ ಇಲಾಖೆಯಿಂದ ೪ ಕೋಟಿ ವೆಚ್ಚದಲ್ಲಿ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುತ್ತಿದ್ದೇವೆ ಎಂದು ಹೇಳಿದರು.

ಮೈಲನಾಯಕನಹಳ್ಳಿಯಿಂದ ಕಪ್ಪಡಿ ದೇವಸ್ಥಾನಕ್ಕೆ ಎರಡು ಕಡೆ ಓಡಾಡಲು ಸೇತುವೆ, ಚೆಕ್ ಡ್ಯಾಂ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಗುಣಮಟ್ಟದ ಕಾಮಗಾರಿ ಜೊತೆಗೆ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಕಣ್ವ ಜಲಾಶಯದಿಂದ ನೀರು ಕಾವೇರಿ ನದಿಗೆ ಹೋಗಿ ಸೇರುವ ತನಕ ನದಿಯ ಉದ್ದಗಲಕ್ಕೂ ಎಲ್ಲೆಲ್ಲಿ ಅವಶ್ಯಕತೆ ಇದೆಯೋ ಅಲ್ಲಿ ಈಗಾಗಲೇ ಸೇತುವೆಗಳ ನಿರ್ಮಾಣ ಮಾಡಿದ್ದೇವೆ. ಇನ್ನು ಕೆಲವು ಸೇತುವೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಕಣ್ವ ನದಿಗೆ ಅಡ್ಡಲಾಗಿ ಇನ್ನೂ ಎರಡು ಮೂರು ಸೇತುವೆಗಳ ಅವಶ್ಯಕತೆ ಇದ್ದು, ಶೀಘ್ರದಲ್ಲೇ ಅವುಗಳಿಗೂ ಚಾಲನೆ ನೀಡುತ್ತವೆ ಎಂದು ಹೇಳಿದರು.

ತಾಲೂಕಿನ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಕೈಗೊಂಡಿದ್ದು, ಚನ್ನಪಟ್ಟಣದಿಂದ ಗೌಡಗೆರೆ ಮಲ್ಲನಕುಪ್ಪೆ ರಸ್ತೆ ಅಭಿವೃದ್ಧಿ ಜೊತೆಗೆ ಚನ್ನಪಟ್ಟಣ ನಗರದಿಂದ ರಾಮಮ್ಮನಕೆರೆ ಏರಿವೆರೆಗೆ ಡಬಲ್ ರಸ್ತೆ ನಿರ್ಮಾಣ, ಸಾತನೂರು ಸರ್ಕಲ್‌ನಿಂದ ಹೊಂಗನೂರು, ಕಬ್ಬಾಳು ದೇವಸ್ಥಾನದವರೆಗೆ ಡಬಲ್ ರಸ್ತೆ ನಿರ್ಮಾಣ, ಕೂಡ್ಲೂರು ಹಾಗೂ ಸಂತೆಮೊಗೇನಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಗಲೀಕರಣಕ್ಕೆ ಶೀಘ್ರವೇ ಚಾಲನೆ ನೀಡುತ್ತೇವೆ ಎಂದು ಹೇಳಿದರು.

ಇದಲ್ಲದೇ ನಗರದ ಸಾರ್ವಜನಿಕ ಆಸ್ಪತ್ರೆಯನ್ನು ೨೦೦ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲು ಕ್ರಮಕೈಗೊಳ್ಳಲಾಗುವುದು. ನಗರದ ಖಾಸಗಿ ಬಸ್ ನಿಲ್ದಾಣ ಕಾಮಗಾರಿಗೆ ಇರುವ ಅಡ್ಡಿಯನ್ನು ನಿವಾರಿಸಲು ಕ್ರಮಕೈಗೊಳ್ಳಲಾಗಿದೆ. ಇದರೊಂದಿಗೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯವರೇ ಆದ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿರುವುದ ಸಾಕಷ್ಟು ಶಕ್ತಿ ನೀಡಿದ್ದು, ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದರು.

ಈ ವೇಳೆ ಕಾಂಗ್ರೆಸ್ ಮುಖಂಡರಾದ ರಾಂಪುರ ಮಲವೇಗೌಡ, ಕರಣ್ ಆನಂದ್, ರಾಂಪುರ ವೇಣು, ಎಂ.ಎನ್.ರವಿಕುಮಾರ್, ಕಾವೇರಿ ನೀರಾವರಿ ಇಲಾಖೆಯ ಅಧಿಕಾರಿಗಳಾದ ಸುರೇಶ್, ಶ್ರೀಕಾಂತ ಮುಂತಾದವರಿದ್ದರು.

ಪೊಟೋ೮ಸಿಪಿಟಿ೧: ಚನ್ನಪಟ್ಟಣ ತಾಲೂಕಿನ ಕಪ್ಪಡಿ ಶ್ರೀ ಸಿದ್ದಪ್ಪಾಜಿ ದೇವಸ್ಥಾನದ ಬಳಿ ಕಣ್ವ ನದಿಗೆ ಅಡ್ಡಲಾಗಿ ಸೇತುವೆ ಮತ್ತು ಬ್ಯಾರೇಜ್ ನಿರ್ಮಾಣಕ್ಕೆ ಶಾಸಕ ಸಿ.ಪಿ.ಯೋಗೇಶ್ವರ್ ಭೂಮಿಪೂಜೆ ನೆರವೇರಿಸಿದರು.