ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಸಾವು

| Published : Jan 29 2024, 01:33 AM IST

ಸಾರಾಂಶ

ಬೆಳ್ತಂಗಡಿ ಪಟಾಕಿ ತಯಾರಿಕಾ ಘಟಕದಲ್ಲಿ ಉಂಟಾದ ಸ್ಫೋಟಕ್ಕೆ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿವೆ. 4 ಕಿ.ಮೀ. ದೂರಕ್ಕೆ ಸದ್ದು ಕೇಳಿಸಿದ್ದು, ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ವೇಣೂರು ಪೊಲೀಸ್ ಠಾಣೆ ವ್ಯಾಪ್ತಿಯ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ತಯಾರಿಕಾ ಘಟಕದಲ್ಲಿ ಸಂಜೆ 5 ಗಂಟೆಗೆ ಸ್ಫೋಟ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ.

ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಉಳಿದಂತೆ ಹಾಸನದ ದಿನೇಶ, ಕಿರಣ, ಕುಮಾರ, ಕಲ್ಲೇಶ, ಕೇರಳದ ಪ್ರೇಮ್‌, ಕೇಶವ ಕೆಲಸ ನಿರ್ವಹಿಸುತ್ತಿದ್ದರು.

ಕುಚ್ಚೋಡಿಯ ಸಾಲಿಡ್ ಫೈಯರ್ ವರ್ಕ್ಸ್‌ ಎಂಬ ಘಟಕದಲ್ಲಿ ಘಟನೆ ನಡೆದಿದ್ದು, ಅಲ್ಲಿನ ಪರಿಸ್ಥಿತಿ ಭಯಾನಕವಾಗಿದೆ. ಸುಮಾರು 5 ಬಾರಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.100 ಮೀ. ದೂರಕ್ಕೆ ದೇಹ: ಮೃತಪಟ್ಟ ಮೂವರು, ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಸ್ಥಳದಲ್ಲಿ ಶೆಡ್ ಸಂಪೂರ್ಣ ಧ್ವಂಸವಾಗಿದ್ದು, ಇದರ ಸದ್ದು 4 ಕಿ.ಮೀ. ವ್ಯಾಪ್ತಿಯಷ್ಟು ದೂರಕ್ಕೆ ಕೇಳಿಸಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸ್ಥಳಕ್ಕೆ ಡಿವೈಎಸ್ ಪಿ ವಿಜಯ ಪ್ರಸಾದ್ ಸಹಿತ ವೇಣೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಫೋಟಕ್ಕೆ ಕಾರಣವೇನು ಎನ್ನುವುದರ ಪತ್ತೆಗೆ ತನಿಖೆ ನಡೆಸಲಾಗುತ್ತಿದೆ.