ಸಾರಾಂಶ
ರಾಮನಗರ: ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಜನರಲ್ಲಿ ಸರ್ಕಾರವು ಅಭಿವೃದ್ಧಿ ನಿಗಮದ ಮೂಲಕ ಜಾರಿಗೊಳಿಸಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸುವಂತೆ ದೇವರಾಜ ಅರಸು ಅಭಿವೃದ್ಧಿ ನಿಗಮವೂ ಸೇರಿದಂತೆ ಕರ್ನಾಟಕ ಅಲೆಮಾರಿ/ ಅರಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಿಗೆ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಸ್ಪಷ್ಟ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಹಿಂದುಳಿದ ವರ್ಗಗಳ ಅಲೆಮಾರಿ/ ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ನಿಗಮದ ಮೂಲಕ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಈ ಯೋಜನೆಗಳ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಅವರು ವಾಸಿಸುವ ಬಡಾವಣೆಗಳಿಗೆ ತೆರಳಿ ಸರ್ಕಾರದ ಈ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಅದರ ಲಾಭ ಪಡೆಯುವಂತೆ ಪ್ರೇರೇಪಿಸಬೇಕು ಎಂದರು.ಜಿಲ್ಲೆಯಲ್ಲಿ ಅಲೆಮಾರಿ/ ಅಲೆ ಅಲೆಮಾರಿ ಸಮುದಾಯದವರು ವಾಸಿಸುವ ಪ್ರದೇಶಗಳಿಗೆ ಭೇಟಿ ನೀಡಬೇಕು, ಅಲ್ಲಿ ಸರ್ಕಾರ ಈ ಸಮುದಾಯದ ಜನರಿಗೆ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ದಿ ನಿಗಮದ ಮೂಲಕ ಹಮ್ಮಿಕೊಂಡಿರುವ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳು, ಅವರ ಕಲ್ಯಾಣಕ್ಕಾಗಿ ಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರವಾದ ಮಾಹಿತಿ ನೀಡಬೇಕು, ಆ ಮೂಲಕ ಆ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಬೇಕು.
ಪ್ರತಿ ಮಾಹೆ ಅಲೆಮಾರಿ/ಅರೆ ಅಲೆಮಾರಿ ಸಮುದಾಯದವರು ವಾಸಿಸುವ ಎರಡು ಬಡಾವಣೆಗಳಿಗೆ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಘುನಾಥ್ ಕಡ್ಡಾಯವಾಗಿ ಭೇಟಿ ನೀಡಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಬೇಕು ಇದನ್ನು ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಮೇಲ್ವಿಚಾರಣೆ ಮಾಡಬೇಕೆಂದು ಹೇಳಿದರು.ಅಲೆಮಾರಿ/ ಅಲೆ ಅಲೆಮಾರಿ ಸಮುದಾಯದವರು ವಾಸಿಸುವ ಮಾಗಡಿ ತಾಲೂಕಿನ ಕುದೂರು ಹೋಬಳಿಯ ಚಿಕ್ಕನಹಳ್ಳಿ ಗ್ರಾಮದಲ್ಲಿ ಸ್ಮಶಾನ ಜಾಗ ಒತ್ತುವರಿಯಾಗಿದೆ ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಅಲೆಮಾರಿ ಮತ್ತು ಅಲೆಮಾರಿ ಬುಡಕಟ್ಟು ಸಮುದಾಯಗಳ ಮಹಾ ವೇದಿಕೆಗಳ ಅಧ್ಯಕ್ಷ ಆರ್. ರಂಗಪ್ಪರವರು ಸಭೆಯಲ್ಲಿ ಪ್ರಸ್ತಾಪಿಸಿದಾಗ, ಕೂಡಲೇ ಜಿಲ್ಲಾಧಿಕಾರಿಯವರು ಮೊಬೈಲ್ ಮೂಲಕ ಮಾಗಡಿ ತಹಶೀಲ್ದಾರರಿಗೆ ಕರೆ ಮಾಡಿ ಜಾಗವನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ರಾಮನಗರದಲ್ಲಿ ಡಿ ದೇವರಾಜ್ ಅರಸ್ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡುವಂತೆ ಸಭೆಯಲ್ಲಿ ಕೋರಿದ ಆರ್. ರಂಗಪ್ಪ ಅವರು ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಲೆಮಾರಿ/ ಅರೆ ಅಲೆಮಾರಿ ಸಮುದಾಯದ ಮಕ್ಕಳು 6ನೇ ತರಗತಿಯ ನೇರ ಪ್ರವೇಶಕ್ಕೆ ಅವಕಾಶ ಮಾಡಿಕೊಡುವಂತೆ ಸಭೆಯ ಗಮನಕ್ಕೆ ತಂದಾಗ, ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಯವರು, ಈ ಬಗ್ಗೆ ಸರ್ಕಾರದ ಆದೇಶದ ಅನುಸಾರ 6ನೇ ತರಗತಿಯ ನೇರ ಪ್ರವೇಶಕ್ಕೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದರು.ಜಿಲ್ಲೆಯ ಕೆಲವು ಗೊಲ್ಲರಹಟ್ಟಿಗಳಲ್ಲಿ ಬಸ್ ಸಂಚಾರ ಇರುವುದಿಲ್ಲ ಎಂದು ಸಮಿತಿಯ ಸದಸ್ಯರು ಸಭೆ ಗಮನಕ್ಕೆ ತಂದಾಗ ಜಿಲ್ಲಾಧಿಕಾರಿಯವರು ಸಂಚಾರ ಸಂಪರ್ಕವಿಲ್ಲದ ಗೊಲ್ಲರಹಟ್ಟಿಗಳಿಗೆ ಕೆಎಸ್ಆರ್ಟಿಸಿಯಿಂದ ಕೂಡಲೇ ಬಸ್ ಸಂಪರ್ಕ ಕಲ್ಪಿಸಲು ಸಂಬಂಧಿಸಿದವರಿಗೆ ಸೂಚನೆ ನೀಡಿದರು.
ರಾಮನಗರ ಜಿಲ್ಲಾ ಅಲೆಮಾರಿ/ ಅರೆ ಅಲೆಮಾರಿ ಪ್ರಗತಿ ಪರಿಶೀಲನ ಸಲಹಾ ಸಮಿತಿ ಸದಸ್ಯರಾದ ಬಿ. ರಂಗನಾಥಪ್ಪ ಮಾತನಾಡಿದರು.ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶಿವಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿಲಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸತೀಶ್, ರಾಮನಗರ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ಮುನೇಶ್, ತಾಲೂಕು ಆರೋಗ್ಯ ಅಧಿಕಾರಿ ಡಾ. ಕುಮಾರ್ ಉಪಸ್ಥಿತರಿದ್ದರು.
-------------------------24ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಅಧ್ಯಕ್ಷತೆಯಲ್ಲಿ ಹಿಂದುಳಿದ ವರ್ಗಗಳ ಅಲೆಮಾರಿ/ ಅರೆ ಅಲೆಮಾರಿ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆ ನಡೆಯಿತು.---------------------------