ತಂಬಾಕು ದುಷ್ಪರಿಣಾಮಗಳ ಜಾಗೃತಿ ಮೂಡಿಸಿ: ಡಿಸಿ

| Published : May 25 2024, 12:48 AM IST

ಸಾರಾಂಶ

ದೊಡ್ಡಬಳ್ಳಾಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ, ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಜನಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಕಾರ್ಯ ಪ್ರವೃತ್ತರಾಗುವಂತೆ ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ದೊಡ್ಡಬಳ್ಳಾಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಭಿತ್ತಿ ಪತ್ರಗಳು, ನಾಮಫಲಕಗಳನ್ನು ಶಾಲಾ-ಕಾಲೇಜು, ಆಸ್ಪತ್ರೆ, ಅಂಗಡಿ-ಮುಂಗಟ್ಟು, ಕೈಗಾರಿಕೆ ಸೇರಿದಂತೆ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲು ಕ್ರಮ ಕೈಗೊಂಡು ಜನಜಾಗೃತಿ ಮೂಡಿಸುವ ಮೂಲಕ ತಂಬಾಕು ಸೇವನೆ ನಿಯಂತ್ರಿಸಲು ಕಾರ್ಯ ಪ್ರವೃತ್ತರಾಗುವಂತೆ ಬೆಂ.ಗ್ರಾ. ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಂಬಾಕು ಮುಕ್ತ ದಿನ ಇರುವ ಕಾರಣದಿಂದಾಗಿ ಎಲ್ಲಾ ಶಾಲಾ-ಕಾಲೇಜು ಹಾಗೂ ಸರ್ಕಾರಿ ಕಚೇರಿಗಳನ್ನು ಮೇ 31ರ ಒಳಗಾಗಿ ತಂಬಾಕು ಮುಕ್ತ ಸರ್ಕಾರಿ ಕಚೇರಿಗಳಾಗಿ ಮಾಡಲು ಸೂಚನೆ ನೀಡಿ, ಜಿಲ್ಲಾ ಹಾಗೂ ತಾಲೂಕು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಕಾರ್ಯ ಪ್ರವೃತ್ತರಾಗಿ ತಂಬಾಕು ನಿಯಂತ್ರಣಕ್ಕೆ ಕ್ರಮವಹಿಸಲು ತಿಳಿಸಿದರು.

ತಂಬಾಕು ನಿಯಂತ್ರಣ ಕಾನೂನು- ಕೊಟ್ಪಾ 2003ರ ಕಾಯ್ದೆಯಂತೆ ಸೆಕ್ಷನ್ 4ರ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಲಾಗಿದೆ. ಇದರನ್ವಯ ಸಾರ್ವಜನಿಕ ಸ್ಥಳಗಳಲ್ಲಿ ಮಾಲೀಕರು ನಾಮಫಲಕಗಳನ್ನು ಪ್ರದರ್ಶಿಸಬೇಕು. ಸೆಕ್ಷನ್ 5ರ ಅಡಿಯಲ್ಲಿ ತಂಬಾಕು ಉತ್ಪನ್ನಗಳ ನೇರ ಹಾಗೂ ಪರೋಕ್ಷ ಜಾಹೀರಾತು ಉತ್ತೇಜನ, ಪ್ರಾಯೋಜಕತೆ ನಿಷೇಧ ಮಾಡಲಾಗಿದೆ. ಇದರ ಅನ್ವಯ ತಂಬಾಕು ಉತ್ಪನ್ನಗಳ ಮಾರಾಟ ಮಾಡುವ ಅಂಗಡಿಗಳಲ್ಲಿ ತಂಬಾಕು ಜಾಹೀರಾತುಗಳನ್ನು ಬೋರ್ಡ್, ಭಿತ್ತಿಪತ್ರ, ಎಲ್‌ಸಿಡಿ ಟಿವಿಗಳ ಮೂಲಕ ಪ್ರಚಾರ ಮಾಡುವಂತಿಲ್ಲ, ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಮೂಲಕ ತಂಬಾಕು ಉತ್ಪನ್ನಗಳ ಜಾಹೀರಾತು ಮಾಡುವಂತಿಲ್ಲ. ಸೆಕ್ಷನ್ 6ರ ಅಡಿಯಲ್ಲಿ ತಂಬಾಕು ಉತ್ಪನ್ನಗಳನ್ನು 18 ವರ್ಷದೊಳಗಿನ ಅಪ್ರಾಪ್ತರಿಗೆ ಮಾರಾಟ ಮಾಡುವಂತಿಲ್ಲ. ಈ ಕಾನೂನುಗಳನ್ನು ಉಲ್ಲಂಘಿಸಿದಲ್ಲಿ ದಂಡ ಹಾಗೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಸೆಕ್ಷನ್ 06 ಬಿ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳ ನೂರು ಅಡಿಯ ಒಳಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧ. ಸೆಕ್ಷನ್ 7ರಲ್ಲಿ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮೇಲೆ ಶೇ. 85ರಷ್ಟು ನಿರ್ದಿಷ್ಟ ಆರೋಗ್ಯ ಎಚ್ಚರಿಕೆಗಳ ಸಂದೇಶಗಳಿಲ್ಲದೆ ಮಾರಾಟ ಮಾಡುವಂತಿಲ್ಲ. ಕಾನೂನು ಪಾಲಿಸದೆ ತಂಬಾಕು ವಸ್ತುಗಳನ್ನು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ ಅಂತವರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿ ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಉಪ ಕಾರ್ಯದರ್ಶಿ ಟಿ.ಕೆ ರಮೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್, ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ಜಿಲ್ಲಾ ಸಲಹೆಗಾರರಾದ ಡಾ‌.ವಿದ್ಯಾರಾಣಿ, ಜಿಲ್ಲಾ ಅರೋಗ್ಯ ಕಾರ್ಯಕ್ರಮ ಅಧಿಕಾರಿಗಳು, ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಬಾಕ್ಸ್‌.......

ಸ್ಟಾಪ್ ಟ್ಯೊಬ್ಯಾಕೋ ಮೊಬೈಲ್ ಆಪ್ ಬಳಸಿ:ತಂಬಾಕು ನಿಯಂತ್ರಿಸಲು ರೂಪುಗೊಂಡಿರುವ ಸ್ಟಾಪ್ ಟ್ಯೊಬ್ಯಾಕೋ ಆಪ್ ಅನ್ನು ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಸಹ ಬಳಸಬಹುದಾಗಿದೆ. ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವ ಪ್ರದೇಶದ ಕುರಿತು ಈ ಆಪ್ ಮೂಲಕ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡಿದ ಸಾರ್ವಜನಿಕರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು. ತಂಬಾಕು ಬಳಕೆಯನ್ನು ನಿಯಂತ್ರಿಸಲು ಸಾರ್ವಜನಿಕರು ಸಹ ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ‌ಹೇಳಿದರು.