ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇದನ್ನು ಸಂಪೂರ್ಣ ನಿಲ್ಲಿಸಲು ಸಂಬಂಧಪಟ್ಟ ಇಲಾಖೆಗಳು ಶ್ರಮಿಸಿದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದೇ ಪರಿಹಾರ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ. ರಾವ್ ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಉಡುಪಿ
ಮಾನವ ಕಳ್ಳ ಸಾಗಾಣಿಕೆ ಪ್ರಕರಣಗಳು ಮಾನವೀಯತೆಯ ಮೇಲಾಗುವ ಅತಿ ದೊಡ್ಡ ಅಪರಾಧ. ಇದನ್ನು ಸಂಪೂರ್ಣ ನಿಲ್ಲಿಸಲು ಸಂಬಂಧಪಟ್ಟ ಇಲಾಖೆಗಳು ಶ್ರಮಿಸಿದರೂ ಸಾಧ್ಯವಾಗುತ್ತಿಲ್ಲ. ಇದಕ್ಕೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದೇ ಪರಿಹಾರ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ವೈ. ರಾವ್ ಅಭಿಪ್ರಾಯಪಟ್ಟರು.ನಗರದ ಬಾಲಭವನದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆಯನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿದ್ದ ಉಡುಪಿ ಮಹಿಳಾ ಪೊಲೀಸ್ ಠಾಣೆ ಉಪ ನಿರೀಕ್ಷಕ ರಾಘವೇಂದ್ರ ಸಿ. ಮಾತನಾಡಿ, ಪ್ರಸ್ತುತ ಸಮಾಜ ಎದುರಿಸುತ್ತಿರುವ ಸಾಮಾಜಿಕ ಪಿಡುಗುಗಳಲ್ಲಿ ಒಂದಾದ ಮಾನವ ಕಳ್ಳ ಸಾಗಾಣಿಕೆಯನ್ನು ನಿರ್ಮೂಲನೆ ಮಾಡುವುದು ಅತಿ ಅವಶ್ಯವಾಗಿರುತ್ತದೆ ಎಂದರಲ್ಲದೇ ಕೆಲವು ನೈಜ ಪ್ರಕರಣಗಳನ್ನು ಉದಾಹರಣೆ ನೀಡುವ ಮೂಲಕ ಯಾವ ರೀತಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ನಡೆಯುತ್ತಿದೆ ಎನ್ನುವುದನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪ್ರೇಮಮೂರ್ತಿ ಕೆ. ಮಾತನಾಡಿ, ಆಧುನಿಕ ಯುಗದಲ್ಲಿ ವಂಚನೆಗಳು ಹೆಚ್ಚುತ್ತಿರಲು ಜನರು ಹೆಚ್ಚು ವ್ಯಾಮೋಹಕ್ಕೊಳಗಾಗುತ್ತಿರುವುದು, ತಂತ್ರಜ್ಞಾನಗಳ ಹೆಚ್ಚಿನ ಬಳಕೆ ಮತ್ತು ಹಣದ ಆಮಿಷಕ್ಕೆ ಬಲಿಯಾಗುತ್ತಿರುವುದು ಮುಖ್ಯ ಕಾರಣವಾಗಿದೆ. ಇಂದಿನ ಮಕ್ಕಳಲ್ಲಿ ನೈತಿಕ ಮೌಲ್ಯಗಳ ಕೊರತೆ ಕೂಡ ಮಾನವ ಕಳ್ಳ ಸಾಗಾಣಿಕೆ ಹೆಚ್ಚುತ್ತಿರಲು ಕಾರಣವಾಗಿದೆ ಎಂದ ಅವರು, ಮಾನವ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಸವಿಸ್ತಾರವಾಗಿ ವಿವರಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸಹಾಯಕ ಕಾನೂನು ನೆರವು ಅಭಿರಕ್ಷಕಿ ಭಾನುಮತಿ ಅವರು, ಕಾಯ್ದೆ ಅಡಿ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟುವ ಮಾರ್ಗಗಳ ಕುರಿತು ವಿವರಿಸಿದರು.ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ರತ್ನ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರವೀಣ್ ಹೇರೂರ, ಭಾಗಿದಾರ ಇಲಾಖೆಗಳ ಅಧಿಕಾರಿ ಸಿಬ್ಬಂದಿಗಳು ಹಾಗೂ ತ್ರಿಶಕ್ತಿ ಗುಂಪಿನ ಮಹಿಳೆಯರು ಉಪಸ್ಥಿತರಿದ್ದರು. ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಬಿ. ಹಾದಿಮನಿ ಸ್ವಾಗತಿಸಿ, ಲಿಂಗತ್ವ ತಜ್ಞೆ ದೀಪ ನಿರೂಪಿಸಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವಿಜಯಲಕ್ಷ್ಮಿ ಹೇರೂರು ವಂದಿಸಿದರು.