ಸಾರಾಂಶ
ಬಳ್ಳಾರಿ:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಡಿಮೆ ಪ್ರಮಾಣದ ಮತದಾನ ಇರುವ ಕಡೆ ಸ್ವೀಪ್ ಚಟುವಟಿಕೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಹೆಚ್ಚು ಮತದಾನ ಜಾಗೃತಿ ಮೂಡಿಸಬೇಕು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಹೇಳಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಲೋಕಸಭಾ ಚುನಾವಣೆ ಅಂಗವಾಗಿ ಸ್ವೀಪ್ ಚಟುವಟಿಕೆ ಹಮ್ಮಿಕೊಳ್ಳುವ ಕುರಿತು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಬಿಎಲ್ಒಗಳಿಗೆ ಶುಕ್ರವಾರ ಹಮ್ಮಿಕೊಂಡಿದ್ದ ಮತದಾನದ ಜಾಗೃತಿ ಮೂಡಿಸುವ ತರಬೇತಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮತದಾನ ಮೌಲ್ಯದ ಕುರಿತು ಜಿಲ್ಲೆಯ ಗ್ರಾಮ ಪಂಚಾಯಿತಿ ಹಾಗೂ ಹೋಬಳಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.ಬಳ್ಳಾರಿ ತಾಲೂಕು ತಾಪಂ ಇಒ ಮಡಗಿನ ಬಸಪ್ಪ ಮಾತನಾಡಿ, ಚುನಾವಣೆ ಕುರಿತು ಅರಿವು ಮೂಡಿಸಿ ನಿರ್ಭೀತರಾಗಿ ಮೇ 7ರಂದು ಮತದಾನ ಮಾಡಲು ಸಾರ್ವಜನಿಕರಿಗೆ ತಿಳಿಸುವಂತೆ ಸೂಚಿಸಿದರು.ತರಬೇತಿ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಇಲಾಖೆ ಸಹಾಯಕ ನಿರ್ದೇಶಕ ಮಹಮ್ಮದ್ ಗೌಸ್, ಬಳ್ಳಾರಿ ಗ್ರಾಮೀಣ ವಿಧಾನ ಸಭಾಕ್ಷೇತ್ರದ ತಾಲೂಕು ಸ್ವೀಪ್ ಸಮಿತಿ ಅಧಿಕಾರಿಗಳು, ಬಳ್ಳಾರಿ ತಾಲೂಕಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಬಿಎಲ್ಒ ಮತ್ತು ತಾಪಂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಭಾಗವಹಿಸಿದ್ದರು.