ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆ ತಂಬಾಕು ವ್ಯಸನ ಮುಕ್ತವಾಗಿಸಲು, ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶ, ಸದಸ್ಯ ಕಾರ್ಯದರ್ಶಿ ಎಂ.ಆನಂದ ಕರೆ ನೀಡಿದರು.

ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆಯಲ್ಲಿ ಮಾತನಾಡಿ, ತಂಬಾಕು ಸೇವನೆಯಿಂದ ಯುವಜನರಲ್ಲಿ ಶ್ವಾಸಕೋಶದ ತೊಂದರೆಗಳು, ಆಸ್ತಮಾ, ಬ್ರಾಂಕೈಟಿಸ್, ಉಸಿರಾಟದ ತೀವ್ರ ತೊಂದರೆ ಮತ್ತು ಶ್ವಾಸಕೋಶದ ಕ್ಯಾನ್ಸರ್ ಬರುವ ಸಾಧ್ಯತೆಗಳು ಹೆಚ್ಚಾಗಿವೆ. ಈ ಬಗ್ಗೆ ಯುವಕರಲ್ಲಿ ತಂಬಾಕು ಸೇವನೆಯ ಕುರಿತು ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

ಭಾರತ ಯುವ ಜನತೆ ಮೇಲೆ ಅವಲಂಬಿತವಾಗಿರುವ ದೇಶ. ಜಿಲ್ಲೆಯಲ್ಲಿ ಅನಧಿಕೃತವಾಗಿ ತಂಬಾಕು ಮಾರಾಟ ಮಾಡುವ ಸ್ಥಳಗಳನ್ನು ಗುರುತಿಸಿ ಮಾಹಿತಿ ಪಡೆದು ಪೊಲೀಸ್ ಇಲಾಖೆ ಅಧಿಕಾರಿಗಳು ತಂಬಾಕು ಮಾರಾಟ ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯನ್ನು ತಂಬಾಕು ಮುಕ್ತ ಹಾಗೂ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಯುವಕರು ಆರೋಗ್ಯದ ಮೇಲೆ ಹೆಚ್ಚು ಗಮನ ಹರಿಸಬೇಕು. ದೈನಂದಿನ ಜೀವನದಲ್ಲಿ ಯೋಗ ಮಾಡುವುದರಿಂದ ಆರೋಗ್ಯ ಮುಕ್ತ ಸಮಾಜ ನಿರ್ಮಿಸಲು ಸಾಧ್ಯ ಎಂದು ಹೇಳಿದರು.


ಯುವಜನರು ತಂಬಾಕು ಸೇವನೆಯ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇದರಿಂದ ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ. ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆ ದಂತ ವೈದ್ಯೆ ಡಾ.ಜೆ.ಡಿ.ಸ್ಮಿತಾ ಮಾತನಾಡಿ, ತಂಬಾಕು ಸೇವನೆಯಿಂದ ದೇಹದ ಪ್ರತಿಯೊಂದು ಅಂಗದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಇದು ಶ್ವಾಸಕೋಶದ ಕ್ಯಾನ್ಸರ್, ಹೃದಯಾಘಾತ, ಪಾರ್ಶ್ವವಾಯು ಮತ್ತು ದೀರ್ಘಕಾಲದ ಉಸಿರಾಟದ ಕಾಯಿಲೆಗಳಿಗೆ ಪ್ರಮುಖ ಕಾರಣವಾಗಿದೆ ಎಂದರು.

ಧೂಮಪಾನ ಮಾಡದಿದ್ದರೂ ಇತರರು ಬಿಡುವ ಹೊಗೆಯನ್ನು ಸೇವಿಸುವುದರಿಂದ (ಪರೋಕ್ಷ ಧೂಮಪಾನ) ಮಕ್ಕಳಲ್ಲಿ ಅಸ್ತಮಾ ಮತ್ತು ಇತರ ಸೋಂಕುಗಳು ಉಂಟಾಗುತ್ತವೆ ಎಂದು ಎಚ್ಚರಿಸಿದರು.

ತಂಬಾಕಿನಲ್ಲಿರುವ ನಿಕೋಟಿನ್ ರಕ್ತನಾಳಗಳನ್ನು ಸಂಕುಚಿತಗೊಳಿಸಿ ರಕ್ತದೊತ್ತಡವನ್ನು ಹೆಚ್ಚಿಸುತ್ತದೆ. ಇದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ಸಂಭವಿಸುವ ಅಪಾಯ ಹೆಚ್ಚು. ಕ್ಯಾನ್ಸರ್, ಬಾಯಿ, ಗಂಟಲು, ಅನ್ನನಾಳ, ಶ್ವಾಸಕೋಶ ಮತ್ತು ಮೂತ್ರಕೋಶ ಸೇರಿ ವಿವಿಧ ಕ್ಯಾನ್ಸರ್‌ಗಳಿಗೆ ತಂಬಾಕು ಸೇವನೆ ಕಾರಣವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ನೋಡಲ್ ಅಧಿಕಾರಿ ಇಂದ್ರಾಣಿ, ಜಿಲ್ಲಾ ಆಸ್ಪತ್ರೆ ಹಿರಿಯ ದಂತ ವೈದ್ಯಾಧಿಕಾರಿ ಡಾ.ಅರುಣನಂದ, ತಂಬಾಕು ನಿಯಂತ್ರಣ ಅಧಿಕಾರಿ ತಿಮ್ಮರಾಜು ಉಪಸ್ಥಿತರಿದ್ದರು.