ಸಾರಾಂಶ
ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಸಭೆ, ಚಿಕ್ಕಮಗಳೂರಿನ ತಾಪಂ ಕಚೇರಿಯಲ್ಲಿ ನಡೆದ ಸಭೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಸರ್ಕಾರಿ ಶಾಲೆಗಳಲ್ಲಿ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿ ಪೋಷಕರಲ್ಲಿರುವ ಸರ್ಕಾರಿ ಶಾಲೆಗಳ ಮೇಲಿನ ಕೀಳು ಭಾವನೆ ಹೋಗ ಲಾಡಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚಿಸಿದರು.ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ ಹಾಗೂ ಶಾಲೆಗಳ ಮುಚ್ಚುವಿಕೆಗೆ ಕಾರಣಗಳು ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು. ಸರ್ಕಾರ ರಾಜ್ಯದ 6 ರಿಂದ 14 ವರ್ಷ ವಯಸ್ಸಿನ ಎಲ್ಲಾ ವರ್ಗದ ಮಕ್ಕಳಿಗೆ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀಡಲು ಸರ್ಕಾರಿ ಶಾಲೆಗಳಲ್ಲಿ ಕಲಿಯುವ ಪ್ರತಿಯೊಬ್ಬ ವಿದ್ಯಾರ್ಥಿ ಗಳಿಗೂ ಸಮವಸ್ತ್ರ, ಪಠ್ಯ ಪುಸ್ತಕ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಪೌಷ್ಠಿಕ ಆಹಾರ ಮತ್ತು ವಿವಿಧ ಸೌಲಭ್ಯಗಳೊಂದಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಿ ಯಾರೊಬ್ಬರು ಶಿಕ್ಷಣದಿಂದ ವಂಚಿತರಾಗದಂತೆ ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ ನೀಡುತ್ತಿದೆ ಎಂದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ಅನೇಕ ಶಾಲೆಗಳು ಮುಚ್ಚುವ ಹಂತದಲ್ಲಿವೆ. ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರು, ಶೌಚಾಲಯ, ಉತ್ತಮ ಆಹಾರ, ಶಾಲಾ ಕೈತೋಟ, ಗುಣಮಟ್ಟದ ಶಿಕ್ಷಣ, ಆಟದ ಜೊತೆಗೆ ವಿದ್ಯಾರ್ಥಿಗಳನ್ನು ವಿಶೇಷ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಅವರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.ಶಾಲೆಗಳ ಅಭಿವೃದ್ಧಿ ಸೂಚ್ಯಂಕಗಳ ಪರಿಶೀಲನೆಗೆ ನೇಮಕವಾಗಿರುವ ಸಿಆರ್ಪಿ, ಬಿಆರ್ಸಿ, ಇಸಿಬಿ, ಅಧಿಕಾರಿಗಳು ಆಗಾಗ್ಗೆ ಭೇಟಿ ನೀಡಿ ಶಾಲೆಗಳಲ್ಲಿನ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಬೆಳವಣಿಗೆ ಹಾಗೂ ಶಾಲೆ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಶಾಲೆಗಳಲ್ಲಿ ಉತ್ತಮ ಕಲಿಕೆಯ ವಾತಾವರಣ ನಿರ್ಮಿಸಿ ಕೊಡಲು ಕ್ರಮ ವಹಿಸಬೇಕು ಎಂದು ಹೇಳಿದರು.ಶಾಲೆಗಳಲ್ಲಿ ಶಿಕ್ಷಕರ ಕೊರತೆಯಾಗದಂತೆ ಶಿಕ್ಷಕರ ಸಂಖ್ಯೆ ಕಡಿಮೆ ಇದ್ದಲ್ಲಿ ಅತಿಥಿ ಶಿಕ್ಷಕರನ್ನು ನೇಮಿಸಿ ಮಕ್ಕಳ ಕಲಿಕೆಗೆ ಯಾವುದೇ ಅಡಚಣೆ ಯಾಗದಂತೆ ಕ್ರಮ ವಹಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಪಡೆದು ಅವರನ್ನು ಶಾಲೆಗೆ ಕರೆ ತರಬೇಕು. ಸರ್ಕಾರಿ ಶಾಲೆ ಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ ಕಲಿಕೆಗೆ ಅವಕಾಶಗಳ ಬಗ್ಗೆ ಪೋಷಕರಲ್ಲಿ ಮಾಹಿತಿ ನೀಡಿ ಪೋಷಕರನ್ನು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವಂತೆ ಮನವೊಲಿಸಬೇಕು ಎಂದರು.ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೆ. ತಾರಾನಾಥ್ ಮಾತನಾಡಿ, ಅನೇಕ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿ ಗಿಂತ ಶಿಕ್ಷಣ, ಆಟ, ಪಾಠ, ಮೂಲಭೂತ ಸೌಕರ್ಯಗಳಿಂದ ಕಲಿಕೆಗೆ ಉತ್ತಮ ವಾತಾವರಣ ನಿರ್ಮಿಸಿ ಇತರೆ ಶಾಲೆಗಳಿಗೆ ಮಾದರಿಯಾಗಿದ್ದು, ಮಕ್ಕಳು ಕೂಡ ಕಲಿಕೆಯಲ್ಲಿ ಮುಂದಿದ್ದಾರೆ. ಆ ಶಾಲೆಗಳ ಕಾರ್ಯ ವೈಖರಿಗಳ ಬಗ್ಗೆ ಮಾಹಿತಿ ಪಡೆದು ಶಾಲೆಗಳನ್ನು ಮಾದರಿಯಾಗಿಸಿಕೊಂಡು ತಮ್ಮ ಶಾಲೆಗಳಿಗೆ ಚಟುವಟಿಕೆಗಳನ್ನು ವಿಶೇಷವಾಗಿ ಮಕ್ಕಳ ಕಲಿಕೆಗೆ ಸಹಕಾರಿಯಾಗುವಂತೆ ಕ್ರಮವಹಿಸಿ ಎಂದು ಹೇಳಿದರು.ಸಭೆಯಲ್ಲಿ ಚಿಕ್ಕಮಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ರವೀಶ್, ಶಿಕ್ಷಣ ಇಲಾಖೆ ಸಿಆರ್ಪಿ, ಬಿಆರ್ಸಿ, ಇಸಿಬಿ, ಅಧಿಕಾರಿಗಳು ಹಾಜರಿದ್ದರು. 8 ಕೆಸಿಕೆಎಂ 4ಚಿಕ್ಕಮಗಳೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ ಹಾಗೂ ಶಾಲೆಗಳ ಮುಚ್ಚುವಿಕೆಗೆ ಕಾರಣಗಳ ಕುರಿತು ಅಧಿಕಾರಿಗಳ ಸಭೆ ನಡೆಯಿತು. ಇಒ ತಾರಾನಾಥ್, ಬಿಇಒ ರವೀಶ್ ಇದ್ದರು.