ಜಿಲ್ಲಾ ಕಾರ್ಯಕರ್ತರ ಸಮ್ಮೇಳನದ ಕಾರ್ಯಕ್ರಮ ಉದ್ಘಾಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಕನ್ನಡಪ್ರಭ ವಾರ್ತೆ ಶಿರಸಿರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಐಆರ್ ಕುರಿತು ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ 125ನೇ ಜನ್ಮದಿನದ ಅಂಗವಾಗಿ ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದ ದೀನ್ ದಯಾಳ ಸಭಾಭವನದಲ್ಲಿ ನಡೆದ ಜಿಲ್ಲಾ ಕಾರ್ಯಕರ್ತರ ಸಮ್ಮೇಳನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್ಐಆರ್ ಕುರಿತು ಜನರಲ್ಲಿ ಮನಸ್ಸಿನಲ್ಲಿ ಅನಗತ್ಯ ಗೊಂದಲ ಸೃಷ್ಟಿ ಮಾಡುವುದಲ್ಲದೆ ಜನರ ದಾರಿಯನ್ನು ತಪ್ಪಿಸಲು ಹೊರಟಿದೆ. ಜನರ ಕುಂದು ಕೊರತೆ ಆಲಿಸಬೇಕಾದವರು ಬೇಜವಾಬ್ಧಾರಿಯಿಂದ ನಡೆದುಕೊಳ್ಳುತ್ತಿರುವುದು ಜನರಿಗೆ ಮಾಡುತ್ತಿರುವ ದ್ರೋಹ ಎಂದು ಹೇಳಿದರು.
ಡಾ. ಶ್ಯಾಮಪ್ರಸಾದ ಮುಖರ್ಜಿ ಕಾಶ್ಮೀರದ ವಿಶೇಷ ಸ್ಥಾನಮಾನ ವಿರೋಧಿಸಿ ಹೋರಾಟ ನಡೆಸಿದ್ದರು. ಅವರ ತ್ಯಾಗ ಮತ್ತು ಬಲಿದಾನ ನಮ್ಮೆಲ್ಲರಿಗೂ ಆದರ್ಶ ಎಂದು ತಿಳಿಸಿದರು.
ಸಂವಿಧಾನ ಫೌಂಡೇಶನ್ನ ಸಂಸ್ಥಾಪಕ ಪ್ರಕಾಶ ಮಲ್ಪೆ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ದೇಶಭಕ್ತಿ, ತ್ಯಾಗ, ಹೋರಾಟ ಮತ್ತು ಕೊಡುಗೆಗಳ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿ, ಎಸ್ಐಆರ್ ಸಂದರ್ಭದಲ್ಲಿ ನಮ್ಮ ಬೂತ್ ಸಮಿತಿಯ ಹಾಗೂ ಎಲ್ಲಾ ಕಾರ್ಯಕರ್ತರು ಮತದಾರರಿಗೆ ಸೂಕ್ತ ಸಹಕಾರ ನೀಡಬೇಕು ಎಂದರು.ವಿಭಾಗ ಸಹ-ಪ್ರಭಾರಿ ಆರ್.ಡಿ. ಹೆಗಡೆ, ಮಾಜಿ ಸಚಿವ ಶಿವಾನಂದ ನಾಯ್ಕ, ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ, ರಾಜ್ಯ ಓಬಿಸಿ ಮೋರ್ಚಾ ಉಪಾಧ್ಯಕ್ಷ ಈಶ್ವರ ನಾಯ್ಕ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯೆ ರೇಖಾ ಹೆಗಡೆ, ಸಂಸ್ಮರಣೆ ಪಾಕ್ಷಿಕ ಕಾರ್ಯಕ್ರಮಗಳ ಸಂಚಾಲಕ ಉಮೇಶ ಭಾಗ್ವತ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಯುವಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ, ಜಿಲ್ಲೆಯ ಹಾಗೂ ಮಂಡಲಗಳ ಪದಾಧಿಕಾರಿಗಳು, ಯುವಮೋರ್ಚಾ ಹಾಗೂ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ ಹರ್ತೆಬೈಲ್ ಸ್ವಾಗತಿಸಿ, ಪ್ರಶಾಂತ ನಾಯ್ಕ ನಿರ್ವಹಿಸಿದರು. ಶಿವಾಜಿ ನರಸಾನಿ ವಂದಿಸಿದರು.