ರಾಜ್ಯದಲ್ಲಿ ಅಪರಾಧ ಪ್ರಮಾಣ ಭಾರಿ ಇಳಿಕೆ: ಸಿಎಂ

| N/A | Published : Jun 28 2025, 12:18 AM IST / Updated: Jun 28 2025, 07:20 AM IST

ಸಾರಾಂಶ

ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊಲೆ, ದರೋಡೆ ಹಾಗೂ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 ಬೆಂಗಳೂರು :  ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕೊಲೆ, ದರೋಡೆ ಹಾಗೂ ಕಳ್ಳತನ ಸೇರಿದಂತೆ ಅಪರಾಧ ಕೃತ್ಯಗಳು ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಆದರೆ, ಅಪರಾಧ ಪ್ರಕರಣಗಳ ತನಿಖೆಯ ಗುಣಮಟ್ಟ ಸಹ ಸುಧಾರಣೆಯಾಗಬೇಕು ಎಂದೂ ಅವರು ಹೇಳಿದ್ದಾರೆ.

ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ಹಿರಿಯ ಪೊಲೀಸ್‌ ಅಧಿಕಾರಿಗಳ ಸಮ್ಮೇಳನದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಅಪರಾಧ ಇಳಿಕೆ ಬಗ್ಗೆ ಅಂಕಿ- ಅಂಶ ಸಮೇತ ವಿವರಿಸಿದರು.

2023ರಲ್ಲಿ 1292 ಕೊಲೆ ಪ್ರಕರಣಗಳು ವರದಿಯಾಗಿದ್ದರೆ, 2024ರಲ್ಲಿ 1204 ಹತ್ಯೆಗಳು ನಡೆದಿವೆ. ಅದೇ ರೀತಿ 2023ರಲ್ಲಿ 25,178 ಕಳ್ಳತನ ಪ್ರಕರಣಗಳು ವರದಿಯಾಗಿದ್ದರೆ 2024ರಲ್ಲಿ 22,137 ಪ್ರಕರಣಗಳು ದಾಖಲಾಗಿವೆ. 2023ರಲ್ಲಿ 1870 ದರೋಡೆ ಪ್ರಕರಣಗಳು ದಾಖಲಾಗಿದ್ದರೆ, 2024ರಲ್ಲಿ 1607 ಪ್ರಕರಣಗಳು ವರದಿಯಾಗಿವೆ. ಈ ಅಂಕಿ-ಅಂಶಗಳೇ ರಾಜ್ಯದಲ್ಲಿ ಅಪರಾಧ ಕೃತ್ಯಗಳ ಇಳಿಕೆಗೆ ಪುರಾವೆಗಳಾಗಿವೆ ಎಂದರು.

ಅಪರಾಧ ಪ್ರಕರಣಗಳಲ್ಲಿ ಆರೋಪ ಪಟ್ಟಿಯನ್ನು ಸೂಕ್ತ ಸಮಯಕ್ಕೆ ಸಲ್ಲಿಸಬೇಕು. ಜನರು ದೂರು ನೀಡಿದ ಕೂಡಲೇ ಎಫ್‌ಐಆರ್ ದಾಖಲಿಸಬೇಕು. ಠಾಣೆಗಳಲ್ಲಿ ಎಲ್ಲರಿಗೂ ಸಮಾನ ನ್ಯಾಯ ಸಿಗುವ ವಾತಾವರಣವಿರಬೇಕು. ಅಪರಾಧ ಪ್ರಕರಣಗಳ ತನಿಖೆ ಗುಣಮಟ್ಟ ಸಹ ಸುಧಾರಣೆಯಾಗಬೇಕು ಎಂದು ಸೂಚಿಸಿದರು.

ಡ್ರಗ್ಸ್ ಮುಕ್ತ ರಾಜ್ಯವಾಗಬೇಕು-ಸಿಎಂ:

ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸುವ ನಿಟ್ಟಿನಲ್ಲಿ ಕಾನೂನಿನ ಮೂಲಕ ಏನೆಲ್ಲ ಕ್ರಮಗಳನ್ನು ಜರುಗಿಸಲು ಸಾಧ್ಯವೋ ಅದನ್ನೆಲ್ಲಾ ಮಾಡುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಡ್ರಗ್ಸ್ ಮಾಫಿಯಾ ಚಟುವಟಿಕೆ ಸಹಿಸುವುದಿಲ್ಲ. ಅದಕ್ಕೆ ಆಸ್ಪದ ಕೂಡ ಕೊಡುವುದಿಲ್ಲ ಎಂದು ಸಿದ್ದರಾಮಯ್ಯ ಗುಡುಗಿದರು.

ಬಾಲ್ಯ ವಿವಾಹ ತಡೆಗಟ್ಟುವಂತೆ ಸೂಚನೆ:

ರಾಜ್ಯದಲ್ಲಿ ಸಂಪೂರ್ಣವಾಗಿ ಬಾಲ್ಯ ವಿವಾಹ ಪದ್ಧತಿಯನ್ನು ನಿರ್ಮೂಲನೆ ಮಾಡಲು ಸರ್ಕಾರ ಕಂಕಣ ಬದ್ಧವಾಗಿದೆ. ಗ್ರಾಮ ಲೆಕ್ಕಿಗ, ಗ್ರಾಪಂ ಪಿಡಿಓ, ತಹಶೀಲ್ದಾರ್ ಹಾಗೂ ಪೊಲೀಸರ ಗಮನಕ್ಕೆ ಬಾರದೆ ಬಾಲ್ಯ ವಿವಾಹಗಳು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿಪಂ ಸಿಇಓ ಹಾಗೂ ಎಸ್ಪಿಗಳು ಕೆಲಸ ಮಾಡಬೇಕು ಎಂದು ಹೇಳಿದರು. ಅದೇ ರೀತಿ ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಸಹ ಪೊಲೀಸರು ನಿಗಾವಹಿಸಬೇಕು. ಮಹಿಳೆಯರ ಮೇಲೆ ದೌರ್ಜನ್ಯ ಕೃತ್ಯಗಳು ನಡೆಯಬಾರದು. ಬಾಲ್ಯ ವಿವಾಹಗಳಿಗೆ ಕಡಿವಾಣ ಬಿದ್ದರೆ ಅಪ್ರಾಪ್ತ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ಗರ್ಭವತಿ ಆಗುವುದನ್ನು ತಡೆಯಬಹುದು ಎಂದು ಸಿಎಂ ಹೇಳಿದರು.

ಸಭೆಯಲ್ಲಿ ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಹೆಚ್ಚುವರಿ ಕಾರ್ಯದರ್ಶಿ ಗೌರವ್ ಗುಪ್ತ ಹಾಗೂ ಡಿಜಿಪಿ ಡಾ.ಎಂ.ಎ.ಸಲೀಂ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

4,411 ಪೊಲೀಸರ ನೇಮಕಾತಿ: ಸಿಎಂ

ರಾಜ್ಯ ಪೊಲೀಸ್ ಇಲಾಖೆಯಲ್ಲಿ 4,411 ಹುದ್ದೆಗಳ ಭರ್ತಿಗೆ ತಕ್ಷಣವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಇಲಾಖೆಯಲ್ಲಿ 1,11,245 ಅಧಿಕಾರಿ-ಸಿಬ್ಬಂದಿ ಮಂಜೂರಾತಿ ಹುದ್ದೆಗಳಿವೆ. ಆದರೆ ಪ್ರಸ್ತುತ 97,219 ಪೊಲೀಸರಿದ್ದು, ಶೇ.15.64 ರಷ್ಟು ಹುದ್ದೆಗಳು ಖಾಲಿ ಇವೆ. ಒಳ ಮೀಸಲಾತಿ ವರದಿ ಬಳಿಕ ಖಾಲಿ ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ನೇಮಕಾತಿ ನಡೆಯಲಿದೆ. ತಕ್ಷಣವೇ ಈಗ ಪ್ರಸ್ತಾವನೆ ಸಲ್ಲಿಸಿರುವ 4,411 ಪೊಲೀಸರ ನೇಮಕಾತಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

Read more Articles on