- ಬೇಲಿಮಲ್ಲೂರಲ್ಲಿ ಜಿ ರಾಮ್‌ ಜಿ ಯೋಜನೆ ಕಾರ್ಯಕ್ರಮದಲ್ಲಿ ರೇಣುಕಾಚಾರ್ಯ ಆರೋಪ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಕೇಂದ್ರ ಸರ್ಕಾರದ ಜನಪರ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಸ್ವಾಗತಿಸದ ಕಾಂಗ್ರೆಸ್, ಕೇಂದ್ರ ಸರ್ಕಾರದ ವಿರುದ್ಧ ಪೂರ್ವಗ್ರಹಪೀಡಿತವಾಗಿ ಕೇಂದ್ರ ಸರ್ಕಾರವನ್ನು ಟೀಕಿಸುವುದನ್ನೇ ಕಾಯಕ ಮಾಡಿಕೊಂಡಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ದೂರಿದರು.

ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ಶನಿವಾರ ವಿಬಿ ಜಿ ರಾಮ್ ಜಿ ಬಗ್ಗೆ ಕೂಲಿ ಕಾರ್ಮಿಕರ ಜೊತೆ ಸಂವಾದ ನಡೆಸಿ ಹಾಗೂ ಜಾಗೃತಿ ಮೂಡಿಸಿ ಅವರು ಮಾತನಾಡಿದರು.


ವಿಶ್ವದಲ್ಲಿ ಹತ್ತನೇ ಸ್ಥಾನದಲ್ಲಿದ್ದ ಭಾರತದ ಆರ್ಥಿಕ ಸ್ಥಿತಿಯನ್ನು 3ನೇ ಶಕ್ತಿಯಾಗಿ ನರೇಂದ್ರ ಮೋದಿ ಸರ್ಕಾರ ಮಾಡಿದೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಂದು ವಿದ್ಯಾರ್ಥಿಗಳಲ್ಲಿ ದೇಶದ ಬಗ್ಗೆ ಜಾಗೃತಿ ಮೂಡಿಸಿದೆ. ವಿಬಿ ಜಿ ರಾಮ್ ಜಿ ಹೊಸ ಕಾಯ್ದೆ ಜಾರಿಗೆ ತಂದು ಕೂಲಿ ಕಾರ್ಮಿಕರಿಗೆ ಹೆಚ್ಚು ಲಾಭ ಲಭಿಸುವಂತೆ ಮಾಡಿದೆ. ಈ ಯೋಜನೆಯಲ್ಲಿನ ಭ್ರಷ್ಟಾಚಾರ ನಿಗ್ರಹಿಸಲು ಹೊಸ ಕಾಯ್ದೆ ಜಾರಿಗೆ ತಂದಿದೆ. ಇದನ್ನು ಸಹಿಸದ ಕಾಂಗ್ರೆಸ್ ವಿನಾಕಾರಣ ಪ್ರಧಾನಿ ಮೋದಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದರು.

ವಿಬಿ ಜಿ ರಾಮ್ ಜಿ ಯೋಜನೆ ಜಾರಿಗೆ ತಂದಿರುವುದು ಕೂಲಿ ಕಾರ್ಮಿಕರನ್ನು ಬೀದಿಗೆ ತಳ್ಳುವುದಕ್ಕಲ್ಲ. ಕೂಲಿಕಾರ್ಮಿಕರ ಬದುಕನ್ನು ಹಸನಾಗಿಸುವ ಉದ್ದೇಶ ಹೊಂದಿದೆ. ಪಾರದರ್ಶಕವಾಗಿ ಎಷ್ಟು ಜನ ಕೆಲಸ ಮಾಡುತ್ತಾರೋ ಅಷ್ಟೇ ಜನಕ್ಕೆ ವೇತನ ದೊರೆಯಲಿದೆ. ಗ್ರಾಮದಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳಿಗೆ ಗ್ರಾಮಸಭೆ ತೀರ್ಮಾನಕ್ಕೆ ಬಿಡಲಾಗಿದೆ. ಪ್ರತಿಯೊಬ್ಬರು ಕೆಲಸಕ್ಕೆ ಬಂದ ಸಾಕ್ಷಿಗಾಗಿ ತಂಬ್ ಸ್ಕ್ಯಾನ್‌ ಮಾಡುತ್ತಾರೆ. ಇದರಿಂದ ಭ್ರಷಾಚಾರ ತಡೆಯಬಹುದು ಎಂದು ವಿವರಿಸಿದರು.

40 ಪರ್ಸೆಂಟ್ ಸರ್ಕಾರ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಇಂದು ರಾಜ್ಯದಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಗಮನ ಕೊಡುತ್ತಿಲ್ಲ ಎಂದು ಕಾಮಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಅರಕೆರೆ ನಾಗರಾಜ್, ನಿಕಟಪೂರ್ವ ಅಧ್ಯಕ್ಷ ಜೆ.ಕೆ. ಸುರೇಶ್, ಎಸ್.ಎಸ್. ಬೀರಪ್ಪ, ಗ್ರಾಮದ ಮುಖಂಡರಾದ ಸಿದ್ದಪ್ಪ, ಉಮೇಶ್, ಬಿಜೆಪಿ ಮುಖಂಡರು ಹಾಗೂ ಗ್ರಾಮಸ್ಥರು ಇದ್ದರು.

- - -

-15ಎಚ್.ಎಲ್.ಐ1.ಜೆಪಿಜಿ:

ಹೊನ್ನಾಳಿ ತಾಲೂಕಿನ ಬೇಲಿಮಲ್ಲೂರು ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಬಗ್ಗೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕೂಲಿ ಕಾರ್ಮಿಕರ ಜತೆ ಮಾಜಿ ಸಂವಾದ ನಡೆಸಿದರು.