ಬೆಳೆಹಾನಿ: ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷಾ ವರದಿ ನಿರೀಕ್ಷೆ

| Published : Sep 02 2025, 01:00 AM IST

ಬೆಳೆಹಾನಿ: ಜಿಲ್ಲಾಡಳಿತದಿಂದ ಜಂಟಿ ಸಮೀಕ್ಷಾ ವರದಿ ನಿರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಅತಿವೃಷ್ಟಿಯಿಂದ ಆಗಿರುವ ಬೆಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವಿಕಾಸಸೌಧದ ಸಚಿವರ ಕಚೇರಿಯಲ್ಲಿ ನಡೆದ ಕಲಬುರಗಿ ಜಿಲ್ಲಾ ಸಂಸದರ ಹಾಗೂ ಶಾಸಕರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಕಲಬುರಗಿ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದಾಗಿ ಆಗಿರುವ ಬೆಳೆಹಾನಿ ಹಾಗೂ ಈ ತಿಂಗಳ 17ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಭೆಯಲ್ಲಿ ಸಚಿವರು ಶಾಸಕರೊಂದಿಗೆ ಚರ್ಚಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಜನವರಿಯಿಂದ ಆಗಸ್ಟ್‌ ತಿಂಗಳ ಅಂತ್ಯದವರೆಗೆ 699 ಮಿ.ಮಿ ಮಳೆಯಾಗಿದ್ದು, ವಾಡಿಕೆಗಿಂತಲೂ ಶೇ.49ರಷ್ಟು ಹೆಚ್ಚು ಮಳೆಯಾಗಿದೆ, ಸಾಮಾನ್ಯವಾಗಿ ಈ ಅವಧಿಯಲ್ಲಿ 468 ಮಿ.ಮಿ ಮಳೆ ಆಗಬೇಕಿತ್ತು, ಜುಲೈ ಹಾಗೂ ಆಗಷ್ಟ್‌ ತಿಂಗಳಲ್ಲಿ ಹೆಚ್ಚು ಮಳೆ ಆಗಿರುವುದರಿಂದ ಬೆಳೆಹಾನಿಯಾಗಿದ್ದು, ಜಿಲ್ಲಾಧಿಕಾರಿಗಳು ಜಂಟಿ ಸಮೀಕ್ಷೆಗೆ ಆದೇಶ ನೀಡಿದ್ದಾರೆ.

ಒಂದೆರಡು ದಿನಗಳಲ್ಲಿ ವರದಿ ಕೈ ಸೇರಲಿದ್ದು, ನಂತರ ಪರಿಹಾರ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ಸಚಿವರು ಹೇಳಿದರು. ಬೆಳೆ ನಷ್ಟದ ಬಗ್ಗೆ ವರದಿ ಬಂದ ನಂತರ ಪರಿಹಾರ ಬಿಡುಗಡೆ ಮಾಡಲು ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗುವುದೆಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು ವಿವಿಧ ಯೋಜನೆಗಳಿಗೆ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದು ಸಭೆಯಲ್ಲಿ ಕೂಲಂಕುಷವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಕಲಬುರಗಿ ಲೋಕಸಭಾ ಸದಸ್ಯರಾದ ರಾಧಾಕೃಷ್ಣ ದೊಡ್ಡಮನಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಜಯ್‌ಸಿಂಗ್‌, ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ. ಆರ್. ಪಾಟೀಲ್‌, ಶಾಸಕರಾದ ಅಲ್ಲಮಪ್ರಭು ಪಾಟೀಲ್‌, ಎಂ. ವೈ. ಪಾಟೀಲ್‌, ಶ್ರೀಮತಿ ಕನೀಜ್‌ ಫಾತಿಮಾ ಸಭೆಯಲ್ಲಿ ಪಾಲ್ಗೊಂಡಿದ್ದರು.