ಚನ್ನರಾಯಪಟ್ಟಣ: ಮಳೆ ಅಭಾವದಿಂದ ಬೆಳೆ ಒಣಗುತ್ತಿರುವ ಆತಂಕ ದಲ್ಲಿ ರೈತರಿದ್ದು ಸಮರ್ಪಕ ವಿದ್ಯುತ್ ಪೂರೈಸುವ ಮೂಲಕ ಸೆಸ್ಕಾಂ ನೆರವಾಗಬೇಕೆಂದು ಶಾಸಕ ಸಿ.ಎನ್. ಬಾಲಕೃಷ್ಣ ಅವರು ನಿರ್ದೇಶನ ನೀಡಿದರು. ಪಟ್ಟಣದ ಸೆಸ್ಕಾಂ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಉಂಟಾಗಿರುವ ವಿದ್ಯುತ್ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು. ರೈತರು ಹಾಗು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳ ಬೇಕೆಂದರು.
ಗ್ರಾಮೀಣ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ತಕ್ಷಣ ಸ್ಪಂದಿಸಬೇಕು. ಕೃಷಿ ಚಟುವಟಿಕೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಆಗುವಂತೆ ನೋಡಿಕೊಳ್ಳಬೇಕು. ಸಿಬ್ಬಂದಿ ಕೊರತೆಯಿಂದ ವಿದ್ಯುತ್ ದುರಸ್ತಿ ಕಾರ್ಯ ವಿಳಂಬವಾಗುತ್ತಿರುವ ಬಗ್ಗೆ ಅಧಿಕಾರಿಗಳು ಗಮನಹರಿಸಬೇಕು. ಇಲಾಖೆಯಲ್ಲಿ ಖಾಲಿ ಇರುವ ಲೈನ್ಮ್ಯಾನ್ ಹುದ್ದೆ ಶೀಘ್ರ ಭರ್ತಿ ಮಾಡುವಂತೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದೆಂದರು. ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ಬೆಳೆಗಳನ್ನು ಉಳಿಸಿ ಕೊಳ್ಳಲು ನೀರಾವರಿ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಅತ್ಯಗತ್ಯವಾಗಿದೆ. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ನೀಡದಿದರೆ ಬೆಳೆ ಉಳಿಸಿಕೊಳ್ಳುವುದು ಕಷ್ಟವಾಗಲಿದೆ ಎಂದು ಅಧಿಕಾರಿಗಳ ಗಮನಕ್ಕೆ ತಂದರು.ಸಭೆಯಲ್ಲಿ ಐಪಿ ಫೀಡರ್ ಸಮಸ್ಯೆ, ಗಂಗಾಕಲ್ಯಾಣ ಯೋಜನೆಯ ವಿದ್ಯುತ್ ಸಂಪರ್ಕಗಳನ್ನು ಶೀಘ್ರ ಅಳವಡಿಸುವುದು, ದಿಡಗ ಭಾಗದಲ್ಲಿ ರೈತರು ಎದುರಿಸು ತ್ತಿರುವ ಸಮಸ್ಯೆಗಳ ಪರಿಹಾರ ಹಾಗೂ ಸಬ್ಬನಹಳ್ಳಿ ಲಿಂಕ್ ಲೈನ್ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಂಪರ್ಕ ಕಲ್ಪಿಸುವುದು ಸೇರಿ ಹಲವು ವಿಷಯಗಳ ಬಗ್ಗೆ ಮಾಹಿತಿ ಪಡೆದರು. ವಿವಿಧ ಗ್ರಾಮಗಳಿಂದ ಬರುತ್ತಿರುವ ವಿದ್ಯುತ್ ಸಂಬಂಧಿತ ದೂರು ಗಳಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಿ, ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಾರ್ಯ ನಿರ್ವ ಹಿಸಬೇಕೆಂದರು. ಸೆಸ್ಕಾಂ ಕಾರ್ಯಪಾಲಕ ಅಭಿಯಂತರರಾದ ರತ್ನ, ಹರೀಶ್ ಮತ್ತಿತರರಿದ್ದರು.