ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಹಣ ದುರ್ಬಳಕೆ: ಆರೋಪ

| Published : Oct 16 2024, 12:42 AM IST

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಹಣ ದುರ್ಬಳಕೆ: ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಹಣ ದರ್ಬಳಕೆ ಸಂಬಂಧ ಸಹಕಾರ ಇಲಾಖೆ ಸಹಾಯಕ ನಿಬಂಧಕರಿಂದಲೂ ಈ ಬಗ್ಗೆ ಮಾಹಿತಿ ಕೇಳಲಾಗಿದೆ. ಪಟ್ಟಣದ ಡಿಸಿಸಿ ಬ್ಯಾಂಕ್ ಲಾಕರ್‌ನಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣಗಳನ್ನು ಲಾಕರ್‌ನಿಂದ ತೆಗೆದು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಗಿರವಿ ಇಡಲಾಗಿದೆ ಎಂದು ತಿಳಿದು ಬಂದಿದೆ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದುರ್ಬಳಕೆಯಾಗಿರುವ ಕೋಟ್ಯಂತರ ಹಣವನ್ನು ಸಂಬಂಧಪಟ್ಟವರಿಂದಲೇ ವಸೂಲಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಷೇರುದಾರರು ಆತಂಕ ಪಡಬಾರದು ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಸಬಾ ಸೊಸೈಟಿಯಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣ, ಫಿಗ್ಮಿ ಮತ್ತು ಷೇರುದಾರರ ಡೆಫಾಸಿಟ್ ಹಣ ಸೇರಿದಂತೆ ಇತ್ಯಾದಿ ಹಣ ದುರ್ಬಳಕೆ ಆಗಿದೆ ಎಂಬ ದೂರು ಕೇಳಿ ಬಂದ ತಕ್ಷಣ ವಸೂಲಾತಿ ಮತ್ತು ಅಗತ್ಯ ಕ್ರಮಕ್ಕೆ ಮುಂದಾಗಿದ್ದೇನೆ ಎಂದರು.

ಹಣ ದರ್ಬಳಕೆ ಸಂಬಂಧ ಸಹಕಾರ ಇಲಾಖೆ ಸಹಾಯಕ ನಿಬಂಧಕರಿಂದಲೂ ಈ ಬಗ್ಗೆ ಮಾಹಿತಿ ಕೇಳಲಾಗಿದೆ. ಪಟ್ಟಣದ ಡಿಸಿಸಿ ಬ್ಯಾಂಕ್ ಲಾಕರ್‌ನಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣಗಳನ್ನು ಲಾಕರ್‌ನಿಂದ ತೆಗೆದು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಗಿರವಿ ಇಡಲಾಗಿದೆ ಎಂದು ತಿಳಿದು ಬಂದಿದೆ ಎಂದರು.

ಖಾಸಗಿ ಸಂಸ್ಥೆಗಳು ಸಹಕಾರ ಸಂಘಗಳಿಗಿಂತ ಚಿನ್ನಕ್ಕೆ ಹೆಚ್ಚಿನ ಹಣ ನೀಡುತ್ತವೆ ಎಂಬ ಕಾರಣಕ್ಕೆ ಲಾಕರ್‌ನಲ್ಲಿದ್ದ ಚಿನ್ನವನ್ನು ಬೇರೆಡೆಗೆ ವರ್ಗಾಯಿಸಿ ಅದರಿಂದ ಬಂದ ಹೆಚ್ಚುವರಿ ಹಣವನ್ನು ಕೂಡ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಸಂಘದಲ್ಲಿ ನಡೆದಿರುವ ಅಕ್ರಮಗಳನ್ನು ವಿವರಿಸಿದರು.

ಕೃಷಿ ಪತ್ತಿನ ಸಹಕಾರ ಸಂಘ ಮಾತ್ರವಲ್ಲ ಹಲವು ಸಂಘ ಸಂಸ್ಥೆಗಳಲ್ಲಿ ಹಣ ದುರ್ಬಳಕೆ ಆಗುತ್ತಿದೆ. ಹೀಗಾಗಿ ತಾಲೂಕಿನ ಎಲ್ಲಾ ಸಹಕಾರ ಸಂಘಗಳ ಹಣಕಾಸು ವಹಿವಾಟನ್ನು ತನಿಖೆ ಮಾಡಿ ವರದಿ ನೀಡುವಂತೆ ಡಿಆರ್ ಮತ್ತು ಅಆರ್ ಅವರಿಗೆ ಸೂಚಿಸಲಾಗಿದೆ ಎಂದರು.

ಆಡಳಿತ ಮಂಡಳಿ ನಿರ್ದೇಶಕರು ಮತ್ತು ನೌಕರರ ವರ್ಗ ಸಾರ್ವಜನಿಕರ ಹಣವನ್ನು ತಮ್ಮ ಮನೆಯ ಹಣದಂತೆ ಬಳಸಿಕೊಳ್ಳುವುದು ಬಿಡಬೇಕು. ಸಹಕಾರ ಕ್ಷೇತ್ರ ಉಳಿದರೆ ಮಾತ್ರ ಜನರಿಗೆ ಆರ್ಥಿಕ ಬಲ ತುಂಬಲು ಸಾಧ್ಯ. ರಾಜಕೀಯ ಬದಿಗಿಟ್ಟು ಸಂಸ್ಥೆಗಳನ್ನು ಉಳಿಸುವ ಕೆಲಸ ಮಾಡಬೇಕಿದೆ. ಕಸಬಾ ಸೊಸೈಟಿಯಲ್ಲಿ ದುರ್ಬಳಕೆಯಾಗಿರುವ ಹಣ ವಸೂಲಾತಿ ಜತೆಗೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ನಿವೇಶನಗಳ ಅಕ್ರಮ ಕಬಳಿಕೆ: ಸಿಒಡಿ ತನಿಖೆ

ಪುರಸಭೆ ವ್ಯಾಪ್ತಿಯಲ್ಲಿ ಹಂಚಿಕೆಯಾಗಿರುವ ನಿವೇಶನಗಳ ಅಕ್ರಮ ಕಬಳಿಕೆ ಮತ್ತು ಅವ್ಯವಹಾರಗಳನ್ನು ಸರ್ಕಾರ ಸಿಒಡಿ ತನಿಖೆಗೆ ಆದೇಶಿಸಿದೆ. ಅದರಂತೆ ಪೊಲಿಸರು ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದರು.

ಪಾಂಡವಪುರ ಪಟ್ಟಣ ವ್ಯಾಪ್ತಿಯಲ್ಲಿ 1976ರಿಂದ ಇಲ್ಲಿವರೆಗೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಪುರಸಭೆ ಆಡಳಿತ ಮಂಡಳಿ ಮತ್ತು ಆಶ್ರಯ ಸಮಿತಿ ಮೂಲಕ ಸುಮಾರು 2500ಕ್ಕೂ ಹೆಚ್ಚು ನಿವೇಶನ ವಿತರಿಸಲಾಗಿದೆ. ಇದರಲ್ಲಿ ಬಹುತೇಕ ನಿವೇಶನಗಳನ್ನು ಪ್ರಭಾವಿಗಳು ಅಕ್ರಮವಾಗಿ ಕಬಳಿಸಿದ್ದಾರೆ. ಒಂದೇ ನಿವೇಶನಕ್ಕೆ ಎರಡ್ಮೂರು ಹಕ್ಕುಪತ್ರ ವಿತರಿಸುವ ಮೂಲಕ ಮೂಲ ಫಲಾನುಭವಿಗಳನ್ನು ವಂಚಿಸಲಾಗಿದೆ. ಇದರಿಂದ ಸಾಕಷ್ಟು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಇಡೀ ಪ್ರಕರಣವನ್ನು ತನಿಖೆ ನಡೆಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿದೆ ಎಂದರು.

ಪಟ್ಟಣದಲ್ಲಿ ನಿವೇಶನ ಖರೀದಿಸುವ ಜನರು ದಾಖಲೆಗಳನ್ನು ಪರಿಶೀಲಿಸಿ ಎಚ್ಚರಿಕೆಯಿಂದ ಖರೀದಿಸಬೇಕು. ಜನರಿಗೆ ಅನ್ಯಾಯವಾಗಬಾರದು ಎಂಬ ದೃಷ್ಟಿಯಿಂದ ನಿವೇಶನ ನೋಂದಣಿಗೂ ಮುನ್ನ ಪುರಸಭೆಯಿಂದ ಎನ್‌ಒಸಿ ಪಡೆದುಕೊಳ್ಳುವಂತೆ ಸಬ್‌ರಿಜಿಸ್ಟರ್ ಅವರಿಗೆ ಸೂಚಿಸಲಾಗಿದೆ ಎಂದರು.

ನಿವೇಶನಗಳ ಅರ್ಹ ಫಲಾನುಭವಿಗಳು ನಿವೇಶನ ಕಳೆದುಕೊಂಡಿದ್ದರೆ ಅವರಿಗೆ ನಿವೇಶನವನ್ನು ಹಿಂದಿರುಗಿಸಲು ಕ್ರಮ ವಹಿಸಲಾಗುವುದು. ಸಿಒಡಿ ತನಿಖೆ ಬಳಿಕ ಇಡೀ ಪಟ್ಟಣವನ್ನು ಸರ್ವೇ ಮಾಡಿಸಿ ಮುಂದೆ ಅಕ್ರಮ ನಡೆಯದಂತೆ ತಡೆಗಟ್ಟಲಾಗುವುದು. ಅಕ್ರಮದಲ್ಲಿ ಭಾಗಿಯಾಗಿರುವ ತಪ್ಪಿತಸ್ಥರಿಗೆ ಕಾನೂನು ಕ್ರಮ ಖಚಿತ ಎಂದರು.

ತಾಲೂಕಿನಾದ್ಯಂತ ಕೆರೆ, ಕಟ್ಟೆ ಮತ್ತು ಹಳ್ಳಗಳನ್ನು ಒತ್ತುವರಿ ಮಾಡಿಕೊಂಡಿರುವವರು ತಾವಾಗಿಯೇ ಒತ್ತುವರಿ ತೆರವುಗೊಳಿಸಬೇಕು. ನಿಮಗಾಗಿ, ನಿಮ್ಮ ಮಕ್ಕಳ ಭವಿಷ್ಯಕ್ಕಾಗಿ ಅಂತರ್ಜಲ ಕಾಪಾಡಬೇಕಿದೆ. ಹೀಗಾಗಿ ಒತ್ತುವರಿ ತೆರವುಗೊಳಿಸಿ ಕೆರೆ-ಕಟ್ಟೆ ಉಳಿಸಿ ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲೂಕು ಅಧ್ಯಕ್ಷ ನಾಗರಾಜು, ಸರ್ವೋದಯ ಕರ್ನಾಟಕ ಪಕ್ಷದ ತಾಲೂಕು ಅಧ್ಯಕ್ಷ ಎಸ್.ದಯಾನಂದ್, ಮುಖಂಡರಾದ ಚಿಕ್ಕಾಡೆ ಸಿ.ಎನ್.ವಿಜೇಂದ್ರ, ಹರೀಶ್, ಉಮಾಶಂಕರ್ ಇತರರು ಇದ್ದರು.