ಸಾರಾಂಶ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ।
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ 44ನೇ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವವನ್ನು ಅಕ್ಟೋಬರ್ 5 ರಿಂದ 9 ರವರೆಗೆ ಚಿಕ್ಕಮಗಳೂರು ನಗರದಲ್ಲಿ ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದರು.ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ 44ನೇ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಐದು ದಿನಗಳ ಶಿಬಿರದಲ್ಲಿ 6 ರಿಂದ 10 ವರ್ಷ ವಯೋಮಾನದ ರಾಜ್ಯದ ವಿವಿಧ ಜಿಲ್ಲೆಗಳ ಸುಮಾರು 2 ಸಾವಿರ ಮಕ್ಕಳು ಭಾಗವಹಿಸುತ್ತಿದ್ದು, ಈ ಮಕ್ಕಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ಕೊಡಲಾಗುವುದು ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಕ್ಷರಿ ಮಾತನಾಡಿ, ಈ ಮೇಳದಲ್ಲಿ ಎಳೆಯರಿಗಾಗಿ ಸಾಹಸಮಯ ಚಟುವಟಿಕೆಗಳು, ಹೊರಸಂಚಾರ, ಶೈಕ್ಷಣೀಯ ಸ್ಥಳಗಳ ಸಂದರ್ಶನ, ಸಾಂಸ್ಕೃತಿಕ ಕಾರ್ಯಕ್ರಮ, ವಿವಿಧ ಜಿಲ್ಲೆಗಳ ವಿಶಿಷ್ಟ ಜಾನಪದ ಕಲೆಗಳು, ಕರಕುಶಲ ವಸ್ತುಗಳ ತಯಾರಿಕೆ, ಶಿಬಿರಾಗ್ನಿ, ಪ್ರಕೃತಿ ಅಧ್ಯಯನ ಮುಂತಾದ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ವಿವರಿಸಿದರು.ಜಿಲ್ಲೆಯಲ್ಲಿ 1920ರಲ್ಲಿ ಮೊದಲನೇ ರಾಜ್ಯ ಜಾಂಬೂರಿ ನಡೆಸಿದ ಹೆಗ್ಗಳಿಕೆ ಇದೆ. ಇದು 2ನೇ ರಾಜ್ಯ ಮಟ್ಟದ ಕಾರ್ಯಕ್ರಮವಾಗಿದ್ದು, ಎಲ್ಲಾ ಇಲಾಖೆ ಗಳ ಅಧಿಕಾರಿಗಳು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಮುಖ್ಯಸ್ಥರೊಂದಿಗೆ ಚರ್ಚಿಸಿ ಕಾರ್ಯಕ್ರಮದ ಸಿದ್ಧತೆಗೆ ಸಹಕಾರ ನೀಡುವಂತೆ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಚ್.ಎಸ್. ಕೀರ್ತನಾ, ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಉಪಾಧ್ಯಕ್ಷ ಎ.ಎನ್. ಮಹೇಶ್, ಜಿಲ್ಲಾ ಆಯುಕ್ತ ಟಿ.ಕೆ. ಫಣಿರಾಜ್, ಜಿಲ್ಲಾ ಆಯುಕ್ತೆ ಗೈಡ್ಸ್ ಡಿ.ಎಸ್. ಮಮತ, ಸಹಾಯಕ ಕಾರ್ಯದರ್ಶಿ ಎಲ್.ಟಿ. ಲೋಕೇಶ್, ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.19 ಕೆಸಿಕೆಎಂ 1ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ನಡೆಯಲಿರುವ ಕಬ್ಸ್ ಮತ್ತು ಬುಲ್ ಬುಲ್ಸ್ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಎಂ.ಎನ್. ಷಡಕ್ಷರಿ ಮಾತನಾಡಿದರು.