ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಭಾನುವಾರ ನಡೆಯಿತು.
ಅಜೆಕಾರು: ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಿರ್ಮಾಣಗೊಂಡ ಶಿಲಾಮಯ ದೇವಸ್ಥಾನದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ಧಾರ್ಮಿಕ ಸಭೆ ಭಾನುವಾರ ನಡೆಯಿತು.ಧಾರ್ಮಿಕ ಸಭೆಯಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ ಆಶೀರ್ವಚನ ನೀಡಿದರು. “ತಾನು ಬದುಕುವುದರ ಜೊತೆಗೆ ಇತರರನ್ನು ಬದುಕಲು ಬಿಡುವುದೇ ನಿಜವಾದ ಜೀವನದ ಸಾರವಾಗಿದೆ. ಸಹಾನುಭೂತಿ, ಸಹಿಷ್ಣುತೆ ಮತ್ತು ಪರಸ್ಪರ ಗೌರವ ಇವುಗಳು ಸಮಾಜವನ್ನು ಉತ್ತಮ ದಿಕ್ಕಿನತ್ತ ಕೊಂಡೊಯ್ಯುತ್ತವೆ. ಧರ್ಮ ಮಾರ್ಗದಲ್ಲಿ ನಡೆದು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ” ಎಂದು ಅವರು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ಸುನೀಲ್ ಕುಮಾರ್ ಮಾತನಾಡಿ, ಜ್ಞಾನಸುಧಾ ಶಿಕ್ಷಣ ಸಂಸ್ಥೆ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣ ಕ್ರಾಂತಿಯನ್ನುಂಟುಮಾಡಿದ ಸಂಸ್ಥೆಯಾಗಿದೆ. ಗುಣಮಟ್ಟದ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಸಂಸ್ಥೆಯ ಪಾತ್ರ ಶ್ಲಾಘನೀಯವಾಗಿದೆ. ಇಂತಹ ಶಿಕ್ಷಣ ಸಂಸ್ಥೆಗಳು ಸಮಾಜದ ಉನ್ನತಿಗೆ ಪೂರಕವಾಗಿವೆ ಎಂದರು.ಈ ಸಂದರ್ಭದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಮೋಹನ್ ಆಳ್ವ ಫಲಪುಷ್ಪ ಸಮರ್ಪಣೆ ನೆರವೇರಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಿವರಾಮ್ ಶೆಟ್ಟಿ, ಬಳ್ಳಾರಿ ಮರ್ಚೆಂಟ್ ಟ್ರಸ್ಟ್ ಅಧ್ಯಕ್ಷ ಎಂ.ಜಿ. ಗೌಡ್, ಉದ್ಯಮಿ ಮಹೇಶ್ ಶೆಟ್ಟಿ ಕುಡುಪುಲಾಜೆ, ಉದ್ಯಮಿ ಶಶಿಧರ್ ಶೆಟ್ಟಿ, ಜಗದೀಶ್ ಕಾರಂತ, ಕಮಲಾಕ್ಷ ನಾಯಕ್ ಹಾಗೂ ಡಾ. ಸಂತೋಷ್ ಕುಮಾರ್ ಶೆಟ್ಟಿ ಅಜೆಕಾರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಡಾ. ಸುಧಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾಮೋದರ ಶರ್ಮ ನಿರೂಪಿಸಿದರು.