ಪತ್ರಿಕೆ ಓದುವ ಹವ್ಯಾಸ ಬೆಳಿಸಿಕೊಳ್ಳಿ: ಮೋಹನ್‌ರಾವ್

| Published : Aug 07 2024, 01:04 AM IST

ಸಾರಾಂಶ

ಭದ್ರಾವತಿಯಲ್ಲಿ ಮಂಗಳವಾರ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಪತ್ರಿಕಾದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಪ್ರಾಂಶುಪಾಲ ಮೋಹನ್‌ರಾವ್ ಕಾರ್ಯಕ್ರಮ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ವಿದ್ಯಾರ್ಥಿಗಳು ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಇದು ಹೆಚ್ಚಿನ ಜ್ಞಾನಾರ್ಜನೆಗೆ ಸಹಕಾರಿಯಾಗಲಿದೆ ಎಂದು ನಗರದ ತರೀಕೆರೆ ರಸ್ತೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮೋಹನ್‌ ರಾವ್ ಹೇಳಿದರು.

ಅವರು ಮಂಗಳವಾರ ಕಾಲೇಜಿನಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ತಂತ್ರಜ್ಞಾನ ಬಹಳಷ್ಟು ಮುಂದುವರೆದಿದ್ದು, ಆದರೆ ನಮಗೆ ಅಗತ್ಯವಿರುವ ಜ್ಞಾನಾರ್ಜನೆ ಲಭಿಸುತ್ತಿಲ್ಲ. ವಿದ್ಯಾರ್ಥಿಗಳು ಓದುವಿನ ಮೂಲಕ ಹೆಚ್ಚಿನ ಜ್ಞಾನಾರ್ಜನೆ ಬೆಳೆಸಿಕೊಳ್ಳಬೇಕು. ಪತ್ರಿಕೆಗಳ ಮಹತ್ವ ನಾವೆಲ್ಲರೂ ಸರಿಯಾಗಿ ಅರ್ಥಮಾಡಿಕೊಳ್ಳಬೇಕು. ಪುಸ್ತಕದ ಓದುವಿನ ಜೊತೆಗೆ ಪತ್ರಿಕೆಗಳಲ್ಲಿನ ವಿಚಾರಗಳನ್ನು ಸಹ ತಿಳಿದುಕೊಳ್ಳಬೇಕೆಂದರು.

ಪತ್ರಿಕಾಭವನ ಟ್ರಸ್ಟ್ ಅಧ್ಯಕ್ಷ ಹಿರಿಯ ಪತ್ರಕರ್ತ ಕಣ್ಣಪ್ಪ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಅಥವಾ ಗ್ರಂಥಾಲಯಗಳಲ್ಲಿ ಪತ್ರಿಕೆಗಳನ್ನು ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ಓದುವ ಅಭ್ಯಾಸ ಕಡಿಮೆಯಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಸಮಾಜದಲ್ಲಿನ ಪ್ರತಿದಿನದ ವಿಚಾರಗಳನ್ನು ತಿಳಿದುಕೊಂಡು ತಮ್ಮಲ್ಲಿನ ಜ್ಞಾನದ ಮಟ್ಟದ ಮತ್ತಷ್ಟು ವೃದ್ಧಿಸಿಕೊಳ್ಳಬೇಕೆಂದರು.

ಸಂಘದ ಅಧ್ಯಕ್ಷ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಉಪನ್ಯಾಸಕ ಪ್ರಕಾಶ್, ಹಿರಿಯ ಪತ್ರಿಕರ್ತರಾದ ಶಿವಶಂಕರ್, ಗಂಗಾನಾಯ್ಕ ಗೊಂದಿ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಸಹಕಾರ್ಯದರ್ಶಿ ಫಿಲೋಮಿನಾ ಅವರ ಸುಮಾರು ೨೫ ವರ್ಷಗಳ ವೃತ್ತಿ ಸೇವೆಯನ್ನು ಪರಿಗಣಿಸಿ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಪ್ರಧಾನ ಕಾರ್ಯದರ್ಶಿ ಬಸವರಾಜ್ ಸ್ವಾಗತಿಸಿ, ಕಾಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.

ಪತ್ರಕರ್ತರಾದ ರವೀಂದ್ರನಾಥ್(ಬ್ರದರ್), ಟಿ.ಎಸ್ ಆನಂದಕುಮಾರ್, ಶೈಲೇಶ್ ಕೋಠಿ, ಸುದರ್ಶನ್, ಸಯೀದ್ ಖಾನ್, ಅನಂತಕುಮಾರ್, ಕಿರಣ್, ಕೆ.ಆರ್ ಶಂಕರ್, ಟಿ.ಎಸ್ ಸಂತೋಷ್ ಕುಮಾರ್ ಹಾಗು ಕಾಲೇಜಿನ ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.