ಕನ್ನಡಪ್ರಭ ವಾರ್ತೆ ವಿಜಯಪುರ
ಸೈಕಲ್ ಸವಾರಿಯಿಂದ ಯುವಜನರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು. ಜೊತೆಗೆ ಪರಿಸರ ಸಂರಕ್ಷಣೆ ಮತ್ತು ಇಂಧನ ಉಳಿತಾಯಕ್ಕೆ ಸೈಕಲ್ ಬಳಕೆ ಮಹತ್ವದ ಕೊಡುಗೆ ನೀಡುವುದರಿಂದ ಅದು ಸುಸ್ಥಿರ ಅಭಿವೃದ್ಧಿಗೆ ದಾರಿಯಾಗುತ್ತದೆ ಎಂದು ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.ನಗರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಸಂಘದ ಮಾರ್ಗಸೂಚಿಯಂತೆ ಹಾಗೂ ಪ್ರತಿ ರವಿವಾರ ಸೈಕಲ್ನೊಂದಿಗೆ ಎಂಬ ಧ್ಯೇಯದಡಿ ಇತ್ತೀಚಿಗೆ ಹಮ್ಮಿಕೊಂಡಿದ್ದ ವಿಶ್ವ ಸೈಕಲ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ಹೆಚ್ಚಿನ ಪ್ರಮಾಣದಲ್ಲಿ ಸೈಕಲ್ ಬಳಕೆ ಮಾಡುವಂತಾಗಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸೈಕಲ್ ಬಳಕೆಯಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದರ ಜೊತೆಗೆ ಆರೋಗ್ಯಕರ ಜೀವನಶೈಲಿ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಯುವ ಪೀಳಿಗೆ ಸೈಕಲ್ ಸವಾರಿಯನ್ನು ದಿನನಿತ್ಯದ ಜೀವನದ ಭಾಗವನ್ನಾಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಏಕಲವ್ಯ ಪ್ರಶಸ್ತಿ ಪುರಸ್ಕೃತೆ, ಸೈಕ್ಲಿಸ್ಟ್ ಡಾ.ಸವಿತಾ ಅಣ್ಣೆಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸೈಕಲ್ ಬಳಕೆ ಕಡಿಮೆಯಾಗುತ್ತಿರುವುದರಿಂದ ಇಂಧನದ ಮೇಲಿನ ಅವಲಂಬನೆ ಹೆಚ್ಚುತ್ತಿದ್ದು, ಆರೋಗ್ಯ ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಸೈಕಲ್ ಬಳಕೆಯಿಂದ ದೇಹ ಮತ್ತು ಮನಸ್ಸಿಗೆ ಉತ್ತಮ ವ್ಯಾಯಾಮ ದೊರೆಯುತ್ತದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ವಿವಿಯ ಕ್ರೀಡಾ ನಿರ್ದೇಶಕ ಪ್ರೊ.ಹನುಮಂತಯ್ಯ ಪೂಜಾರಿ, ಸಹಾಯಕ ನಿರ್ದೇಶಕ ಡಾ.ವಿಶ್ವನಾಥ ನಡಕಟ್ಟಿ, ಡಾ.ರಾಜಕುಮಾರ ಮಾಲಿಪಾಟೀಲ, ಡಾ.ಶ್ರೀನಿವಾಸ, ಡಾ.ಜ್ಯೋತಿ ಉಪಾದ್ಯ, ಡಾ.ಜ್ಯೋತಿ ಅವಟಿ ಸೇರಿದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.