ದ.ಕ. ಸಹಕಾರಿ ನೌಕರರ ಸಹಕಾರ ಸಂಘ 95.32 ಲಕ್ಷ ರು. ಲಾಭ, ಶೇ.20 ಲಾಭಾಂಶ

| Published : Sep 14 2025, 01:05 AM IST

ಸಾರಾಂಶ

ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜದ ಬಳಿಯ ಸಂಘದ ಪ್ರಧಾನ ಕಚೇರಿಯ ಸಪ್ತವರ್ಣ ಸಭಾಂಗಣದಲ್ಲಿ 94ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘ 2024-25ನೇ ಸಾಲಿನಲ್ಲಿ 95.32 ಲಕ್ಷ ರು. ಲಾಭ ಗಳಿಸಿ, ತನ್ನ ಸದಸ್ಯರಿಗೆ ಶೇ.20 ಡಿವಿಡೆಂಡ್ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ಎಸ್. ಜಗದೀಶ್ಚಂದ್ರ ಅಂಚನ್ ತಿಳಿಸಿದ್ದಾರೆ.ನಗರದ ಕೊಡಿಯಾಲ್ ಬೈಲ್ ಪಿವಿಎಸ್ ಕಲಾಕುಂಜದ ಬಳಿಯ ಸಂಘದ ಪ್ರಧಾನ ಕಚೇರಿಯ ಸಪ್ತವರ್ಣ ಸಭಾಂಗಣದಲ್ಲಿ ಶನಿವಾರ ನಡೆದ 94ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಕಾರ ಸಂಘಗಳ ನೌಕರ ಸದಸ್ಯರುಗಳಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಹಾಗೂ ಠೇವಣಿಗಳಿಗೆ ಆಕರ್ಷಕ ಬಡ್ಡಿಯನ್ನು ನೀಡಿಯೂ ಸಂಘವು ವರದಿ ವರ್ಷದಲ್ಲಿ ಅತ್ಯಧಿಕ ಲಾಭವನ್ನು ಗಳಿಸಿದೆ. ಸಂಘ 1,140 ಮಂದಿ ಸದಸ್ಯರನ್ನು ಹೊಂದಿದೆ. ವರದಿ ವರ್ಷದಲ್ಲಿ ಸಂಘ 34.02 ಲಕ್ಷ ರು. ಪಾಲು ಬಂಡವಾಳ ಹೊಂದಿದ್ದು, 5.54 ಕೋಟಿ ರು. ವಿವಿಧ ನಿಧಿಗಳನ್ನು ಹೊಂದಿದೆ.

ಕಳೆದ ವರ್ಷಾಂತ್ಯಕ್ಕೆ ಠೇವಣಿ 88.96 ಕೋಟಿ ರು.ನಿಂದ ವರದಿ ವರ್ಷದಲ್ಲಿ 94.33 ಕೋಟಿ ರು.ಗೆ ಏರಿಕೆಯಾಗಿದೆ. ಸಾಲ ಮುಂಗಡದಲ್ಲೂ ಏರಿಕೆಯಾಗಿದ್ದು 74.64 ಕೋಟಿ ರು.ನಿಂದ 82.90 ಕೋಟಿ ರು.ಗೆ ಹೆಚ್ಚಳವಾಗಿದೆ. ಸಂಘದ ಒಟ್ಟು ವ್ಯವಹಾರವೂ ಕೂಡ 163.60 ಕೋಟಿ ರು.ನಿಂದ 177.23 ಕೋಟಿ ರು.ಗೆ ಏರಿಕೆಯಾಗಿದೆ ಎಂದರು.

ವ್ಯವಹಾರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಂಘವು ಈಗಾಗಲೇ ನಾಲ್ಕು ಶಾಖೆಗಳನ್ನು ಹೊಂದಿದೆ. ಈ ಪೈಕಿ ಮಂಗಳೂರುನಲ್ಲಿ ಎರಡು, ಉಡುಪಿ ಹಾಗೂ ಪುತ್ತೂರಿನಲ್ಲಿ ತಲಾ ಒಂದು ಶಾಖೆ ಕಾರ್ಯ ನಿರ್ವಹಿಸುತ್ತಿದೆ. ಮುಂದೆ ತಾಲೂಕುವಾರು ಶಾಖೆಗಳನ್ನು ತೆರೆಯಲು ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.ಸತತ 8ನೇ ಬಾರಿ ಪ್ರಶಸ್ತಿ: ಸಂಘದ ಪ್ರಗತಿಯನ್ನು ಗುರುತಿಸಿ ಎಸ್ ಸಿಡಿಸಿಸಿ ಬ್ಯಾಂಕ್ ಕಳೆದ 7 ವರ್ಷಗಳಿಂದ ( 2017ರಿಂದ 2024ರ ವರೆಗೆ) ಸಾಧನಾ ಪ್ರಶಸ್ತಿಯನ್ನು ನೀಡುತ್ತಿದೆ. 2024-25ನೇ ಸಾಲಿನಲ್ಲೂ ಸಂಘ ಎಸ್‌ಸಿಡಿಸಿಸಿ ಬ್ಯಾಂಕಿನ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ. ಈ ಪ್ರತಿಷ್ಠಿತ ಪ್ರಶಸ್ತಿ ಸತತ 8ನೇ ಬಾರಿ ಪಡೆದ ಹೆಗ್ಗಳಿಕೆಗೆ ಸಂಘ ಪಾತ್ರವಾಗಿದೆ. ಸಂಘ ನಿರಂತರವಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯಲು ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ಸಹಕಾರ ರಂಗದ ಅಗ್ರಗಣ್ಯ ನಾಯಕರಾದ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಮುಖ್ಯ ಕಾರಣಕರ್ತರಾಗಿದ್ದಾರೆ ಎಂದರು.

ಸಂಘದ ಉಪಾಧ್ಯಕ್ಷರಾದ ರಾಘವ ಆರ್ ಉಚ್ಚಿಲ್, ನಿರ್ದೇಶಕರುಗಳಾದ ದಿವಾಕರ ಶೆಟ್ಟಿ ಕೆ, ವಿಶ್ವೇಶ್ವರ ಐತಾಳ್ , ಜಯಪ್ರಕಾಶ್ ರೈ ಸಿ, ಗಿರಿಧರ್ ಕೆ, ವಿಶ್ವನಾಥ ಕೆ. ಟಿ, ಶಿವಾನಂದ ಪಿ, ಚಂದ್ರಕಲಾ ಕೆ., ಮೋಹನ್, ವಿಶ್ವನಾಥ್ ಎನ್. ಅಮೀನ್, ಗೀತಾಕ್ಷಿ , ಕಿರಣ್ ಕುಮಾರ್ ಶೆಟ್ಟಿ, ನಿಶಿತಾ ಜಯರಾಮ್, ಪ್ರೇಮ್‌ರಾಜ್‌ ಭಂಡಾರಿ ಇದ್ದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಪೂಜಾರಿ ಸ್ವಾಗತಿಸಿದರು. ಸಂಘದ 2024-25ನೇ ಸಾಲಿನ ವಾರ್ಷಿಕ ವರದಿ, ಲೆಕ್ಕ ಪತ್ರವನ್ನು ಮಂಡಿಸಿದರು. ಉಪಾಧ್ಯಕ್ಷ ರಾಘವ ಆರ್. ಉಚ್ಚಿಲ್ ವಂದಿಸಿದರು.

-------------